Thursday, April 17, 2025

ಸತ್ಯ | ನ್ಯಾಯ |ಧರ್ಮ

ಚುನಾವಣೆ ಘೋಷಣೆಗೂ ಮುನ್ನವೇ ಮುರಿದು ಬೀಳುತ್ತಾ ಎಐಎಡಿಎಂಕೆ ಮತ್ತು ಬಿಜೆಪಿ ಮೈತ್ರಿ?

ತಮಿಳುನಾಡು ಎಐಎಡಿಎಂಕೆ ಮತ್ತು ಬಿಜೆಪಿ ಜೊತೆಗಿನ ಮೈತ್ರಿ ಚುನಾವಣೆ ಘೋಷಣೆಗೂ ಮುನ್ನವೇ ಮುರಿದು ಬೀಳುವ ಲಕ್ಷಣಗಳು ಕಂಡುಬಂದಿವೆ. ಅದರಂತೆ ಎಐಎಡಿಎಂಕೆ ನಾಯಕ, ಪಕ್ಷದ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಎಂ ಪಳನಿಸ್ವಾಮಿ ಬಿಜೆಪಿ ಜೊತೆಗಿನ ಮೈತ್ರಿ ಚುನಾವಣೆ ವರೆಗೂ ಮಾತ್ರ ಎಂದು ಹೇಳಿದ್ದಾರೆ. ಇದು ಬಿಜೆಪಿ ನಾಯಕರಿಗೆ ಇರಿಸುವುದು ತಂದಿದೆ.

ಎಐಎಡಿಎಂಕೆ ನಾಯಕರ ಒತ್ತಾಯಕ್ಕೆ ಮಣಿದೇ ಬಿಜೆಪಿ ತನ್ನ ರಾಜ್ಯಾಧ್ಯಕ್ಷನನ್ನು ಬದಲಿಸಿದ್ದು ಎನ್ನುವ ಹಂತದಲ್ಲೇ ಈಗ ಎಐಎಡಿಎಂಕೆ ನಾಯಕ ಎಡಪ್ಪಾಡಿ ಎಂ ಪಳನಿಸ್ವಾಮಿ ಈಗ ಬಿಜೆಪಿ ಸರ್ಕಾರ ರಚನೆಯ ಭಾಗವಾಗಿ ಇರುವುದಿಲ್ಲ ಎಂದು ಹೇಳಿದ್ದಾರೆ. ‘ತಮಿಳುನಾಡಿನಲ್ಲಿ ಬಿಜೆಪಿ ಜತೆಗೆ ತಮ್ಮ ಪಕ್ಷದ ಮೈತ್ರಿ ಚುನಾವಣೆಗೆ ಮಾತ್ರ. ಗೆಲುವು ಸಾಧಿಸಿದರೆ ಸಮ್ಮಿಶ್ರ ಸರ್ಕಾರ ರಚಿಸುವುದಿಲ್ಲ’ ಎಂದು ಹೇಳಿರುವುದು ಬಿಜೆಪಿ ಪಾಳಯದಲ್ಲಿ ಅಸಮಾಧಾನ ಶುರುವಾಗಿದೆ.

