Friday, June 14, 2024

ಸತ್ಯ | ನ್ಯಾಯ |ಧರ್ಮ

ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು: ಗಡಿಪಾರು ಮಾಡುವಂತೆ ಆಗ್ರಹ

ಕಲಬುರ್ಗಿ: ಕಾಂಗ್ರೆಸ್‌ ಅಧ್ಯಕ್ಷ ಹಾಗೂ ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆಯವರನ್ನು ನಿಂದಿಸಿದ ಆರೋಪ ಹೊರಿಸಿ ಬಿಜೆಪಿ ಪ್ರಚಾರಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ನೀಡಲಾಗಿದೆ.

ಸದಾ ಒಂದಲ್ಲ ಒಂದು ವಿವಾದದಲ್ಲಿ ತೊಡಗಿಕೊಂಡಿರುವ ಚಕ್ರವರ್ತಿ ಸೂಲಿಬೆಲೆ ಈ ಬಾರಿ ಮಲ್ಲಿಕಾರ್ಜುನ ಖರ್ಗೆಯವರ ವಿರುದ್ಧ ನಾಲಿಗೆ ಹರಿಬಿಟ್ಟಿದ್ದು, ಇದರಿಂದ ಕೋಪಗೊಂಡಿರುವ ಅವರ ಬೆಂಬಲಿಗರು ಸೂಲಿಬೆಲೆ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಕುರಿತು ಕಲಬುರಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೆದ್ದಾರ್ ನೇತೃತ್ವದಲ್ಲಿ ಕಮೀಷನರ್ ಆರ್.ಚೇತನ್ ಅವರಿಗೆ ದೂರು ಸಲ್ಲಿಸಲಾಗಿದೆ.

ನಮ್ಮ ಪಕ್ಷದ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆಯವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಹೀಗಾಗಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಎಂದು ಕಾಂಗ್ರೆಸ್ ಕಾರ್ಯಕರ್ತರು ತಾವು ನೀಡಿರುವ ದೂರಿನಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಇತ್ತಿಚಗಷ್ಟೆ ರಾಯಚೂರಿನ ಶಿರವಾದಲ್ಲಿ ಮೋದಿ ಪರ ಪ್ರಚಾರ ನಡೆಸುವ ಸಲುವಾಗಿ ನಮೋ ಬ್ರಿಗೇಡ್ ‘ನಮೋ ಭಾರತ’ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ಸಭೆಯ ಮಾತನಾಡುತ್ತಾ ಚಕ್ರವರ್ತಿ ಸೂಲಿಬೆಲೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ.

“ಕಲಬುರಗಿಯಲ್ಲಿ ಖರ್ಗೆ ಸಾಹೇಬರ ಕಾಲದಲ್ಲಿ ಇಎಸ್​ಐ ಆಸ್ಪತ್ರೆ ನಿರ್ಮಿಸಲಾಗಿತ್ತು. ಈ ಕಟ್ಟಡಗಳನ್ನು ಡ್ರೋನ್ ಕ್ಯಾಮೆರಾ ಸಹಾಯದಿಂದ ಮೇಲ್ಭಾಗದಿಂದ ನೋಡಿದ್ರೆ ಮೊದಲ ಅಕ್ಷರ ‘ಖ’, ಎರಡನೇ ಅಕ್ಷರ ‘ಗೆ’ ಮೂರನೇ ಅಕ್ಷರ ಅರ್ಕವತ್ತು ಕಾಣುತ್ತದೆ. ಈ ಕಟ್ಟಡ ಇರೋವರೆಗೂ ತಮ್ಮ ಹೆಸರು ಉಳಿಯಬೇಕೆಂದು ಹೀಗೆ ಮಾಡಲಾಗಿದೆ. ಆಸ್ಪತ್ರೆಯನ್ನು ಜನರ ತೆರಿಗೆ ಹಣದಿಂದ ಕಟ್ಟಿಸಲಾಗಿದೆಯೇ ಹೊರತು, ಇವರ ಸ್ವಂತ ಅಥವಾ ಪಕ್ಷದ ದುಡ್ಡಿನಿಂದ ಕಟ್ಟಿಸಿಲ್ಲ. ಜನರ ತೆರಿಗೆ ಹಣದಲ್ಲಿ ತಮ್ಮ ಹೆಸರನ್ನು ಶ್ವಾಶ್ವತಗೊಳಿಸುವ ಅಯೋಗ್ಯರಿದ್ದಾರೆ” ಎಂದು ಸೂಲಿಬೆಲೆ ಹೇಳಿರುವುದಾಗಿ ವರದಿಯಾಗಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಕರ್ನಾಟಕ ಕಾಂಗ್ರೆಸ್‌ “ಅಯೋಗ್ಯ @astitvam ಎನ್ನುವ ಸಮಾಜದ ಕೊಳಕು ಕ್ರಿಮಿಯೊಂದು ಎಐಸಿಸಿ ಅಧ್ಯಕ್ಷರಾದ @kharge ಅವರ ಬಗ್ಗೆ ಹಗುರವಾಗಿ ಮಾತನಾಡಿರುವುದು ಖಂಡನೀಯ. ಬಾಡಿಗೆ ಭಾಷಣ ಮಾಡಿಕೊಂಡು ಬದುಕುವ ಪರಾವಲಂಬಿ ಜೀವಿಗಳಿಗೆ ಶೋಷಿತ ಸಮುದಾಯದ ನಾಯಕರೊಬ್ಬರು ಅತ್ಯುನ್ನತ ಸ್ಥಾನಕ್ಕೆ ಏರುವುದನ್ನು ಸಹಿಸಲು ಸಾಧ್ಯವಾಗುತ್ತಿಲ್ಲ ಎನ್ನುವುದು ಇದರಿಂದ ಸ್ಪಷ್ಟವಾಗುತ್ತದೆ. ಸುಳ್ಳುಗಳನ್ನು ಹಬ್ಬಿಸುತ್ತಾ ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿರುವ ಇಂತಹ ಕ್ರಿಮಿಗಳನ್ನು ಗಡಿಪಾರು ಮಾಡಲು ಕ್ರಮ ಕೈಗೊಳ್ಳಬೇಕೆಂದು ಗೃಹಸಚಿವ @DrParameshwara ಅವರಲ್ಲಿ ಮನವಿ ಮಾಡುತ್ತೇವೆ.” ಎಂದು ಕಿಡಿ ಕಾರಿದೆ.

Related Articles

ಇತ್ತೀಚಿನ ಸುದ್ದಿಗಳು