ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರದೇಶದ ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಹದಗೆಟ್ಟಿರುವ ವಾರ್ಡ್ ರಸ್ತೆಗಳನ್ನು ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ₹2,000 ಕೋಟಿ ವಿಶೇಷ ಅನುದಾನವನ್ನು ಬಿಡುಗಡೆ ಮಾಡಿದೆ ಎಂದು ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ನಗರದ ಮೂಲಸೌಕರ್ಯ ಅಭಿವೃದ್ಧಿಗೆ ವೇಗ ನೀಡುವ ಉದ್ದೇಶದಿಂದ ಈ ಯೋಜನೆ ಜಾರಿಗೊಳ್ಳುತ್ತಿದ್ದು, ವಾರ್ಡ್ ಮಟ್ಟದ ರಸ್ತೆಗಳ ಸುಧಾರಣೆಗೆ ಆದ್ಯತೆ ನೀಡಲಾಗಿದೆ. ಪ್ರಮುಖ ರಸ್ತೆಗಳಾದ ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳನ್ನು ಹೊರತುಪಡಿಸಿ, ಜನಸಾಮಾನ್ಯರು ಪ್ರತಿದಿನ ಬಳಸುವ ಒಳರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಸಚಿವರು ಹೇಳಿದರು.
ಐದು ನಗರ ಪಾಲಿಕೆಗಳ ಆಯುಕ್ತರು ತಮ್ಮ ವ್ಯಾಪ್ತಿಯಲ್ಲಿರುವ ಹಾಳಾದ ರಸ್ತೆಗಳನ್ನು ಗುರುತಿಸಿ ಅಂದಾಜು ಪಟ್ಟಿ ಸಿದ್ಧಪಡಿಸಬೇಕು. ಬಳಿಕ ತ್ವರಿತ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕಾಮಗಾರಿಗಳನ್ನು ಆರಂಭಿಸುವಂತೆ ಸರ್ಕಾರ ನಿರ್ದೇಶನ ನೀಡಿದೆ. ಮುಂದಿನ ಎರಡು ತಿಂಗಳೊಳಗೆ ಟೆಂಡರ್ ಪ್ರಕ್ರಿಯೆ ಮುಗಿಸಿ, ನಾಲ್ಕರಿಂದ ಆರು ತಿಂಗಳ ಅವಧಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ.
ಮಳೆಗಾಲದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕಾಮಗಾರಿಗಳ ವೇಳಾಪಟ್ಟಿ ರೂಪಿಸಲಾಗುತ್ತಿದ್ದು, ಗುಣಮಟ್ಟಕ್ಕೆ ಯಾವುದೇ ಧಕ್ಕೆಯಾಗದಂತೆ ಕೆಲಸ ನಿರ್ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ರಸ್ತೆ ನಿರ್ಮಾಣ ಮತ್ತು ಡಾಂಬರೀಕರಣ ಸಂದರ್ಭದಲ್ಲಿ ವಿವಿಧ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸಲಾಗುವುದು. ರಸ್ತೆ ಅಭಿವೃದ್ಧಿಯ ನಂತರ ಪೂರ್ವಾನುಮತಿ ಇಲ್ಲದೆ ರಸ್ತೆ ಅಗೆಯುವ ಚಟುವಟಿಕೆಗಳ ಮೇಲೆ ಕಟ್ಟುನಿಟ್ಟಿನ ನಿಯಂತ್ರಣ ಹೇರಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು.
ರಸ್ತೆ ಕಾಮಗಾರಿಗಳ ಗುಣಮಟ್ಟವನ್ನು ಖಚಿತಪಡಿಸಿಕೊಳ್ಳಲು ಸ್ಥಳ ಪರಿಶೀಲನೆಗಳನ್ನು ನಡೆಸಲಾಗುವುದು. ಅಧಿಕಾರಿಗಳು ನಿಯಮಿತವಾಗಿ ಕಾಮಗಾರಿ ಪರಿಶೀಲಿಸಿ ನಿಗದಿತ ಅವಧಿಯೊಳಗೆ ಯೋಜನೆ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ. ಬೆಂಗಳೂರಿನ ರಸ್ತೆ ವ್ಯವಸ್ಥೆಯನ್ನು ಸುಧಾರಿಸಿ ಸಾರ್ವಜನಿಕರ ನಿರೀಕ್ಷೆಗೆ ತಕ್ಕ ಮೂಲಸೌಕರ್ಯ ಒದಗಿಸುವುದು ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಕೃಷ್ಣ ಬೈರೇಗೌಡ ಹೇಳಿದರು.
