Thursday, July 3, 2025

ಸತ್ಯ | ನ್ಯಾಯ |ಧರ್ಮ

ಹಾಸನ ಜಿಲ್ಲೆಯಲ್ಲಿ ಇಂದು 3 ಜನ ಹೃದಯಾಘಾತಕ್ಕೆ ಬಲಿ

ಹಾಸನ, ಜುಲೈ 3: ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವಿನ ಸರಣಿ ಮುಂದುವರಿದಿದೆ. ಕಳೆದ ಒಂದೂವರೆ ತಿಂಗಳಲ್ಲಿ ಜಿಲ್ಲೆಯಾದ್ಯಂತ 30 ಮಂದಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಇಂದು ವರದಿಯಾಗಿರುವ ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಸಾವನ್ನಪ್ಪಿದ್ದು, ಈ ಘಟನೆಗಳು ಜಿಲ್ಲೆಯಲ್ಲಿ ಆತಂಕವನ್ನುಂಟುಮಾಡಿವೆ.

 ಗ್ರಾಮ ಪಂಚಾಯಿತಿ ಸದಸ್ಯನಿಗೆ ಹೃದಯಾಘಾತ
ಆಲೂರು ತಾಲ್ಲೂಕಿನ ಕಲ್ಲಾರೆ ಗ್ರಾಮದ ಕಾರಗೋಡು ಗ್ರಾಮ ಪಂಚಾಯಿತಿಯ ಸದಸ್ಯ ಸಂತೋಷ್ (41) ರಾತ್ರಿ ಮಲಗಿದ್ದ ವೇಳೆ ದಿಢೀರ್ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ. ಬೆಳಿಗ್ಗೆ ಕುಟುಂಬಸ್ಥರು ಎಚ್ಚರಗೊಂಡಾಗ ಸಂತೋಷ್ ಅವರ ದೇಹದಲ್ಲಿ ಚಲನೆ ಇಲ್ಲದಿರುವುದು ಕಂಡುಬಂದಿದೆ. ಕೂಡಲೇ ಅವರನ್ನು ಹಾಸನದ ಖಾಸಗಿ ಆಸ್ಪತ್ರೆಗೆ ಕರೆತರಲಾಯಿತಾದರೂ, ಅಷ್ಟರಲ್ಲಿ ಅವರು ಮೃತಪಟ್ಟಿದ್ದರು.

 ಹಾಸನ ನಗರದಲ್ಲಿ ಒಂದು ಸಾವು
ಹಾಸನ ನಗರದ ಕರಿಗೌಡ ಕಾಲೋನಿಯ ಸಂಪತ್‌ಕುಮಾರ್ (53) ಕೂಡ ಹೃದಯಾಘಾತದಿಂದ ಕಳೆದ ರಾತ್ರಿ ಸಾವನ್ನಪ್ಪಿದ್ದಾರೆ. ದಿಢೀರ್ ಎದೆನೋವು ಕಾಣಿಸಿಕೊಂಡ ಕಾರಣ ಕುಟುಂಬಸ್ಥರು ಅವರನ್ನು ಹಿಮ್ಸ್ ಆಸ್ಪತ್ರೆಗೆ ಕರೆದೊಯ್ದರಾದರೂ, ಚಿಕಿತ್ಸೆ ಫಲಕಾರಿಯಾಗದೆ ಸಂಪತ್‌ಕುಮಾರ್ ಮೃತಪಟ್ಟಿದ್ದಾರೆ.

 ಸಕಲೇಶಪುರದಲ್ಲಿ ಮತ್ತೊಂದು ಘಟನೆ
ಸಕಲೇಶಪುರ ತಾಲ್ಲೂಕಿನ ಬೆಳಗೋಡು ಹೋಬಳಿಯ ಚಿಕ್ಕನಾಯಕನಹಳ್ಳಿ ಗ್ರಾಮದ ಸಿ.ಬಿ.ವಿರೂಪಾಕ್ಷ (70) ಕಳೆದ ರಾತ್ರಿ 11:30ರ ಸುಮಾರಿಗೆ ಎದೆನೋವಿನಿಂದ ಬಳಲಿದ್ದಾರೆ. ಕುಟುಂಬಸ್ಥರು ಕೂಡಲೇ ಅವರನ್ನು ಸಕಲೇಶಪುರದ ಕ್ರಾಫರ್ಡ್ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿ ವಿರೂಪಾಕ್ಷ ಸಾವನ್ನಪ್ಪಿದ್ದಾರೆ.

ಆತಂಕಕಾರಿ ಸ್ಥಿತಿ
ಹಾಸನ ಜಿಲ್ಲೆಯಲ್ಲಿ ಕಳೆದ ಒಂದೂವರೆ ತಿಂಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದವರ ಸಂಖ್ಯೆ 30ಕ್ಕೆ ಏರಿದೆ. ಈ ಘಟನೆಗಳು ಆರೋಗ್ಯ ತುರ್ತು ಪರಿಸ್ಥಿತಿಯ ಬಗ್ಗೆ ಗಂಭೀರ ಚಿಂತನೆಗೆ ಒಡ್ಡಿವೆ. ಸ್ಥಳೀಯ ಆರೋಗ್ಯ ಇಲಾಖೆಯಿಂದ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗದಿದ್ದರೂ, ಜನರಲ್ಲಿ ಆತಂಕ ಮನೆಮಾಡಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page