ಬೆಂಗಳೂರು: ನವೆಂಬರ್ 6 ರಂದು ರಾಜ್ಯದಲ್ಲಿ ನಡೆಯುವ ʼಸರ್ವೋದಯ ಸಮಾವೇಶಕ್ಕೆʼಅಖಿಲ ಭಾರತ ಕಾಂಗ್ರೆಸ್ ಸಮಿತಿಯ (ಎಐಸಿಸಿ) ನೂತನ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ಆಗಮಿಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ
ಈ ಕುರಿತು ಮಾಹಿತಿ ನೀಡಿರುವ ಅವರು, ಎಐಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದನಂತರ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಕ್ಕೆ ಮೊದಲ ಬಾರಿಗೆ ಆಗಮಿಸುತ್ತಿದ್ದಾರೆ. ಅವರು ದೇಶದಲ್ಲಿ ಬೇರೆ ರಾಜ್ಯಗಳಿಗೆ ಪ್ರವಾಸ ಹೋಗುವ ಮುನ್ನ ನಮ್ಮ ರಾಜ್ಯಕ್ಕೆ ಆಗಮಿಸಬೇಕು ಎಂದು ಬಯಸಿದ್ದಾರೆ. ಹೀಗಾಗಿ ಕಾಂಗ್ರೆಸ್ ನಾಯಕರು ಚರ್ಚೆ ಮಾಡಿ ನವೆಂಬರ್ 6 ರಂದು ರಾಜ್ಯಕ್ಕೆ ಆಗಮಿಸುವಂತೆ ಮನವಿ ಮಾಡಿದ್ದೇವೆ ಎಂದು ತಿಳಿಸಿದರು.
ಮಲ್ಲಿಕಾರ್ಜುನ ಖರ್ಗೆಯವರು, ನವೆಂಬರ್ 6 ರಂದು ಬೆಳಗ್ಗೆ 10.50ಕ್ಕೆ ಆಗಮಿಸುತ್ತಾರೆ ಎಂದು ಅವರ ಕಚೇರಿ ಮಾಹಿತಿ ನೀಡಿದೆ. ನಂತರ ಮಧ್ಯಾಹ್ನ 2.35ಕ್ಕೆ ಅರಮನೆ ಮೈದಾನದಲ್ಲಿ ‘ಸರ್ವೋದಯ ಸಮಾವೇಶʼ ಹಮ್ಮಿಕೊಂಡಿದ್ದು, ಅವರಿಗೆ ಸಾವಿರಾರು ಮಂದಿ ಕಾರ್ಯಕರ್ತರು, ನಾಯಕರು ಸ್ವಾಗತ ಮಾಡಲಿದ್ದಾರೆ ಎಂದರು.
ರಾಜ್ಯದ ವಿವಿಧ ಮೂಲೆಯಿಂದ ಜನ ಆಗಮಿಸುವ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಮಧ್ಯಾಹ್ನ ಹಮ್ಮಿಕೊಂಡಿದ್ದೇವೆ. ರಾಜ್ಯದ ಎಲ್ಲ ನಾಯಕರು, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಎರಡು ದಿನ ಮುಂಚಿತವಾಗಿ ಆಗಮಿಸಲಿದ್ದಾರೆ. ನಂತರ ರಾಜ್ಯದ ವಿವಿಧ ನಾಯಕರ ಜತೆ ಒಂದು ವಾರ ಸಭೆ ನಡೆಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಖರ್ಗೆ ಅವರು 1972ರಲ್ಲಿ ವಿಧಾನಸಭೆಗೆ ಪ್ರವೇಶಿಸಿದ್ದು, 50 ವರ್ಷಗಳ ಸುದೀರ್ಘ ಸೇವೆ ಮಾಡಿದ್ದಾರೆ. ಇಂತಹ ಹಿರಿಯ ನಾಯಕರು ನಮ್ಮ ರಾಜ್ಯದಿಂದ ಈ ಸ್ಥಾನಕ್ಕೆ ಆಯ್ಕೆ ಆಗಿರುವುದು ನಮ್ಮ ಹೆಮ್ಮೆ. ಹೀಗಾಗಿ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲು ಮುಂದಾಗಿದ್ದೇವೆ. ಪಕ್ಷ ಮಾತ್ರವಲ್ಲದೆ ಹಲವು ಸಂಘಟನೆಗಳು ಕೂಡ ಸ್ವಾಗತ ಕಾರ್ಯಕ್ರಮಕ್ಕೆ ಬೆಂಬಲ ನೀಡಿದ್ದಾರೆ. ಈ ಸರ್ವೋದಯ ಸಮಾವೇಶಕ್ಕೆ ಪ್ರತಿ ಗ್ರಾಮ ಪಂಚಾಯ್ತಿಯಿಂದ, ವಾರ್ಡ್ ಚುನಾವಣೆಯಲ್ಲಿ ಗೆದ್ದವರು, ಸೋತವರು ಎಲ್ಲರೂ ಆಗಮಿಸಬೇಕು. ಯುವ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್, ಕಿಸಾನ್ ಘಟಕ, ಅಲ್ಪ ಸಂಖ್ಯಾತರು, ಹಿಂದುಳಿದ ವರ್ಗದವರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಘಟಕ ಸೇರಿದಂತೆ ನಾನಾ ಘಟಕಗಳ ಮುಖಂಡರು ಈ ಕಾರ್ಯಕ್ರಮಕ್ಕೆ ಆಗಮಿಸಬೇಕು ಎಂದು ಮನವಿ ಮಾಡಿಕೊಂಡರು.
ಖರ್ಗೆ ಅವರ ಮಾರ್ಗದರ್ಶನದ ಮಾತು, ಸಂದೇಶವನ್ನು ಹಳ್ಳಿ ಹಳ್ಳಿಗೆ ಕೊಂಡೊಯ್ಯಬೇಕು. ಈ ಹಿನ್ನಲೆಯಲ್ಲಿ ಜಿಲ್ಲಾ, ತಾಲೂಕು, ರಾಜ್ಯ ಮಟ್ಟದ ಕಾರ್ಯಕರ್ತರು ಮಾಧ್ಯಮಗಳಲ್ಲಿ ಜಾಹೀರಾತು ನೀಡಲು ನಾವು ಮುಕ್ತ ಅವಕಾಶ ನೀಡುತ್ತಿದ್ದೇವೆ ಎಂದರು.
ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳಿಗೆ ಅರ್ಜಿ ಆಹ್ವಾನ
ಈ ಕುರಿತು ಮಾಹಿತಿ ನೀಡಿರುವ ಡಿಕೆಶಿಯವರು, ಕಾಂಗ್ರೆಸ್ ಪಕ್ಷ ಮುಂದಿನ ಚುನಾವಣೆಗೆ ಸಜ್ಜಾಗುತ್ತಿದೆ. ಹೀಗಾಗಿ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಬಯಸಿರುವವರು ಅರ್ಜಿ ಹಾಕಲು ಅವಕಾಶ ಕಲ್ಪಿಸಲಾಗಿದೆ. ನವೆಂಬರ್ 5 ರಿಂದ 15 ರವರೆಗೆ ಅರ್ಜಿ ಹಾಕಬಹುದು. ಅರ್ಜಿಗೆ 5 ಸಾವಿರ ರು. ಶುಲ್ಕ ನಿಗದಿಪಡಿಸಲಾಗಿದ್ದು, ಅರ್ಜಿ ಸಲ್ಲಿಸುವಾಗ ಸಾಮಾನ್ಯ ವರ್ಗದವರು 2 ಲಕ್ಷ ರು ಡಿಡಿ, ಕಾಂಗ್ರೆಸ್ ಸದಸ್ಯತ್ವ ವಿವರ ಲಗತ್ತಿಸಬೇಕು. ಪರಿಶಿಷ್ಟ ವರ್ಗದವರಿಗೆ ಶೇ. 50 ರಷ್ಟು ವಿನಾಯಿತಿ ನೀಡಲಾಗಿದೆ. ಈ ಹಣ ಪಕ್ಷದ ಕಟ್ಟಡ ಕಾಮಗಾರಿ ನಿಧಿಗೆ ಜಮೆ ಆಗಲಿದೆ ಎಂದರು.
