ಚಿತ್ರದುರ್ಗ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಮೀಸಲಾತಿಯಲ್ಲಿ ಆಗುತ್ತಿರುವ ಅನ್ಯಾಯ ಖಂಡಿಸಿ ಬಿಜೆಪಿ ವತಿಯಿಂದ ಮಾರ್ಚ್ 22ರಿಂದ ಬೃಹತ್ ಪಾದಯಾತ್ರೆ ನಡೆಸಲು ನಿರ್ಧರಿಸಲಾಗಿದೆ. ನಗರದ ವಾಲ್ಮೀಕಿ ಸಮುದಾಯ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಬೃಹತ್ ಜನಾಂದೋಲನ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ಪ್ರಕಟಿಸಲಾಯಿತು.
‘ಮಾರ್ಚ್ 22 ರಂದು ಚಿತ್ರದುರ್ಗದಲ್ಲಿ ಆರಂಭವಾಗುವ ಪಾದಯಾತ್ರೆ 27ರಂದು ಬೆಂಗಳೂರು ತಲುಪಲಿದ್ದು, ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುತ್ತದೆ’ ಎಂದು ಹೋರಾಟದ ನೇತೃತ್ವ ವಹಿಸಿರುವ ಮಾಜಿ ಶಾಸಕ ಪಿ.ರಾಜೀವ್ ತಿಳಿಸಿದರು.
‘ಮೊದಲ ದಿನವೇ ಒಂದು ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಸರ್ಕಾರದ ಪ್ರತಿನಿಧಿಗಳು ಬಂದು ಎಸ್ಸಿ., ಎಸ್ಟಿ., ಸಮುದಾಯಗಳಿಗೆ ನ್ಯಾಯ ಒದಗಿಸುವ ಭರವಸೆ ನೀಡಬೇಕು. ಇಲ್ಲದಿದ್ದರೆ ಹೋರಾಟ ತೀವ್ರಗೊಳಿಸಲಾಗುತ್ತದೆ. ಬೆಂಗಳೂರು ತಲುಪಿದ ಬಳಿಕ ಹೋರಾಟದ ಸ್ವರೂಪ ಬದಲಾಗಲಿದೆ’ ಎಂದು ಎಚ್ಚರಿಸಿದರು.
‘ಬಿಜೆಪಿ ಸರ್ಕಾರವು ಎಸ್ಸಿ, ಎಸ್ಟಿ ಸಮುದಾಯದ ಹೋರಾಟಕ್ಕೆ ಮನ್ನಣೆ ನೀಡಿ ಮೀಸಲಾತಿ ಹೆಚ್ಚಿಸಿತ್ತು. ಆದರೆ ಕಾಂಗ್ರೆಸ್ ಸರ್ಕಾರ ನಮ್ಮ ಧ್ವನಿ ಹತ್ತಿಕ್ಕುತ್ತಿದೆ. ಮೀಸಲಾತಿ ಹೆಚ್ಚಳ ಅಂಬೇಡ್ಕರ್ ಅವರ ಕೊಡುಗೆಯೇ ಹೊರತು ಸಿದ್ದರಾಮಯ್ಯ ಅವರದ್ದಲ್ಲ’ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಕಿಡಿಕಾರಿದರು.
