Wednesday, June 19, 2024

ಸತ್ಯ | ನ್ಯಾಯ |ಧರ್ಮ

ಕಾವೇರಿ, ಮಹದಾಯಿ, ಮೇಕೆದಾಟು ಜಲವಿವಾದ : ಪ್ರಧಾನಿ ಬಳಿಗೆ ಸರ್ವಪಕ್ಷ ನಿಯೋಗ ಕರೆದೊಯ್ಯುಲು ಸಿಎಂ ಸಿದ್ದರಾಮಯ್ಯ ಚಿಂತನೆ

ಕನ್ನಡ ನಾಡು-ನುಡಿ-ಜಲ-ಭೂಮಿ-ಸಂಸ್ಕೃತಿಯ ಹಿತ ಕಾಪಾಡುವ ವಿಚಾರದಲ್ಲಿ ರಾಜಿಯ ಮಾತೇ ಇಲ್ಲ
7 ಕೋಟಿ ಕನ್ನಡಿಗರ ಹಿತ ಕಾಪಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಸರ್ವ ಪಕ್ಷಗಳೂ ಒಟ್ಟಾಗಿ ಶ್ರಮಿಸೋಣ
ಕಾವೇರಿ-ಮಹದಾಯಿ-ಮೇಕೆದಾಟು ವಿಚಾರಕ್ಕಾಗಿ ಪ್ರಧಾನಿ ಬಳಿಗೆ ಸರ್ವಪಕ್ಷ ನಿಯೋಗ ಕರೆದೊಯ್ಯುವ ಚಿಂತನೆ ಇದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕಾವೇರಿ, ಮಹದಾಯಿ, ಮೇಕೆದಾಟು ವಿಚಾರದಲ್ಲಿ ನಾಡಿಗೆ ನ್ಯಾಯ ಒದಗಿಸುವ ಸಲುವಾಗಿ ಪ್ರಧಾನಿಯವರ ಬಳಿಗೆ ಸರ್ವ ಪಕ್ಷ ನಿಯೋಗ ಕರೆದೊಯ್ಯುವ ಚಿಂತನೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕಾವೇರಿ, ಮೇಕೆದಾಟು ಮತ್ತು ಮಹಾದಾಯಿ ಜಲ ವಿವಾದಗಳ ಕುರಿತಂತೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ವಿರೋಧ ಪಕ್ಷದ ನಾಯಕರುಗಳ ಮತ್ತು ಸಂಸದರ ಅಭಿಪ್ರಾಯಗಳನ್ನು ಕೇಳಿಸಿಕೊಂಡ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು.

ಕನ್ನಡ ನಾಡು-ನುಡಿ-ಜಲ-ಭೂಮಿ-ಸಂಸ್ಕೃತಿಯ ಹಿತ ಕಾಪಾಡುವ ವಿಚಾರದಲ್ಲಿ ರಾಜಿಯ ಮಾತೇ ಇಲ್ಲ. 7 ಕೋಟಿ ಕನ್ನಡಿಗರ ಹಿತ ಕಾಪಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಸರ್ವ ಪಕ್ಷಗಳೂ ಒಟ್ಟಾಗಿ ಶ್ರಮಿಸೋಣ. ಹೀಗಾಗಿ ಸರ್ವ ಪಕ್ಷ ನಿಯೋಗಕ್ಕೆ ನಿಮ್ಮೆಲ್ಲರ ಸಹಕಾರ ಬೇಕು ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದರು.