2023 ರ ಚುನಾವಣೆಯಲ್ಲಿ ಹಾಲಿ ಶಾಸಕರ ಸಮೇತ ಟಿಕೆಟ್ ಆಕಾಂಕ್ಷಿಗಳು ಅರ್ಜಿ ಸಲ್ಲಿಸಬಹುದು. ನಾನು ಕೂಡ ಚುನಾವಣೆಯಲ್ಲಿ ಸ್ಪರ್ಧಿಸಲು ಈ ಅರ್ಜಿ ಹಾಕಬೇಕು. ಇಲ್ಲಿ ವ್ಯಕ್ತಿಗಿಂತ ಪಕ್ಷ ಮುಖ್ಯ ಎಂದರು ಹೇಳಿದರು.
ಮತ್ತೆ ಸದಸ್ಯತ್ವ ನೋಂದಣಿ ಆರಂಭ
ಹಲವು ಮಂದಿ ಕಾಂಗ್ರೆಸ್ ಸದಸ್ಯತ್ವ ಪಡೆಯಲು ಉತ್ಸುಕರಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಆನ್ ಲೈನ್ ಮೂಲಕ ನೋಂದಣಿ ಆರಂಭಿಸಿದೆ. ಕೆಲವು ನಾಯಕರು ಕಾಂಗ್ರೆಸ್ ಸೇರಲು ಬಯಸಿದ್ದು, ನನ್ನ ಸಂಪರ್ಕದಲ್ಲಿದ್ದಾರೆ. ಅವರ ಹೆಸರನ್ನು ಈಗ ಬಹಿರಂಗ ಪಡಿಸುವುದಿಲ್ಲ. ಕಾಂಗ್ರೆಸ್ ಪಕ್ಷದ ಸಿದ್ಧಾಂತ, ಮಲ್ಲಿಕಾರ್ಜುನ್ ಖರ್ಗೆ, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ನಾಯಕತ್ವ ಒಪ್ಪಿ, ಬೇಷರತ್ತಾಗಿ ಪಕ್ಷ ಸೇರಲು ಬಯಸುವವರು ಅರ್ಜಿ ಹಾಕಬಹುದು. ಅವರಿಗೆ ಮುಕ್ತ ಅವಕಾಶ ನೀಡಲಾಗಿದೆ. ಅರ್ಜಿ ಹಾಕಿದ ನಂತರ ಅಲ್ಲಂ ವೀರಭದ್ರಪ್ಪ ಅವರ ನೇತೃತ್ವದ ಸಮಿತಿ ಯಾರನ್ನು ಸೇರಿಸಿಕೊಳ್ಳಬೇಕು ಎಂದು ತೀರ್ಮಾನಿಸಲಿದೆ ಎಂದರು.
ಈ ವೇಳೆ ಪಕ್ಷ ಬಿಟ್ಟು ಹೋದವರನ್ನು ಸೇರಿಸಿಕೊಳ್ಳುತ್ತೀರಾ ಎಂಬ ಮಾಧ್ಯಮದವರು ಪ್ರಶ್ನೆಗೆ ಉತ್ತರಿಸಿದ ಅವರು, ಈ ವಿಚಾರದಲ್ಲಿ ಮುಕ್ತ ಅವಕಾಶ ನೀಡಿದ್ದೇವೆ. ಅದಕ್ಕಾಗಿ ಒಂದು ಸಮಿತಿ ಇದೆ. ಪಕ್ಷದ ಸಿದ್ಧಾಂತ ಒಪ್ಪಿಕೊಳ್ಳುವ ಯಾರು ಬೇಕಾದರೂ ಅರ್ಜಿ ಹಾಕಬಹುದು. ನಾವು ಎಲ್ಲ ನಾಯಕರ ಜತೆ ಚರ್ಚೆ ಮಾಡಿ, ಪಕ್ಷದ ಅಧ್ಯಕ್ಷನಾಗಿ ಈ ವಿಚಾರ ತಿಳಿಸುತ್ತಿದ್ದೇನೆ. ಯಾರನ್ನು ಸೇರಿಸಿಕೊಳ್ಳಬೇಕು ಯಾರನ್ನು ಸೇರಿಸಿಕೊಳ್ಳಬಾರದು ಎಂಬ ನಿರ್ಧಾರವನ್ನು ಸಮಿತಿ ಕೈಗೊಳ್ಳಲಿದೆ ಎಂದರು.
