Friday, April 26, 2024

ಸತ್ಯ | ನ್ಯಾಯ |ಧರ್ಮ

ಬೆಟ್ಕುಳಿ ಗ್ರಾಮಕ್ಕೆ ಸಚಿವ ಕೃಷ್ಣಬೈರೇಗೌಡ ಭೇಟಿ ; ಸಂತ್ರಸ್ತ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ

ಕುಮಟಾ : ಕರಾವಳಿ ಪ್ರದೇಶದಲ್ಲಿ ಅತಿಯಾಗಿರುವ ಮಳೆ ಪ್ರಮಾಣದ ಹಿನ್ನೆಲೆಯಲ್ಲಿ ಸರ್ಕಾರದ ಕಡೆಯಿಂದ ಮಳೆ ಹಾನಿ ಪ್ರದೇಶಗಳಿಗೆ ಸಚಿವರ ಭೇಟಿ ಕಾರ್ಯ ಚುರುಕುಗೊಂಡಿದೆ. ಈ ಹಿನ್ನೆಲೆಯಲ್ಲಿ ಕಂದಾಯ ಸಚಿವರಾದ ಕೃಷ್ಣಬೈರೇಗೌಡ ಉತ್ತರ ಕನ್ನಡ ಜಿಲ್ಲೆಯ ಕುಮಟಾ‌ ತಾಲೂಕಿನ ಬೆಟ್ಕುಳಿ ಗ್ರಾಮಕ್ಕೆ ಭೇಟಿ ನೀಡಿ ಮಳೆ ಸಂತ್ರಸ್ತರ ಭೇಟಿ ಮಾಡಿ ಸಮಾಲೋಚಿಸಿದರು.

ಕುಮಟಾ ತಾಲ್ಲೂಕಿನ ಪೋಸ್ಟ್ ಬೆಟ್ಟುಳಿಯಲ್ಲಿ ಎರಡು ದಿನಗಳ ಹಿಂದೆ ಗದ್ದೆಯಲ್ಲಿ ತುಂಬಿದ್ದ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದ ಸತೀಶ ನಾಯ್ಕ ಮತ್ತು ಉಲ್ಲಾಸ ಗಾವಡಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಿ,ಬೆಟ್ಕುಳಿ ಗ್ರಾಮದಲ್ಲಿ ಮಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದ ಇಬ್ಬರ ಮನೆಗೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಆ ನಂತರ ಸಂತ್ರಸ್ತರ ಕಡೆಯಿಂದ ಮಳೆಯಿಂದಾದ ಅನಾಹುತದ ಬಗ್ಗೆ ಮಾಹಿತಿ ಪಡೆಯಲಾಯಿತು.

ಹಾಗೆಯೇ ಕರಾವಳಿ ಕರ್ನಾಟಕ ಭಾಗದ ಮಳೆ ಪೀಡಿತ ಪ್ರದೇಶಗಳಲ್ಲಿ ತುರ್ತು ಪರಿಸ್ಥಿತಿಗಳಿಗೆ ತ್ವರಿತವಾಗಿ ಸ್ಪಂದಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸಧ್ಯಕ್ಕೆ ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿ ವಿಪತ್ತು ನಿರ್ವಹಣಾ ಪಡೆಯನ್ನೂ ಸ್ಥಳದಲ್ಲಿ ನಿಯೋಜಿಸಲಾಗಿದೆ. ಎಂತಹದೇ ಪ್ರಾಕೃತಿಕ ವಿಕೋಪ ಉಂಟಾದರೂ ವಿಪತ್ತು ನಿರ್ವಹಣಾ ಪಡೆಯನ್ನು ಸಂಪರ್ಕಿಸಿ ಸಹಾಯ ಪಡೆಯಬೇಕು ಎಂದು ಸಚಿವರು ಸೂಚಿಸಿದ್ದಾರೆ.

