Saturday, August 3, 2024

ಸತ್ಯ | ನ್ಯಾಯ |ಧರ್ಮ

ಮಹತ್ವಾಕಾಂಕ್ಷಿ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಕೇಂದ್ರದ ಸಮ್ಮತಿ : ಹರ್ಷ ವ್ಯಕ್ತಪಡಿಸಿದ ಸಚಿವ ಜಾರ್ಜ್

ಒಮ್ಮೆ ಹರಿದುಹೋಗಿ ವಿದ್ಯುತ್ ಉತ್ಪಾದನೆ ಮಾಡಿದ ನೀರನ್ನೇ ಮತ್ತೆ ಮೇಲಕ್ಕೆ ಪಂಪ್ ಮಾಡಿ ಅದೇ ನೀರಿನಿಂದ ಎರಡನೇ ಬಾರಿ ವಿದ್ಯುತ್ ಉತ್ಪಾದನೆ ಮಾಡುವ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಕೇಂದ್ರದಿಂದ ಅನುಮತಿ ಸಿಕ್ಕಿದೆ.

ಕರ್ನಾಟಕ ವಿದ್ಯುತ್ ನಿಗಮ ಅನುಷ್ಠಾನಗೊಳಿಸುತ್ತಿರುವ 2000 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಯೋಜನೆಗೆ ದಾಖಲೆ ಅವಧಿಯಲ್ಲಿ ಅನುಮೋದನೆ ನೀಡಲಾಗಿದೆ ಎಂದು ಕೇಂದ್ರ ವಿದ್ಯುತ್ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಲಿಂಗನಮಕ್ಕಿ ಜಲಾಶಯದ ಕೆಳಭಾಗದಲ್ಲಿರುವ ಶಿವಮೊಗ್ಗದ ತಲಕಳಲೆ ಮತ್ತು ಉತ್ತರ ಕನ್ನಡ ಜಿಲ್ಲೆಯ ಗೇರುಸೊಪ್ಪ ಜಲಾಶಯಗಳ ಮಧ್ಯ ಭಾಗದಲ್ಲಿ ಈ ಯೋಜನೆ ಅನುಷ್ಠಾನಗೊಳ್ಳಲಿದೆ.

ಇಂತಾದ್ದೊಂದು ಯೋಜನೆಗೆ ನೀರನ್ನು ಮೇಲಕ್ಕೆ ಪಂಪ್ ಮಾಡಲು ಸ್ವಲ್ಪ ಮಟ್ಟಿಗಿನ ವಿದ್ಯುತ್ ವೆಚ್ಚವಾಗುತ್ತದೆಯೇ ಹೊರತು ಮತ್ತೇನೂ ಬೇಕಿಲ್ಲ. ಒಮ್ಮೆ ವಿದ್ಯುತ್ ಉತ್ಪಾದನೆ ಮಾಡಿದ ನೀರನ್ನೇ ಹಲವಾರು ಬಾರಿ ಬಳಕೆ ಮಾಡಿ ವಿದ್ಯುತ್ ಉತ್ಪಾದನೆ ಮಾಡುವ ಮಹತ್ವಾಕಾಂಕ್ಷಿ ಯೋಚನೆ ಇದಾಗಿದೆ. ಇದಕ್ಕೆ ಯಥೇಚ್ಛವಾದ ನೀರಿನ ಅಗತ್ಯ ಇಲ್ಲದುದರಿಂದ ಮಿತ ನೀರಿನ ಬಳಕೆಯಲ್ಲೇ ಇದನ್ನು ಮಾಡಬಹುದಾಗಿದೆ.

ಹೆಚ್ಚುತ್ತಿರುವ ವಿದ್ಯುತ್ ಬೇಡಿಕೆಗೆ ಶರತಾವತಿ ಯೋಜನೆ ಅನಿವಾರ್ಯವಾಗಿದ್ದು, ಪರಿಸರಕ್ಕೆ ಹಾನಿಯಾಗದಂತೆ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಯೋಜನೆಗೆ ಅನುಮೋದನೆ ನೀಡಿರುವ ಕೇಂದ್ರ ವಿದ್ಯುತ್ಛಕ್ತಿ ಪ್ರಾಧಿಕಾರಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಧನ್ಯವಾದ ತಿಳಿಸಿದ್ದಾರೆ.

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನಕ್ಕೆ ತ್ವರಿತ ಕ್ರಮಗಳನ್ನು ಕೈಗೊಂಡು ಕೇಂದ್ರದಿಂದ ಅಗತ್ಯ ಅನುಮತಿಗಳನ್ನು ಪಡೆಯಲು ಪ್ರಸ್ತಾವನೆಗಳನ್ನು ಕಳುಹಿಸಲಾಗಿತ್ತು. ಇದೀಗ, ಕೇಂದ್ರದ ಪ್ರಾಧಿಕಾರ ರಾಜ್ಯದ ಡಿಪಿಆರ್‌ಗೆ ಒಪ್ಪಿಗೆ ನೀಡಿರುವುದು ನಮ್ಮ ಪ್ರಯತ್ನಕ್ಕೆ ಸಿಕ್ಕ ಫಲ. ಇನ್ನುಳಿದ ಅನುಮತಿಗಳನ್ನು ಶೀಘ್ರದಲ್ಲೇ ಪಡೆದು ಯೋಜನೆಯ ಅನುಷ್ಠಾನಕ್ಕೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬದ್ಧ ಎಂದು ಸಚಿವ ಜಾರ್ಜ್ ತಿಳಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page