Saturday, June 15, 2024

ಸತ್ಯ | ನ್ಯಾಯ |ಧರ್ಮ

ಮುರುಘಾ ಶರಣರಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಕೆ: ವಿಚಾರಣೆ ಸೆ.1 ಕ್ಕೆ

ಚಿತ್ರದುರ್ಗ: ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಕ್ಕೆ ಒಳಗಾಗಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಚಿತ್ರದುರ್ಗದ ಎರಡನೇ ಸೆಷನ್ಸ್‌ ನ್ಯಾಯಾಲದಲ್ಲಿ ಆರೋಪಿ ಶಿವಮೂರ್ತಿ ಮುರುಘಾ ಶರಣರ ಪರ ವಕೀಲರು ಅರ್ಜಿ ಸಲ್ಲಿಸಿದ್ದು, ಅರ್ಜಿಯನ್ನು ದಾಖಲಿಸಿಕೊಂಡಿರುವ ನ್ಯಾಯಾಧೀಶರು ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್‌ 1 ನೇ ತಾರೀಖಿಗೆ ಮುಂದೂಡಿದ್ದಾರೆ.

ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಕುರಿತಂತೆ ಮುರುಘಾ ಶರಣರ ಮೇಲೆ FIR ದಾಖಲಾಗಿದ್ದು ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಲಾಗಿದೆ. ತನಿಖಾಧಿಕಾರಿಗಳು ಪ್ರಕರಣದ ತನಿಖೆ ನಡೆಸುತ್ತಿದ್ದು ಇದೀಗ ಹೆಣ್ಣು ಮಕ್ಕಳನ್ನು ಸ್ಥಳ ಮಹಜರಿಗೆ ಕರೆದೊಯ್ದು ತನಿಖೆ ನಡೆಸುತ್ತಿದ್ದಾರೆ.

ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾದ ಹೆಚ್ಚಿನ ಸಂದರ್ಭಗಳಲ್ಲಿ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಾರೆ. ಆದರೆ ಮುರುಘಾ ಶರಣರ ವಿಷಯದಲ್ಲಿ ಪೊಲೀಸರು ಒತ್ತಡಕ್ಕೆ ಮಣಿದು ಇಡೀ ವಿಚಾರಣೆಯ ಪ್ರಕ್ರಿಯೆಯನ್ನು ವಿಳಂಬಗೊಳಿಸುತ್ತಿದ್ದಾರೆ ಎಂಬ ಆರೋಪ ಸಾಮಾಜಿಕ ವಲಯದಲ್ಲಿ ಕೇಳಿ ಬರುತ್ತಿದೆ. ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ತಿಳುವಳಿಕೆ ಮಠಾಧೀಶರುಗಳ ವಿಷಯದಲ್ಲಿ ಯಾಕೆ ತಲೆಕೆಳಗಾಗಿದೆ ಎಂಬ ಪ್ರಶ್ನೆಗಳೂ ಕೇಳಿ ಬರುತ್ತಿವೆ.

Related Articles

ಇತ್ತೀಚಿನ ಸುದ್ದಿಗಳು