Sunday, June 23, 2024

ಸತ್ಯ | ನ್ಯಾಯ |ಧರ್ಮ

ಪರಿಶಿಷ್ಟರ 11,000 ಕೋಟಿ ಹಣ ದುರ್ಬಳಕೆ ವಿರುದ್ಧ ಆಮ್ ಆದ್ಮಿ ಪಕ್ಷದಿಂದ ಬೃಹತ್ ಪ್ರತಿಭಟನೆ

ಬೆಂಗಳೂರು: ಪರಿಶಿಷ್ಟ ಸಮುದಾಯಗಳ ಯೋಜನೆಗಳ ಸಲುವಾಗಿ ಮೀಸಲಿಟ್ಟಿದ್ದ ಹಣವನ್ನು ಸರ್ಕಾರ ಗ್ಯಾರಂಟಿಗಳನ್ನು ಪೂರೈಸಲು ಬಳಸುವುದನ್ನು ವಿರೋಧಿಸಿ ಇದೇ ತಿಂಗಳ ಆಗಸ್ಟ್ 5 ಶನಿವಾರದಂದು ನಗರದ ಫ್ರೀಡಂ ಪಾರ್ಕಿನಲ್ಲಿ ಬೃಹತ್ ಪ್ರತಿಭಟನೆ ನಡೆಸುವ ಮೂಲಕ ಹೋರಾಟ ಮಾಡಲಿದ್ದೇವೆ. ನಮ್ಮ ಪ್ರತಿಭಟನೆಗೆ ಅನೇಕ ದಲಿತ ಸಂಘಟನೆಗಳು ಬೆಂಬಲ ಸೂಚಿಸಿವೆ ಎಂದು ಆಮ್‌ ಆದ್ಮಿ ಪಕ್ಷ ತಿಳಿಸಿದೆ.

“ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ತಿಂಗಳುಗಳಲ್ಲಿಯೇ ದಲಿತ ವಿರೋಧಿ ಎಂಬುದನ್ನು ಸಾಬೀತು ಪಡಿಸಲು ಹೊರಟಿದೆ. ದಲಿತ ವರ್ಗದ ಶ್ರೇಯೋಭಿವೃದ್ಧಿಗಾಗಿ ಮೀಸಲಿಟ್ಟಿರುವ ಎಸ್ ಸಿ – ಎಸ್ ಪಿ / ಟಿ ಎಸ್ ಪಿ ಯೋಜನೆಯ 11,130 ಕೋಟಿ ರೂಪಾಯಿಗಳನ್ನು ಗ್ಯಾರೆಂಟಿಗಳಿಗಾಗಿ ವಿನಿಯೋಜಿಸುತ್ತಿರುವುದು ವರ್ಗಕ್ಕೆ ಮಾಡಿದ ಮಹಾ ಅನ್ಯಾಯ” ಎಂದು ಆಮ್ ಆದ್ಮಿ ಪಕ್ಷದ ಎಸ್ ಸಿ /ಎಸ್ ಟಿ ವಿಭಾಗದ ರಾಜ್ಯಾಧ್ಯಕ್ಷ ಪುರುಷೋತ್ತಮ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಇದೇ ರೀತಿಯ ದಲಿತರ ಹಣವನ್ನು ದುರ್ಬಳಕೆ ಮಾಡಿಕೊಂಡು ಬಂದಿದ್ದ ಈ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷಕ್ಕೆ ಮತನೀಡಿದ ದಲಿತ ವರ್ಗ ಇಂದು ಮಹಾ ಮೋಸಕ್ಕೆ ಒಳಗಾಗುತ್ತಿರುವುದು ದುರಂತ. 14 ಬಾರಿ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿಗಳು ಈ ಬಾರಿ 4079 ಕೋಟಿ ರೂಪಾಯಿಗಳನ್ನು ಹೆಚ್ಚುವರಿ ಯಾಗಿ ಈ ಯೋಜನೆಯಲ್ಲಿ ಇಟ್ಟಿದ್ದೆವೆಂದು ತಮ್ಮ ಬಜೆಟ್ ಭಾಷಣದಲ್ಲಿ ಹೇಳುತ್ತಾ ಚಪ್ಪಾಳೆ ಗಿಟ್ಟಿಸಿಕೊಂಡಿದ್ದರು. ಇದೀಗ ದಲಿತ ವರ್ಗದಿಂದ ಛೀಮಾರಿ ಹಾಕಿಸಿಕೊಳ್ಳುವ ಪರಿಸ್ಥಿತಿ ಬಂದಿದೆ. ಯಾವುದೇ ಕಾರಣಕ್ಕೂ ದಲಿತ ವರ್ಗಕ್ಕೆ ಈ ರೀತಿ ಅನ್ಯವಾಗುವುದನ್ನು ನಾವು ಸಹಿಸುವುದಿಲ್ಲ. ಹೋರಾಟದ ಹಾದಿಯನ್ನು ಇಳಿಯುತ್ತೇವೆ” ಎಂದು ಪುರುಷೋತ್ತಮ ಸರ್ಕಾರವನ್ನು ಎಚ್ಚರಿಸಿದರು.

ಮುಂದುವರಿದು ಮಾತನಾಡಿದ ಪಕ್ಷದ ಉಪಾಧ್ಯಕ್ಷ ಸುರೇಶ್ ರಾಥೋಡ್ “ಹೇಳುವುದು ಒಂದು ಮಾಡುವುದು ಇನ್ನೊಂದು ಕಾಂಗ್ರೆಸ್ ಸರ್ಕಾರದ ಪರಿಪಾಠ. ಈ ಬಗ್ಗೆ ರಾಜ್ಯ ವ್ಯಾಪಿ ಹೋರಾಟವನ್ನು ರೂಪಿಸುತ್ತೇವೆ. ಇದೇ ತಿಂಗಳ ಆಗಸ್ಟ್ 5 ಶನಿವಾರದಂದು ನಗರದ ಫ್ರೀಡಂ ಪಾರ್ಕಿನಲ್ಲಿ ಬೃಹತ್ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರದ ದಲಿತ ನೀತಿಯ ವಿರುದ್ಧ ಹೋರಾಟ ಮಾಡಲಿದ್ದೇವೆ. ನಮ್ಮ ಪ್ರತಿಭಟನೆಗೆ ಅನೇಕ ದಲಿತ ಸಂಘಟನೆಗಳು ಬೆಂಬಲ ಸೂಚಿಸಿವೆ” ಎಂದು ತಿಳಿಸಿದರು.

Related Articles

ಇತ್ತೀಚಿನ ಸುದ್ದಿಗಳು