ಇತ್ತ ಕೇಂದ್ರ ಸಚಿವ ಅಮಿತ್ ಷಾ ಮೈತ್ರಿ ಘೋಷಣೆ ಸಂದರ್ಭದಲ್ಲಿ ‘ನಾವು ಎಡಪ್ಪಾಡಿ ಕೆ. ಪಳನಿಸ್ವಾಮಿ ನೇತೃತ್ವದಲ್ಲಿ 2026ರ ವಿಧಾನಸಭಾ ಚುನಾವಣೆಯಲ್ಲಿ ಒಟ್ಟಾಗಿ ಸ್ಪರ್ಧಿಸುತ್ತೇವೆ ಮತ್ತು ಒಟ್ಟಾಗಿ ಸರ್ಕಾರ ರಚಿಸುತ್ತೇವೆ. ಚುನಾವಣೆಯ ನಂತರ ಸಮ್ಮಿಶ್ರ ಸರ್ಕಾರದ ರೂಪುರೇಷೆಗಳನ್ನು ಅಂತಿಮಗೊಳಿಸಲಾಗುವುದು’ ಎಂದು ಹೇಳಿದ್ದರು. ಆದರೆ ಪಳನಿಸ್ವಾಮಿ ಅವರು ಇದಕ್ಕೆ ತದ್ವಿರುದ್ಧವಾಗಿ ಹೇಳಿಕೆ ನೀಡಿದ್ದಾರೆ.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಪಳನಿಸ್ವಾಮಿ, ‘ಎರಡೂ ಪಕ್ಷಗಳು ಒಟ್ಟಾಗಿ ಹೋರಾಡುತ್ತವೆ ಮತ್ತು ಚುನಾವಣೆಯ ನಂತರ ಸರ್ಕಾರ ರಚಿಸುತ್ತವೆ ಎಂದು ಶಾ ಹೇಳಿದ್ದಾರೆ. ಆದರೆ ಅವರು ಸಮ್ಮಿಶ್ರ ಸರ್ಕಾರವೆಂದು ಹೇಳಿಲ್ಲ. ನೀವೇ ಅವರ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದೀರಿ ಮತ್ತು ಅದನ್ನು ದೊಡ್ಡ ವಿವಾದ ಮಾಡಿದ್ದೀರಿ. ಸರ್ಕಾರದಲ್ಲಿ ಬಿಜೆಪಿ ಪಾಲು ಇರುವುದಾಗಿ ಅವರು ಎಂದಿಗೂ ಹೇಳಿಲ್ಲ’ ಎಂದು ಹೇಳಿದ್ದಾರೆ. ಬಿಜೆಪಿ ಜೊತೆ ಸರ್ಕಾರ ರಚನೆಯ ಉದ್ದೇಶ ಏಕೆ ಎಂಬ ಸುದ್ದಿಗಾರರ ಪ್ರಶ್ನೆಗೆ ಈ ರೀತಿಯಾಗಿ ಉತ್ತರಿಸಿದ್ದಾರೆ.

‘ಎನ್‌ಡಿಎಯನ್ನು ರಾಷ್ಟ್ರಮಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ತಮಿಳುನಾಡಿನಲ್ಲಿ ಎಐಎಡಿಎಂಕೆ ಮುಖ್ಯಸ್ಥರು ಮುನ್ನಡೆಸಲಿದ್ದಾರೆ ಎಂದು ಶಾ ಸ್ಪಷ್ಟವಾಗಿ ಹೇಳಿದ್ದಾರೆ. ಈ ಬಗ್ಗೆ ಅವರಲ್ಲಿ ತುಂಬಾ ಸ್ಪಷ್ಟತೆ ಇದೆ’ ಎಂದು ಪಳನಿಸ್ವಾಮಿ ಹೇಳಿದ್ದಾರೆ.

ಈ ಎಲ್ಲಾ ಬೆಳವಣಿಗೆ ನೋಡಿದರೆ ತಮಿಳುನಾಡು ರಾಜಕಾರಣದ ಹೊಸ ಮೈತ್ರಿಯಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಸ್ಪಷ್ಟವಾಗಿ ಗೋಚರಿಸುತ್ತದೆ. ಹಾಗೂ ಪಳನಿಸ್ವಾಮಿಯವರ ಹೇಳಿಕೆ ಚುನಾವಣೆಗೂ ಮುನ್ನ ಸಮ್ಮಿಶ್ರ ಸರ್ಕಾರದ ವಿಚಾರದಲ್ಲಿ ಎರಡೂ ಪಕ್ಷಗಳ ನಡುವೆ ವಿವಾದದ ವಿಷಯವಾಗಬಹುದು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page