ಪಕ್ಷದ ಟಿಕೆಟ್ ಗೆ ಹಣ ಯಾವ ಮಾನದಂಡದಲ್ಲಿ ನೀಡಬೇಕು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾವು ಪಕ್ಷದ ಕಟ್ಟಡ, ಪಕ್ಷದ ನಿಧಿ, ಚುನಾವಣಾ ಪ್ರಚಾರ, ಜಾಹೀರಾತು ನೀಡಲು ಹಣ ಬೇಕಿದೆ. ಹೀಗಾಗಿ ಯಾವುದೇ ಮಾನದಂಡವಿಲ್ಲ. ಪತ್ರಕರ್ತರಿಗೆ ಹಣ ನೀಡುವುದಿಲ್ಲ. ಮುಖಪುಟದ ಜಾಹೀರಾತು ನೀಡಲು ನಮ್ಮ ಬಳಿ ಸರ್ಕಾರ ಇಲ್ಲ. ಪಕ್ಷಕ್ಕೆ 20 ಸಾವಿರಕ್ಕಿಂತ ಹೆಚ್ಚಿನ ನಗದು ಪಡೆಯುವಂತಿಲ್ಲ. ನಮಗೆ ಯಾವುದೇ ಚುನಾವಣಾ ಬಾಂಡ್ ಬರುತ್ತಿಲ್ಲ. ಎಲ್ಲ ಬಿಜೆಪಿಗೆ ಹೋಗುತ್ತಿದೆ. ಹೀಗಾಗಿ ಕಾರ್ಯಕರ್ತರಾದರೂ ಪಕ್ಷಕ್ಕೆ ಹಣ ನೀಡಲಿ ಎಂದು ತಿಳಿಸಿದರು.
ಅರ್ಜಿ ಹಾಕಲು ವಯೋಮಿತಿ ಇದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಕೆಶಿಯವರು, ನಮ್ಮಲ್ಲಿ ವಯೋಮಿತಿ ಇಲ್ಲ. ನಮ್ಮಲ್ಲಿ ಮಾರ್ಗದರ್ಶಕ ಮಂಡಲಿ ಇಲ್ಲ. ನಾವು 92 ವರ್ಷದ ಶಾಮನೂರು ಶಿವಶಂಕರಪ್ಪ ಅವರನ್ನು ಇಟ್ಟುಕೊಂಡಿದ್ದೇವೆ. ಅವರು ಬೇರೆಯವರಿಗಿಂತ ಹೆಚ್ಚು ಓಡಾಡುತ್ತಿದ್ದಾರೆ. ಕ್ಷೇತ್ರದ ಎಲ್ಲ ಬೂತ್ ಗಳಿಗೂ ಭೇಟಿ ನೀಡುತ್ತಿದ್ದಾರೆ. ನಮ್ಮ ತಂದೆ ತಾಯಿಗಳನ್ನು ನಾವು ಮನೆಯಿಂದ ಆಚೆ ಹಾಕುವುದಿಲ್ಲ. ಅದಕ್ಕೆ ನಾನು ಅವಕಾಶ ನೀಡುವುದಿಲ್ಲ ಎಂದರು.