ಕಾವೇರಿ ಜಲಾನಯನ ಪ್ರದೇಶದಲ್ಲಿ ನಮ್ಮ ರೈತರ ಹಿತವನ್ನು ಸಂಪೂರ್ಣ ಕಾಪಾಡಿದ್ದೇವೆ. ನಮ್ಮ ಬೆಳೆ ರಕ್ಷಣೆಗೆ ಅಗತ್ಯ ಕ್ರಮ ಕೈಗೊಂಡಿದ್ದೇವೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಎಲ್ಲಾ ಪಕ್ಷಗಳ ನಾಯಕರ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಈವರೆಗೆ ಕಾವೇರಿ ಪ್ರಾಧಿಕಾರ 22 ಸಭೆ, ನಿಯಂತ್ರಣ ಸಮಿತಿಯಲ್ಲಿ 84 ಸಭೆಗಳು ನಡೆದಿವೆ. ರಾಜ್ಯವನ್ನು ಪ್ರತಿನಿಧಿಸುವ ಅಧಿಕಾರಿ ಮತ್ತು ವಕೀಲರ ತಂಡ ವಾಸ್ತವ ಸ್ಥಿತಿಯನ್ನು ಸಮರ್ಥವಾಗಿ ಪ್ರಾಧಿಕಾರದ ಮುಂದೆ, ನಿಯಂತ್ರಣ ಸಮಿತಿ ಮುಂದೆ ಮಂಡಿಸಿದ್ದಾರೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಇಲ್ಲಿಯವರೆಗೂ ನಾವು 24 ಟಿಎಂಸಿ ಮಾತ್ರ ಬಿಡುಗಡೆ ಮಾಡಿದ್ದೇವೆ. ನಿಗಧಿ ಮಾಡಿದ್ದಕ್ಕಿಂತ ಕಡಿಮೆ ನೀರು ಬಿಟ್ಟಿದ್ದೀವಿ. ಮೂರನೇ ಒಂದು ಭಾಗದಷ್ಟು ಮಾತ್ರ ನೀರು ಬಿಟ್ಟಿದ್ದೀವಿ ಅಷ್ಟೆ. ಈ ಬಗ್ಗೆ ನಾವು ಸಮರ್ಥ ವಾದ ಮಂಡಿಸಿದ್ದರಿಂದಲೇ ತಮಿಳುನಾಡಿನ ಬೇಡಿಕೆಗಿಂತ ಕಡಿಮೆ ನೀರು ಬಿಡಲು ಆದೇಶವಾಯಿತು. ಸಮರ್ಥ ವಾದ ಮಂಡಿಸದಿದ್ದರೆ ಆದೇಶದಲ್ಲಿನ ನೀರಿನ ಪ್ರಮಾಣ ಇನ್ನೂ ಹೆಚ್ಚಿರುತ್ತಿತ್ತು ಎಂದು ಮುಖ್ಯಮಂತ್ರಿಗಳು ಸಮರ್ಥಿಸಿಕೊಂಡಿದ್ದಾರೆ.

ನಮ್ಮ ಕಾನೂನು ತಂಡಕ್ಕೆ, ತಜ್ಞರ ತಂಡಕ್ಕೆ ಅಗತ್ಯವಾದ ಸಕಲ ನೆರವು ನೀಡುತ್ತಿದ್ದೇವೆ. ನಾವು 15 ಸಾವಿರ ಕ್ಯೂಸೆಕ್ಸ್ ನೀರು ಬಿಡಲು ಸಾಧ್ಯವೇ ಇಲ್ಲ ಎಂದು ವಾದ ಮಂಡಿಸುವಾಗಲೇ‌ ತಮಿಳುನಾಡಿನವರು walk out ಮಾಡಿದರು. ಬಳಿಕ 10 ಸಾವಿರ ಕ್ಯೂಸೆಕ್ಸ್ ನೀರು ಬಿಡಲು ಆದೇಶವಾಗಿದೆ. ಈಗ 10 ಸಾವಿರ ಕ್ಯೂಸೆಕ್ಸ್ ನೀರನ್ನೂ ಬಿಡಲು ಸಾಧ್ಯವಿಲ್ಲ ಎಂದು ಮತ್ತೆ ಸಮರ್ಥ ವಾದ ಮಂಡಿಸುತ್ತೇವೆ ಎಂದು ಸರ್ವಪಕ್ಷಗಳ ನಾಯಕರಿಗೆ ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಸಭೆಯಲ್ಲಿ ಉಪಮುಖ್ಯಮಂತ್ರಿಗಳು ಹಾಗೂ ಜಲ ಸಂಪನ್ಮೂಲ ಸಚಿವರಾದ ಸಚಿವ ಡಿ.ಕೆ. ಶಿವಕುಮಾರ್‌, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಬಿ.ಎಸ್. ಯಡಿಯೂರಪ್ಪ, ಹೆಚ್.ಡಿ. ಕುಮಾರಸ್ವಾಮಿ, ಜಗದೀಶ ಶೆಟ್ಟರ, ಡಿ.ವಿ. ಸದಾನಂದಗೌಡ, ವೀರಪ್ಪ ಮೊಯಿಲಿ, ಸಚಿವರಾದ ಹೆಚ್‌.ಕೆ. ಪಾಟೀಲ, ಚಲುವರಾಯಸ್ವಾಮಿ, ಡಾ. ಜಿ. ಪರಮೇಶ್ವರ, ಕೆ.ಜೆ. ಜಾರ್ಜ್‌, ಕೃಷ್ಣ ಬೈರೇಗೌಡ ಸೇರಿದಂತೆ ಇತರ ಕಾನೂನು ತಜ್ಞರು, ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Related Articles

ಇತ್ತೀಚಿನ ಸುದ್ದಿಗಳು