ಚನ್ನರಾಯಪಟ್ಟಣ: ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದ ವತಿಯಿಂದ ಫೆ.18 ರಂದು ಪಟ್ಟಣದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಮಮತಾ ಶಿವು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 13 ವರ್ಷಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜಾಗೃತಿ ಸಮಾವೇಶಗಳನ್ನು ಆಯೋಜಿಸಿ ಮಹಿಳಾ ಹಕ್ಕುಗಳ ಪರ ಹೋರಾಟ ನಡೆಸಿ ಅರಿವು ಮೂಡಿಸಲಾಗುತ್ತಿದೆ ಎಂದರು. ಮಹಿಳಾ ಚಳವಳಿ, ಸಾಹಿತ್ಯ, ಶಿಕ್ಷಣ, ರಂಗಭೂಮಿ ಹಾಗೂ ಜಾನಪದ ಕ್ಷೇತ್ರದ ಪರಿಣಿತರಾದ ಸಂಪನ್ಮೂಲ ವ್ಯಕ್ತಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ತಡೆಯುವ ನಿಟ್ಟಿನಲ್ಲಿ ಮಹಿಳೆಯರು ಹೇಗೆ ಹೋರಾಟ ನಡೆಸಬೇಕು ಎಂಬ ವಿಚಾರಧಾರೆಯನ್ನು ಈ ಕಾರ್ಯಕ್ರಮದ ಮೂಲಕ ಸಮಾಜದ ಮುಂದೆ ಇರಿಸಲಾಗುವುದು ಎಂದು ತಿಳಿಸಿದರು.
‘ದೌರ್ಜನ್ಯ ಸಹಿಸುವುದಿಲ್ಲ ನ್ಯಾಯ ದೊರೆಯುವವರೆಗೂ ಹೋರಾಟ ನಿಲ್ಲುವುದಿಲ್ಲ’ ಎಂಬ ಧೈಯವಾಕ್ಯದಡಿ ಫೆ.18 ರಂದು ಗಣಪತಿ ಪೆಂಡಾಲ್ನಲ್ಲಿ ಮುಖ್ಯ ಕಾರ್ಯಕ್ರಮ ನಡೆಯಲಿದೆ. ಅದೇ ದಿನ ಸಂಜೆ 5 ಗಂಟೆಗೆ ಕೆ.ಆರ್ ವೃತ್ತದಲ್ಲಿ ‘ವಿಮೆನ್ ಇನ್ ಬ್ಲಾಕ್’ ಮೌನ ಜಾಗೃತಿ ನಡೆಯಲಿದೆ ಎಂದು ವಿವರಿಸಿದರು.
