Friday, March 28, 2025

ಸತ್ಯ | ನ್ಯಾಯ |ಧರ್ಮ

ಕೊಡಗಿನ ಪೊನ್ನಂಪೇಟೆಯಲ್ಲಿ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ

ಕೊಡಗು, ಮಾರ್ಚ್ 28: ಕೊಡಗು ಜಿಲ್ಲೆಯ ಪೊನ್ನಂಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂದೇ ಕುಟುಂಬದ ದಂಪತಿ, ತಾಯಿ ಮತ್ತು ಮಗಳನ್ನು ಮಾರಕಾಸ್ತ್ರದಿಂದ ದಾಳಿ ಮಾಡಿ ಭೀಕರವಾಗಿ ಕೊಲೆಗೈದ ಘಟನೆ ನಡೆದಿದೆ.

ಪೊನ್ನಂಪೇಟೆ ಠಾಣೆ ವ್ಯಾಪ್ತಿಯ ಬೇಗೂರು ಗ್ರಾಮದ ನಿವಾಸಿಗಳಾದ ಕರಿಯ (75), ಗೌರಿ (70) ದಂಪತಿ ಹಾಗೂ ಅವರ ಮಗಳು ನಾಗಿ (30) ಮತ್ತು ಮೊಮ್ಮಗಳು ಕಾವೇರಿ (5) ಈ ದುರ್ಘಟನೆಯಲ್ಲಿ ಕೊಲೆಯಾಗಿದ್ದಾರೆ. ಇಂದು ಬೆಳಿಗ್ಗೆ ಮನೆಯೊಳಗೆ ಜಗಳವೊಂದು ಉಂಟಾಗಿ, ಈ ನಾಲ್ವರ ಮೇಲೆ ಕತ್ತಿಯಿಂದ ತೀವ್ರವಾಗಿ ದಾಳಿ ನಡೆಸಿ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಪೊಲೀಸರು ಗಿರೀಶ್ ಎಂಬಾತ ಈ ಕೊಲೆಯನ್ನು ನಡೆಸಿ ಪರಾರಿಯಾಗಿದ್ದಾನೆ ಎಂದು ಶಂಕಿಸಿದ್ದು, ಆತನನ್ನು ಬಂಧಿಸಲು ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಮತ್ತು ಪೊನ್ನಂಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಸ್ಥಳೀಯರಿಂದ ಮಾಹಿತಿ ಸಂಗ್ರಹಿಸಿರುವ ಪೊಲೀಸರು, ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೌಟುಂಬಿಕ ವೈಮನಸ್ಸು ಅಥವಾ ಆರ್ಥಿಕ ಸಂಬಂಧಗಳು ಈ ಭೀಕರ ಕೃತ್ಯಕ್ಕೆ ಕಾರಣವಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಆರೋಪಿಯನ್ನು ಬಂಧಿಸಿದ ಬಳಿಕ ಘಟನೆಯ ನಿಖರ ಕಾರಣ ಬಹಿರಂಗವಾಗುವ ಸಾಧ್ಯತೆ ಇದೆ.

ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು, ಆರೋಪಿಯ ಶೋಧಕ್ಕಾಗಿ ಸತತ ಪ್ರಯತ್ನ ನಡೆಸುತ್ತಿದ್ದಾರೆ. ಈ ಘಟನೆಯು ಕೊಡಗಿನ ಶಾಂತಿಪ್ರಿಯ ಪ್ರದೇಶದಲ್ಲಿ ಆತಂಕವನ್ನು ಉಂಟುಮಾಡಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page