ಈ ವೇಳೆ ಮಳೆ ಅನಾಹುತದ ಬಗ್ಗೆ ಪತ್ರಕರ್ತರಿಗೆ ಮಾಹಿತಿ ನೀಡಿರುವ ಸಚಿವ ಕೃಷ್ಣಭೈರೇಗೌಡ, “ಮಳೆಯಿಂದ ರಾಜ್ಯದಲ್ಲಿ ಈವರೆಗೆ 21 ಜನ ಜೀವ ಕಳೆದುಕೊಂಡಿದ್ದು ಅವರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಲಾಗಿದೆ. ಅವಶ್ಯಕತೆ ಇರುವ ಕಡೆ ಕಾಳಜಿ ಕೇಂದ್ರ ತೆರೆಯಲಾಗುತ್ತಿದೆ. ಸರ್ಕಾರ ಸಂತ್ರಸ್ತರಿಗೆ ತಕ್ಷಣ ಸ್ಪಂದಿಸುವ ಕೆಲಸ ಮಾಡುತ್ತಿದೆ. ಕೇಂದ್ರದ ನಾಲ್ಕು ಎನ್.ಡಿ.ಆರ್.ಎಫ್, ರಾಜ್ಯದ ಐದು ಎಸ್.ಡಿ.ಆರ್.ಎಫ್. ತುಕಡಿ ಪ್ರಕೃತಿ ವಿಕೋಪ ಪರಿಹಾರ ಕಾರ್ಯಕ್ಕೆ ಸನ್ನದ್ಧವಾಗಿದೆ” ಎಂದು ಮಾಹಿತಿ ನೀಡಿದರು.

ಮೋಡ ಭಿತ್ತನೆ ಸದ್ಯಕ್ಕಿಲ್ಲ

ರಾಜ್ಯದಾದ್ಯಂತ ಪ್ರಸ್ತುತ ಉತ್ತಮ ಮಳೆಯಾಗುತ್ತಿದ್ದು, ಸದ್ಯಕ್ಕೆ ಮೋಡ ಭಿತ್ತನೆ ಮಾಡುವ ಆಲೋಚನೆ ಇಲ್ಲ ಎಂದೂ ಸಚಿವ ಕೃಷ್ಣಭೈರೇಗೌಡ ಸ್ಪಷ್ಟಪಡಿಸಿದ್ದಾರೆ. ನೆರೆಪೀಡಿತ ಪ್ರದೇಶಗಳ ಪರಿಶೀಲನೆ ವೇಳೆ ಮೋಡ ಭಿತ್ತನೆ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವರು, “ಜುಲೈನಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಈ ಹಿಂದೆಯೇ ವರದಿ ನೀಡಿತ್ತು. ಅದರಂತೆ ಸರಾಸರಿಗಿಂತಲೂ ಉತ್ತಮ ಮಳೆಯಾಗುತ್ತಿದೆ. ಹೀಗಾಗಿ ಮೋಡ ಭಿತ್ತನೆಯ ಚಿಂತನೆ ಸದ್ಯಕ್ಕಿಲ್ಲ.” ಎಂದು ಮಾಹಿತಿ ನೀಡಿದರು.

ಆನಂತರ ಕಂದಾಯ ಇಲಾಖೆ‌ ಅಧಿಕಾರಿಗಳ ಜೊತೆ ಸಚಿವರು ಸಭೆ ನಡೆಸಿ, ಮೃತ ಇಬ್ಬರ ಕುಟುಂಬಕ್ಕೆ ತಲಾ ಐದು ಲಕ್ಷ ಪರಿಹಾರ ಘೋಷಿಸಿದ್ದಾರೆ. ಸಚಿವರ ಜೊತೆಗೆ ಶಾಸಕ ದಿನಕರ ಶೆಟ್ಟಿ, ಉತ್ತರ ಕನ್ನಡ ಡಿಸಿ ಪ್ರಭುಲಿಂಗ ಕವಳಿಕಟ್ಟಿ ಉಪಸ್ಥಿತರಿದ್ದರು.

Related Articles

ಇತ್ತೀಚಿನ ಸುದ್ದಿಗಳು