ಬೆಂಗಳೂರು : ಸದ್ಯ ರಾಜ್ಯದಲ್ಲಿ ಒಟ್ಟು 51 ಸಾವಿರ ಶಿಕ್ಷಕರ ಕೊರತೆ ಇದ್ದು, 32 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ತಿಳಿಸಿದ್ದಾರೆ.
13 ಸಾವಿರ ಶಿಕ್ಷಕರ ನೇಮಕ ಆಗಿದೆ
ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಈ ವಿಚಾರವಾಗಿ ಮಾತನಾಡಿದ ಅವರು, ರಾಜ್ಯದಲ್ಲಿ ಶೀಘ್ರದಲ್ಲಿ 32 ಸಾವಿರ ಶಿಕ್ಷಕರನ್ನು ನೇಮಕಾತಿ ಮಾಡುತ್ತಿದ್ದೇವೆ. ಈಗಾಗಲೇ 13 ಸಾವಿರ ಶಿಕ್ಷಕರನ್ನು ನೇಮಕ ಮಾಡಿ ಆಗಿದೆ. 51 ಸಾವಿರ ಶಿಕ್ಷಕರ ಕೊರತೆ ಇದೆ. ಅದನ್ನ ನಿಭಾಯಿಸಲು ಕ್ರಮ ತೆಗೆದುಕೊಳ್ಳಲಾಗಿದೆ. ಮುಖ್ಯವಾಗಿ ಕಾಯಂ ಶಿಕ್ಷಕರ ನೇಮಕ ಆರಂಭ ಮಾಡಲಾಗಿದೆ.
1ನೇ ತರಗತಿ ಮಕ್ಕಳಿಗೆ ಕಂಪ್ಯೂಟರ್ ಶಿಕ್ಷಣ
 ಅಲ್ಲದೇ, ಒಂದನೇ ತರಗತಿ ಮಕ್ಕಳಿಗೆ ಕಂಪ್ಯೂಟರ್ ತರಬೇತಿ ನೀಡುತ್ತೇವೆ ಎಂದು ಅವರು ಹೇಳಿದ್ದು, ಗ್ರಾಮೀಣ ಭಾಗದ ಮಕ್ಕಳಿಗೆ ವಿಶೇಷ ಅವಕಾಶ ಕೊಡುವ ಅಗತ್ಯ ಇದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇನ್ನು ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಸೌಲಭ್ಯದ ಕಾರಣದಿಂದ ಬಹಳ ಅನುಕೂಲ ಆಗಿದೆ. ನಮ್ಮ ಸರ್ಕಾರಿ ಶಾಲೆಗಳಲ್ಲಿ ಸಂಜೆ ವಿಶೇಷ ತರಗತಿ ಮಾಡಲಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳಿಗೆ ಬಹಳ ಸಹಾಯ ಆಗುತ್ತಿದೆ. ಅವರ ಅಭಿವೃದ್ಧಿಗೆ ಇದು ಸಹಾಯಕವಾಗಲಿದೆ ಎಂದು ಎಂದು ಮಧು ಬಂಗಾರಪ್ಪ ಹೇಳಿದ್ದಾರೆ.
ಶಾಲೆಯಲ್ಲಿ ಪಾಠ ಮಾಡೋಕೆ ಶಿಕ್ಷಕರೇ ಇಲ್ಲ, ಬೀದಿಗಿಳಿದು ಪ್ರತಿಭಟನೆ ಮಾಡಿದ ವಿದ್ಯಾರ್ಥಿಗಳು
ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿಂದಾಗಿ ವಿದ್ಯಾರ್ಥಿಗಳಿಗೆ ಬಹಳ ಸಮಸ್ಯೆ ಆಗಿದ್ದು, ಇದೀಗ ವಿದ್ಯಾರ್ಥಿಗಳು ಬೀದಿಗಿಳಿದ ಪ್ರತಿಭಟನೆ ಮಾಡಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.
ನೂರಾರು ಮಕ್ಕಳಿರುವ ಶಾಲೆ
ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ಸಗರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಶಿಕ್ಷಕರ ಕೊರತೆಯಿಂದಾಗಿ ಬೀದಿಗೆ ಇಳಿದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಶಾಲೆಯಲ್ಲಿ ನೂರಾರು ಮಕ್ಕಳಿದ್ದಾರೆ. ಆದರೆ ಇಲ್ಲಿ ಪಾಠ ಮಾಡಲು ಶಿಕ್ಷಕರೇ ಇಲ್ಲದಂತ ಪರಿಸ್ಥಿತಿ ನಿರ್ಮಾಣ ಆಗಿದೆ. ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳ ಗೋಳು ಇದಾಗಿದ್ದು, ವಿದ್ಯಾರ್ಥಿಗಳು ಸಂಕಷ್ಟದಲ್ಲಿ ಸಿಲುಕಿದ್ದಾರೆ.
