Monday, July 1, 2024

ಸತ್ಯ | ನ್ಯಾಯ |ಧರ್ಮ

ಬೋರ್ಡ್‌ ಹಾಕಿಸಬೇಕಿರುವುದು ಸರ್ಕಾರಿ ಕಚೇರಿಗಳಿಗಲ್ಲ ಸಚಿವರ ಮನೆ ಮುಂದೆ: ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ವಿವಿಧ ರಾಜಕೀಯ ಪಕ್ಷಗಳು ಮತ್ತು ಸರ್ಕಾರಗಳ ವಿರುದ್ಧ 10ರಿಂದ 40% ಕಮಿಷನ್‌ ಭ್ರಷ್ಟಾಚಾರದ ಆಪಾದನೆ ಕೇಳಿಬರುತ್ತಿರುವ ಹಿನ್ನಲೆ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ʼನನಗೆ ಲಂಚ ಕೊಡಬೇಕಿಲ್ಲ ನಾನು ಭ್ರಷ್ಟ ಅಧಿಕಾರಿ ಆಗಲಾರೆ ಎಂಬ ಶಿರ್ಷಿಕೆಯ ನಾಮಫಲಕಗಳನ್ನು ಕಡ್ಡಾಯವಾಗಿ ಹಾಕುವಂತೆ ಸರ್ಕಾರ ಹೊರಡಿಸಿರುವ ಅಧಿಕೃತ ಆದೇಶದ ಕುರಿತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು ʼನನಗೆ ಲಂಚ ಕೊಡಬೇಕಾಗಿಲ್ಲ, ನಾನು ಭ್ರಷ್ಟ ಅಧಿಕಾರಿಯಾಗಲಾರೆʼ ಎಂದು ಸರ್ಕಾರಿ ಕಚೇರಿಗಳಲ್ಲಿ ರಾಜ್ಯ ಬಿಜೆಪಿ ಸರ್ಕಾರ ಬೋರ್ಡ್ ಹಾಕಿಸುತ್ತಂತೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಮೊದಲು ನಿಮ್ಮ ಮತ್ತು ಸಚಿವರ ಕಚೇರಿಗಳು ಹಾಗೂ ಮನೆ ಮುಂದೆ ಈ ಬೋರ್ಡ್ ಹಾಕಿಸಿ ಎಂದು ಟೀಕಿಸಿದ್ದಾರೆ.

ಸರ್ಕಾರಿ ಗುತ್ತಿಗೆದಾರರು ಲಂಚದ ಆರೋಪ ಮಾಡಿರುವುದು ಸಚಿವರ ಮೇಲೆ, ಅಧಿಕಾರಿಗಳ ಮೇಲೆ ಅಲ್ಲ. ಅಧಿಕಾರಿಗಳನ್ನು ತೋರಿಸಿ ಲಂಚ-ಕಮಿಷನ್ ಆರೋಪದಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಬೇಡ. ಲಂಚಾವತಾರ ನಾಟಕದಲ್ಲಿ ಅಧಿಕಾರಿಗಳದ್ದು ಪೋಷಕ ಪಾತ್ರ, ಬಿಜೆಪಿ ಸರ್ಕಾರದ ಇಲಾಖಾ ಸಚಿವರದ್ದೇ ಮುಖ್ಯ ಪಾತ್ರ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಚಿವರಿಂದ ರಕ್ಷಣೆಯ ಅಭಯ ಇಲ್ಲದೆ ಯಾವ ಅಧಿಕಾರಿಯೂ ಲಂಚಕ್ಕೆ ಕೈಯೊಡ್ಡುವ ಸಾಹಸ ಮಾಡುವುದಿಲ್ಲ. ಸಚಿವರು ಪ್ರಾಮಾಣಿಕವಾಗಿದ್ದಾಗ ಸರ್ಕಾರಿ ಅಧಿಕಾರಿಗಳು ಕೂಡಾ ಪ್ರಾಮಾಣಿಕವಾಗಿರುತ್ತಾರೆ. ಸಚಿವರು ಭ್ರಷ್ಟರಾದಾಗ “ಯಥಾ ರಾಜಾ ತಥಾ ಪ್ರಜಾ” ಅಷ್ಟೆ ಎಂದು ಸಿದ್ದರಾಮಯ್ಯ ದೂರಿದ್ದಾರೆ.

ಬೊಮ್ಮಾಯಿ ಅವರೇ, ಈ ಬೋರ್ಡ್ ಬರೆಸಿ ಹಾಕುವ ನಾಟಕಗಳನ್ನೆಲ್ಲ ನಿಲ್ಲಿಸಿ. ಮೊದಲು 40% ಕಮಿಷನ್ ಆರೋಪವೂ ಸೇರಿದಂತೆ ಸಚಿವರುಗಳ ಮೇಲಿನ ಭ್ರಷ್ಟಾಚಾರದ ಆರೋಪಗಳ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶ ಹೊರಡಿಸಿ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಸರ್ಕಾರಿ ಕಚೇರಿಗಳಲ್ಲಿ “ಲಂಚ ಕೊಡಬೇಕಾಗಿಲ್ಲ” ಎಂಬ ಬೋರ್ಡ್ ಅಳವಡಿಸುವ ಮೊದಲು ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿ. ನೊಂದ ಜನರು ದೂರು ಕೊಟ್ಟರೆ ಭ್ರಷ್ಟ ಅಧಿಕಾರಿಗಳ ವಿರುದ್ಧ ತಕ್ಷಣ ಕ್ರಮಕೈಗೊಳ್ಳಿ ಎಂದು ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು