ಬೆಂಗಳೂರು: ರಾಜ್ಯದ 1.62 ಲಕ್ಷ ವಿದ್ಯಾರ್ಥಿಗಳು ಈ ವರ್ಷ ಸರ್ಕಾರಿ ಶಾಲೆಯನ್ನು ತ್ಯಜಿಸಿ ಖಾಸಗಿ ಶಾಲೆ ಸೇರಿರುವುದಕ್ಕೆ ರಾಜ್ಯ ಬಿಜೆಪಿ ಸರ್ಕಾರಕ್ಕೆ ಶಿಕ್ಷಣ ಕ್ಷೇತ್ರದ ಮೇಲಿರುವ ನಿರ್ಲಕ್ಷ್ಯ ಹಾಗೂ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ರವರ ಅಸಮರ್ಥತೆ ಕಾರಣ ಎಂದು ಆಮ್ ಆದ್ಮಿ ಪಾರ್ಟಿ ಬೆಂಗಳೂರು ಅಧ್ಯಕ್ಷ ಮೋಹನ್ ದಾಸರಿ ಆರೋಪಿಸಿದ್ದಾರೆ.
ಪಕ್ಷದ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಮೋಹನ್ ದಾಸರಿಯವರು, ʼಕೋವಿಡ್ನಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಲಕ್ಷಕ್ಕೂ ಅಧಿಕ ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಯಿಂದ ಬಿಡಿಸಿ, ಸರ್ಕಾರಿ ಶಾಲೆಗೆ ಸೇರಿಸಿದ್ದರು. ಆದರೆ ಈಗ ಸರ್ಕಾರಿ ಶಾಲೆಗಳ ದುಸ್ಥಿತಿಯಿಂದ ಬೇಸತ್ತು ಅವರು ತಮ್ಮ ಮಕ್ಕಳನ್ನು ಪುನಃ ಖಾಸಗಿ ಶಾಲೆಗೆ ಸೇರಿಸುತ್ತಿದ್ದಾರೆ. ಪರಿಣಾಮವಾಗಿ, ಒಂದರಿಂದ ಹತ್ತನೇ ತರಗತಿವರೆಗಿನ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳ ಸಂಖ್ಯೆ 1.62 ಲಕ್ಷ ಕುಸಿದಿದೆʼ ಎಂದು ಹೇಳಿದ್ದಾರೆ.
ʼಕರ್ನಾಟಕದಲ್ಲಿರುವ 47,585 ಸರ್ಕಾರಿ ಶಾಲೆಗಳ ಪೈಕಿ 6,529 ಶಾಲೆಗಳಲ್ಲಿ ಕೇವಲ ಒಬ್ಬರೇ ಶಿಕ್ಷಕರಿದ್ದಾರೆ. ಬಹುತೇಕ ಶಾಲೆಗಳಲ್ಲಿ ಮೂಲಸೌಕರ್ಯಗಳು ಹಾಗೂ ಶಿಕ್ಷಕರ ಕೊರತೆಯಿದೆ. ಶಾಲೆಗಳು ಹಾಗೂ ಕಾಲೇಜುಗಳಲ್ಲಿ ಕೋಮು ರಾಜಕೀಯಕ್ಕೆ ನೀಡುವ ಆದ್ಯತೆಯನ್ನು ಅಭಿವೃದ್ಧಿಗೆ ನೀಡದಿರುವುದು ದುರಂತ. ದೆಹಲಿಯ ಆಮ್ ಆದ್ಮಿ ಪಾರ್ಟಿ ಸರ್ಕಾರವು ಸರ್ಕಾರಿ ಶಾಲೆಗಳಲ್ಲಿ ವಿಶ್ವದರ್ಜೆಯ ಮೂಲಸೌಕರ್ಯಗಳನ್ನು ಅಳವಡಿಸಿದ್ದು, ಅಲ್ಲಿ ವಿದ್ಯಾರ್ಥಿಗಳ ಸಂಖ್ಯೆಯು ಗಣನೀಯವಾಗಿ ಏರಿಕೆಯಾಗುತ್ತಿದೆ. ಕರ್ನಾಟಕದಲ್ಲೂ ಅಂತಹ ಶೈಕ್ಷಣಿಕ ಕ್ರಾಂತಿಗಾಗಿ ಆಮ್ ಆದ್ಮಿ ಪಾರ್ಟಿ ಸರ್ಕಾರ ಅಧಿಕಾರಕ್ಕೆ ಬರಬೇಕುʼ ಎಂದು ಮೋಹನ್ ದಾಸರಿ ಹೇಳಿದ್ದಾರೆ.