Thursday, June 20, 2024

ಸತ್ಯ | ನ್ಯಾಯ |ಧರ್ಮ

ತಮಿಳುನಾಡು : ಬಾರೀ ಮಳೆಯಿಂದ ಶಾಲಾ ಕಾಲೇಜುಗಳಿಗೆ ರಜೆ : ಕರ್ನಾಟಕದ ಈ ಜಿಲ್ಲೆಗಳಲ್ಲೂ ಮಳೆ ಸಂಭವ

ತಮಿಳುನಾಡಿನಾದ್ಯಂತ ಸುರಿಯುತ್ತಿರುವ ಬಾರಿ ಮಳೆಗೆ ಇಡೀ ರಾಜ್ಯ ತತ್ತರಿಸಿ ಹೋಗಿದೆ. ರಾಜ್ಯದ ತಿರುನಲ್ವೇಲಿ, ತೂತುಕುಡಿ, ಕನ್ಯಾಕುಮಾರಿ ಮತ್ತು ತೆಂಕಶಿ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಶಾಲಾ ಕಾಲೇಜು, ಖಾಸಗಿ ಸಂಸ್ಥೆಗಳು, ಬ್ಯಾಂಕ್‌ಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ.

ರಾಜಧಾನಿ ಚೆನ್ನೈಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ನಿರಂತರ ಮಳೆಯಿಂದ ಅನೇಕ ಮನೆಗಳಿಗೆ ನೀರು ನುಗ್ಗಿದ್ದು, ಜನರು ಬೀದಿಗೆ ಬೀಳುವಂತಾಗಿದೆ. ರಸ್ತೆಗಳು ಜಲಾವೃತವಾಗಿದ್ದರೆ, ಮನೆಗಳಿಗೆ ನೀರು ನುಗ್ಗಿದೆ. ಕೆಲವರು ಮನೆಯಿಂದ ಹೊರಬರದಂತಹ ಸ್ಥಿತಿ ನಿರ್ಮಾಣವಾಗಿದೆ. ಎನ್​ಡಿಆರ್​ಎಫ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಗಿಳಿದಿದ್ದಾರೆ.

ತಮಿಳುನಾಡಿನ ಕನ್ಯಾಕುಮಾರಿಯಲ್ಲಿಯೂ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿಯೇ ನಿರ್ಮಾಣವಾಗಿದೆ. ನೂರಾರು ಅಂಗಡಿ, ಮನೆಗಳಿಗೆ ಮಳೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ. ಜನವಸತಿ ಪ್ರದೇಶಕ್ಕೆ ನೀರು ನುಗ್ಗಿದ್ದರಿಂದ ಜನರು ಪರದಾಡಿದ್ದಾರೆ. ಹವಾಮಾನ ಇಲಾಖೆಯಿಂದ ಬಂದ ಮಾಹಿತಿಯಂತೆ ಇನ್ನೂ ಮೂರು ದಿನಗಳ ಮಳೆ ಮುಂದುವರೆಯುವ ಸಾಧ್ಯತೆ ಇದೆ. ತಮಿಳುನಾಡು ಮಾತ್ರವಲ್ಲದೆ ಕೇರಳ ಹಾಗೂ ಕರ್ನಾಟಕದಲ್ಲೂ ಮಳೆಯ ಪ್ರಮಾಣ ಕಂಡುಬರುವ ಸಾಧ್ಯತೆ ಇದೆ.

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸೋಮವಾರ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದೆ. ಚಿಕ್ಕಮಗಳೂರು ಹಾಗೂ ಹಾಸನ ಭಾಗಗಳಲ್ಲಿ ಕಳೆದ ಎರಡು ದಿನಗಳಲ್ಲಿ ಸಣ್ಣದಾಗಿ ಮಳೆ ಸುರಿದಿದ್ದು, ಮಳೆ ಮುಂದುವರೆಯುವ ಸಾಧ್ಯತೆ ಇದೆ. ಚೆನ್ನೈ ಕರಾವಳಿಗೆ ಹತ್ತಿರ ಇರುವ ಬೆಂಗಳೂರು, ರಾಮನಗರ ಹಾಗೂ ಪಶ್ಚಿಮ ಕರಾವಳಿಯ ಮಂಗಳೂರು, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಸೇರಿದಂತೆ ಹಲವು ಕಡೆಗಳಲ್ಲಿ ಸೋಮವಾರ ಮತ್ತು ಮಂಗಳವಾರ ತೆಳುವಾದ ಮೋಡ ಕವಿದಿರುವುದಿದ್ದು, ತೆಳುವಾದ ಮಳೆ ಬೀಳುವ ಸಂಭವವಿದೆ.

ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಈಗಾಗಲೇ ಫಸಲು ಕೈಗೆ ಸಿಗುವ ಸಂದರ್ಭದಲ್ಲಿ ಮಳೆ ಶುರು ಆಗುವುದರಿಂದ ರೈತ ಸಮುದಾಯಕ್ಕೆ ಮಳೆಯಿಂದಾಗಿ ಆತಂಕ ಸೃಷ್ಟಿಯಾಗಿದೆ. ತಮಿಳುನಾಡಿನಲ್ಲಿ ಸುರಿಯುತ್ತಿರುವ ಮಿಚಾಂಗ್​ ಚಂಡಮಾರುತ ಮಳೆಯ ಪರಿಣಾಮ ಹೀಗೇ ಮುಂದುವರಿದರೆ ಕರ್ನಾಟಕಕ್ಕೂ ಮಳೆಯ ಆಪತ್ತು ಮುಂದುವರೆಯುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Related Articles

ಇತ್ತೀಚಿನ ಸುದ್ದಿಗಳು