Saturday, May 31, 2025

ಸತ್ಯ | ನ್ಯಾಯ |ಧರ್ಮ

ಗ್ರಾಮ ಪಂಚಾಯಿತಿಗಳು ಆರ್ಥಿಕವಾಗಿ ಸದೃಢವಾದರೆ ಪಂಚಾಯತ್ ರಾಜ್‌ಗೆ ಬಲ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಗ್ರಾಮ ಪಂಚಾಯಿತಿಗಳನ್ನು ಆರ್ಥಿಕವಾಗಿ ಸದೃಢಗೊಳಿಸಿದರೆ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬಲಗೊಳಿಸಿದಂತೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಈಗಾಗಲೇ ಸುಮಾರು ₹1,200 ಕೋಟಿಯ ದಾಖಲೆ ಮೊತ್ತದ ತೆರಿಗೆ ಸಂಗ್ರಹಿಸುವ ಮೂಲಕ ಗ್ರಾಮ ಪಂಚಾಯಿತಿಗಳ ಆರ್ಥಿಕ ಸಂಪನ್ಮೂಲ ಕ್ರೋಡೀಕರಣದ ವಿಷಯದಲ್ಲಿ ಯಶಸ್ಸಿನ ಹಾದಿಯಲ್ಲಿದ್ದೇವೆ. ಇದಲ್ಲದೆ ಗ್ರಾಮ ಪಂಚಾಯಿತಿಗಳಿಗೆ ಸಂಬಂಧಿಸಿದ ಆಸ್ತಿ ನಗದೀಕರಣ ಯೋಜನೆಯನ್ನೂ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ಕುರಿತು ಪಂಚಾಯತ್ ರಾಜ್ ಅಧಿಕಾರಿಗಳ ಸಭೆ ನಡೆಸಿ, ಗ್ರಾಮ ಪಂಚಾಯಿತಿಗಳ ಆಸ್ತಿಗಳನ್ನು ಗುರುತಿಸುವ ಬಗ್ಗೆ ಸಲಹಾ ಸಮಿತಿಯ ಸಲಹೆಗಳನ್ನು ಪಡೆಯಬೇಕು, ಕಾಲಮಿತಿಯಲ್ಲಿ ಆಸ್ತಿಗಳ ಸರ್ವೇ ನಡೆಸಬೇಕು ಹಾಗೂ ಸರ್ವೇಯಾದ ಆಸ್ತಿಗಳ ವಿವರಗಳನ್ನು ಪಂಚತಂತ್ರ 2.0 ತಂತ್ರಾಂಶದಲ್ಲಿ ಅಪ್ಲೋಡ್ ಮಾಡಬೇಕು ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಗ್ರಾಮ ಪಂಚಾಯಿತಿಗಳ ಆಸ್ತಿಗಳ ಸರ್ವೇ ಮಾಡುವುದರಿಂದ ಅಭಿವೃದ್ಧಿ ಕಾಮಗಾರಿಗಳ ನೀಲನಕ್ಷೆ ತಯಾರಿಸಲು, ಗ್ರಾಮ ಪಂಚಾಯಿತಿಯ ಆದಾಯ ಹೆಚ್ಚಿಸಲು, ಗ್ರಾಮಗಳ ಸಾಮಾಜಿಕ, ಆರ್ಥಿಕ ಸ್ಥಿತಿಗತಿಗಳನ್ನು ಅಂದಾಜಿಸಲು ಸೇರಿದಂತೆ ಹಲವು ಆಯಾಮಗಳಲ್ಲಿ ಅನುಕೂಲತೆಗಳು ಸಾಧ್ಯವಾಗುತ್ತವೆ.
ಇದರೊಂದಿಗೆ, ಗ್ರಾಮ ಪಂಚಾಯಿತಿಗಳ ಸಂಪನ್ಮೂಲಗಳು ಸಮರ್ಥವಾಗಿ ಸದ್ಬಳಕೆಯಾದಲ್ಲಿ ಸ್ಥಳೀಯ ಸರ್ಕಾರಗಳಿಗೆ ಹೆಚ್ಚಿನ ಬಲ ಬರಲಿದೆ ಎಂದಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page