Tuesday, June 18, 2024

ಸತ್ಯ | ನ್ಯಾಯ |ಧರ್ಮ

ಪ್ರಧಾನಿಯ ವಿಶೇಷ ವಿಮಾನದ ಪ್ರಯಾಣ ಬಿಟ್ಟಿ ಶೋಕಿಯೇ? : ಬಿಜೆಪಿಗೆ ತಿರುಗೇಟು ಕೊಟ್ಟ ಸಿದ್ದರಾಮಯ್ಯ

ರಾಜ್ಯದ ಹಲವು ಪ್ರದೇಶದ ಜನರಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ಬರ ಪರಿಹಾರವನ್ನು, ಆದಷ್ಟು ಶೀಘ್ರವಾಗಿ ರೈತರಿಗೆ ನೀಡಬೇಕು ಹಾಗೂ ಇನ್ನು ಹಲವಾರು ಯೋಜನೆಗಳಿಗೆ ಹಣವನ್ನು ಆದಷ್ಟು ಬೇಗ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಲವರು ಶಾಸಕರು ವಿಮಾನದಲ್ಲಿ ದಿಲ್ಲಿಗೆ ಪ್ರಯಾಣಿಸಿದ ಕುರಿತು ರಾಜ್ಯ ಬಿಜೆಪಿ ನೀಡಿರುವ ವ್ಯಂಗ್ಯಕಾರದ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ರಾಜ್ಯ ಬಿಜೆಪಿ ಘಟಕ “ಕಾಂಗ್ರೆಸ್‌ ಸರ್ಕಾರದ ಸಚಿವರು ಮತ್ತು ಶಾಸಕರು ತಮ್ಮ ನೋವು ಕೇಳಲು ಬಾರದೆ ತಮ್ಮ ಹೆಸರಲ್ಲಿ ಖಾಸಗಿ ವಿಮಾನದಲ್ಲಿ ದಿಲ್ಲಿಗೆ ಹೋಗಿ ಮೋಜು ಮಸ್ತಿ ಮಾಡುತ್ತಿದ್ದಾರೆ ಎಂಬುದನ್ನು ಅರ್ಥ ಮಾಡಿಕೊಳ್ಳಲಾರದಷ್ಟು ಕರ್ನಾಟಕದ ರೈತರು ದಡ್ಡರಲ್ಲ. ಬರ ಪರಿಹಾರಕ್ಕೆ ಕೇಂದ್ರ ಸರ್ಕಾರ ದುಡ್ಡು ಕೊಡುತ್ತಿಲ್ಲ ಎಂದು ಹೇಳುವ ರಾಜ್ಯ ಕಾಂಗ್ರೆಸ್ ಸಚಿವರು ತೆರಿಗೆದಾರರ ಹಣದಲ್ಲಿ ಬಿಟ್ಟಿ ಐಶಾರಾಮಿತನ ಅನುಭವಿಸಿ ಒಣ ಶೋಕಿಯಲ್ಲಿ ನಿರತರಾಗಿರುವುದಕ್ಕೆ ರೈತರು ಛೀ ಥೂ ಎಂದು ಉಗಿಯುತ್ತಿದ್ದಾರೆ” ಎಂದು ಟ್ವಿಟ್ಟರ್ ಮೂಲಕ ಕಿಡಿಕಾರಿತ್ತು. ರಾಜ್ಯ ಬಿಜೆಪಿ ಮಾಡಿದ ಆಪಾದನೆಗೆ ಸಿದ್ದರಾಮಯ್ಯ ಖಡಕ್ಕಾಗಿ ಉತ್ತರಿಸಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಆಪರೇಷನ್ ಕಮಲದ ಮೂಲಕ ಸಮ್ಮಿಶ್ರ ಸರ್ಕಾರ ಬೀಳಿಸಿ, ಶಾಸಕರನ್ನು ವಿಶೇಷ ವಿಮಾನದಲ್ಲಿ ದೆಹಲಿ, ಮುಂಬೈ ಸುತ್ತಾಡಿಸಿದ, ಐಷಾರಾಮಿ ಹೋಟೆಲ್‌ಗಳಲ್ಲಿ ವಾರಗಟ್ಟಲೆ ಠಿಕಾಣಿ ಹಾಕಿಸಿ ಮೋಜು ಮಸ್ತಿಗಾಗಿ ಖರ್ಚು ಮಾಡಿದ ನೂರಾರು ಕೋಟಿ ಹಣ ಬಿಜೆಪಿಯವರು ನರೇಗಾ ಯೋಜನೆಯಲ್ಲಿ ಕೂಲಿ ಮಾಡಿ ಕೂಡಿಟ್ಟದ್ದಲ್ಲ, ರಾಜ್ಯದ ಬಡಜನರು ಕಷ್ಟಪಟ್ಟು ಕಟ್ಟಿದ ತೆರಿಗೆ ಹಣ ಎಂದು ಹೇಳುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

ರಾಜ್ಯದ ಬರ ಪರಿಸ್ಥಿತಿ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಚರ್ಚಿಸುವ ಸಲುವಾಗಿ ವಿಶೇಷ ವಿಮಾನದಲ್ಲಿ ನಾನು ಪ್ರಯಾಣ ಬೆಳೆಸಿದ್ದನ್ನು ವಿರೋಧಿಸುವ ನೈತಿಕತೆ ರಾಜ್ಯ ಬಿಜೆಪಿ ನಾಯಕರಿಗೆ ಇದೆಯೇ? ಎಂದು ಪ್ರಶ್ನಿಸಿದ್ದಾರೆ.

2014ರ ಜೂನ್ 15ರಿಂದ 2023ರ ಸೆಪ್ಟೆಂಬರ್‍‌ವರೆಗೆ ಪ್ರಧಾನಿ ನರೇಂದ್ರಮೋದಿ ಅವರು 74 ಬಾರಿ ವಿದೇಶಿ ಪ್ರವಾಸ ಮಾಡಿದ್ದಾರೆ. ಪ್ರಧಾನಿಗಳ ಅಧಿಕೃತ ತಾಣದ ಅಂಕಿ ಅಂಶಗಳ ಪ್ರಕಾರ ಪ್ರತಿ ಪ್ರವಾಸದ ಸರಾಸರಿ ವೆಚ್ಚ 8.9 ಕೋಟಿ ರೂಪಾಯಿ. ದೇಶ ಹಸಿವಿನ ಸೂಚ್ಯಂಕದಲ್ಲಿ 111ನೇ ಸ್ಥಾನದಲ್ಲಿದೆ. ದೇಶದ ಜನ ಹಸಿವಿನಿಂದ ಬಳಲುತ್ತಿರುವ ವೇಳೆ ಪ್ರಧಾನಿಗಳು ವಿಶೇಷ ವಿಮಾನದ ಮೂಲಕ ವಿದೇಶ ಯಾತ್ರೆ ಮಾಡಿಕೊಂಡು, ಮೋಜು ಮಾಡುತ್ತಾರೆಂದು ಹೇಳಲು ಬರುತ್ತದೆಯಾ? ಎಂದು ಸಿದ್ದರಾಮಯ್ಯ ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು