Monday, June 23, 2025

ಸತ್ಯ | ನ್ಯಾಯ |ಧರ್ಮ

ಬೆಂಗಳೂರಿನಲ್ಲಿ 4 ಸಾವಿರ ಕೋಟಿ ಮೌಲ್ಯದ ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಿದ ಅರಣ್ಯ ಇಲಾಖೆ

ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಿಗ್ಗೆಯೇ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿದ್ದು, ಬೆಂಗಳೂರು ಪೂರ್ವ ಭಾಗದ ಸರ್ವೇ ನಂ 1 ರಲ್ಲಿ 120 ಎಕರೆಗೂ ಹೆಚ್ಚು ಅರಣ್ಯ ಪ್ರದೇಶವನ್ನು ತೆರವುಗೊಳಿಸಲಾಗಿದೆ. ಬೆಂಗಳೂರು ಪೂರ್ವ ತಾಲ್ಲೂಕಿನ ಕಾಡುಗೋಡಿ ಪ್ಲಾಂಟೇಶನ್ ನಲ್ಲಿ ಒತ್ತುವರಿಯಾಗಿದ್ದ 120 ಎಕರೆ ಅರಣ್ಯ ಪ್ರದೇಶವನ್ನು ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ಮೇರೆಗೆ ತೆರವುಗೊಳಿಸಿದೆ.

ಬೆಂಗಳೂರು ನಗರ ಅರಣ್ಯ ಇಲಾಖೆ ಅಧಿಕಾರಿಗಳ ನೇತೃತ್ವದ ತಂಡ ಕಾಡುಗೋಡಿಯ ಪ್ಲಾಂಟೇಷನ್ ನ ಅರಣ್ಯ ಭೂಮಿಯ ಒತ್ತುವರಿ ತೆರವು ಮಾಡಿರುವುದೂ ಅಲ್ಲದೆ, ಗಡಿ ಗುರುತಿಸಿ ಸ್ಥಳೀಯ ಪ್ರಭೇದದ ಸಸಿಗಳನ್ನು ನೆಟ್ಟಿದ್ದಾರೆ. ಈ ಪ್ರಕ್ರಿಯೆ ಇನ್ನೂ ಮುಂದುವರೆದಿದೆ.

ಇಂದು ಒತ್ತುವರಿ ತೆರವುಗೊಳಿಸಿದ ಅರಣ್ಯ ಭೂಮಿ ಮಾರುಕಟ್ಟೆ ಮೌಲ್ಯ ಸುಮಾರು 4 ಸಾವಿರ ಕೋಟಿ ರೂಪಾಯಿಗೂ ಅಧಿಕ ಎಂದು ಅಂದಾಜಿಸಲಾಗಿದೆ.

ಇತ್ತೀಚೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆಯವರು ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅರಣ್ಯ ಇಲಾಖೆಗೆ ಸಂಬಂಧಿಸಿದ ಭೂ ಒತ್ತುವರಿ ಯತೇಚ್ಛವಾಗಿ ನಡೆದಿದೆ. ಅದರ ತೆರವು ಕಾರ್ಯಾಚರಣೆ ಆದಷ್ಟು ಬೇಗ ನಡೆಯಲಿದೆ ಎಂಬ ಸೂಚನೆ ನೀಡಿದ್ದರು.

ಅದರಂತೆ ಅರಣ್ಯ ಇಲಾಖೆ ಸಿಬ್ಬಂದಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಒತ್ತುವರಿ ತೆರವುಗೊಳಿಸಿದ್ದಾರೆ. ಬೆಂಗಳೂರು ವ್ಯಾಪಕವಾಗಿ ಬೆಳೆಯುತ್ತಿದ್ದು, ಹಸಿರು ಹೊದಿಕೆ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ. ಹೀಗಾಗಿ ಶ್ವಾಸತಾಣಗಳ ಸಂರಕ್ಷಣೆ ಮಾಡಬೇಕು, ನಿಯಮಾನುಸಾರ ಅರಣ್ಯ ಭೂಮಿ ಒತ್ತುವರಿ ತೆರವು ಮಾಡಬೇಕು ಎಂದು ಸ್ಪಷ್ಟ ಸೂಚನೆ ನೀಡಿದ್ದರು.

ಈಶ್ವರ ಖಂಡ್ರೆ ಅವರು ಅರಣ್ಯ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಕಳೆದ 2 ವರ್ಷದಲ್ಲಿ ಬೆಂಗಳೂರಿನಲ್ಲಿ ಒಟ್ಟು 128 ಎಕರೆ ಅರಣ್ಯ ಭೂಮಿ ಒತ್ತವರಿ ತೆರವುಗೊಳಿಸಲಾಗಿದ್ದು, ಈ 120 ಎಕರೆ ಸೇರಿದರೆ, ಒಟ್ಟು 248 ಎಕರೆ ಆಗಲಿದ್ದು, ಇದರ ಮಾರುಕಟ್ಟೆ ಮೌಲ್ಯ 8 ಸಾವಿರ ಕೋಟಿ ರೂ.ಗೂ ಅಧಿಕವಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page