Friday, June 14, 2024

ಸತ್ಯ | ನ್ಯಾಯ |ಧರ್ಮ

ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಪೊಲೀಸರು

ಉತ್ತರಕನ್ನಡ: ಸಿಎಂ ಸಿದ್ದರಾಮಯ್ಯ ಮತ್ತು ಮಸೀದಿ ಕುರಿತು ವಿವಾದಾಸ್ಪದ ಹೇಳಿಕೆ ನೀಡಿದ್ದ ಕೇಂದ್ರದ ಮಾಜಿ ಸಚಿವ ಮತ್ತು ಉತ್ತರಕನ್ನಡದ ಬಿಜೆಪಿ ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿದ್ದಾರೆ.

ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಹೇಳಿಕೆಗಳನ್ನು ನೀಡಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಕಾರಣವಾಗಿರುವ ಹಿನ್ನೆಲೆಯಲ್ಲಿ ಸೆಕ್ಷನ್ 153ಎ ಮತ್ತು 505ರ ಅಡಿಯಲ್ಲಿ ದೂರು ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್, ಕುಮಟಾದಲ್ಲಿ ನಡೆದ ಸಭೆಯಲ್ಲಿ ಸಂಸದರು ಮಾಡಿರುವ ಭಾಷಣ ಆಕ್ಷೇಪಾರ್ಹವಾಗಿರುವ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದೇವೆ ಎಂದು ಹೇಳಿದ್ದಾರೆ.

ಕಳೆದ ಶನಿವಾರ ಕುಮಟಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತಾಡಿದ್ದ ಅನಂತಕುಮಾರ ಹೆಗಡೆ, ಭಟ್ಕಳ, ಶಿರಸಿ, ಶ್ರೀರಂಗಪಟ್ಟಣದ ಮಸೀದಿಗಳು ಹಿಂದೆ ದೇವಾಲಯಗಳಾಗಿದ್ದವು. ಅವುಗಳನ್ನು ಬಾಬ್ರಿ ಮಸೀದಿ ಮಾದರಿಯಲ್ಲಿ ಕೆಡವಬೇಕು ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದರು.

ಈ ವಿಷಯದ ಕುರಿತು ಪ್ರತಿಕ್ರಿಯಿಸಿದ್ದ ಕಾಂಗ್ರೆಸ್ ಜಿಲ್ಲಾ ಘಟಕದ ವಕ್ತಾರ ಕೆ.ಶಂಭು ಶೆಟ್ಟಿ, “ಸಂಸದ ಅನಂತಕುಮಾರ್ ಹೆಗಡೆ ಶಾಂತವಾಗಿರುವ ಜಿಲ್ಲೆಯಲ್ಲಿ ಕೋಮು ಗಲಭೆ ಸೃಷ್ಟಿಸುವ ಪ್ರಯತ್ನವನ್ನು ನಡೆಸುತ್ತಿದ್ದಾರೆ. ಚುನಾವಣೆ ಸಮೀಪಿಸಿದಂತೆ ಸಾರ್ವಜನಿಕವಾಗಿ ಕಾಣಿಸಿಕೊಂಡಿರುವ ಸಂಸದ ವಿವಾದ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ಅನಂತಕುಮಾರ್ ತಮ್ಮ ಭಾಷಣದಲ್ಲಿ ಮಾತ್ರ ದ್ವೇಷಿಸುವ ಸಮುದಾಯದ ಜತೆಗೆ ವ್ಯಾವಹಾರಿಕ ಸಂಬಂಧ ಹೊಂದಿದ್ದಾರೆ. ಆದರೆ ಜನರನ್ನು ಮಾತ್ರ ತಪ್ಪು ದಾರಿಗೆ ಎಳೆದು ಸಮಾಜದಲ್ಲಿ ದ್ವೇಷ ವಾತಾವರಣ ನಿರ್ಮಿಸುವ ಕೆಲಸ ಮಾಡುತ್ತಿದ್ದಾರೆ” ಎಂದು ಹೇಳಿದ್ದರು.

Related Articles

ಇತ್ತೀಚಿನ ಸುದ್ದಿಗಳು