ಪಶ್ಚಿಮ ಏಷ್ಯಾ ಬಿಕ್ಕಟ್ಟು: ನಾಳೆ ಕೇಂದ್ರದಿಂದ ಸರ್ವಪಕ್ಷ ಸಭೆ

ದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉಲ್ಬಣಿಸಿರುವ ಸಂಕಷ್ಟದ ಪರಿಸ್ಥಿತಿಯ ಕುರಿತು ಚರ್ಚಿಸಲು ಕೇಂದ್ರ ಸರ್ಕಾರವು ಮಾರ್ಚ್ 25ರ ಬುಧವಾರ (ನಾಳೆ) ಸಂಜೆ 5 ಗಂಟೆಗೆ ಸರ್ವಪಕ್ಷ ಸಭೆ ಕರೆದಿದೆ.

ಜಾಗತಿಕ ಮತ್ತು ಪ್ರಾದೇಶಿಕ ಭದ್ರತಾ ವಿದ್ಯಮಾನಗಳ ಹಿನ್ನೆಲೆಯಲ್ಲಿ ಭಾರತದ ರಕ್ಷಣಾ ಸನ್ನದ್ಧತೆಯನ್ನು ಪರಿಶೀಲಿಸಲು ಮಂಗಳವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆದ ಬೆನ್ನಲ್ಲೇ ಈ ನಿರ್ಧಾರ ಹೊರಬಿದ್ದಿದೆ.

ಇಂದಿನ ಸಭೆಯಲ್ಲಿ ಸಿಡಿಎಸ್ ಜನರಲ್ ಅನಿಲ್ ಚೌಹಾಣ್, ಏರ್ ಚೀಫ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್, ಜನರಲ್ ಉಪೇಂದ್ರ ದ್ವಿವೇದಿ, ಅಡ್ಮಿರಲ್ ದಿನೇಶ್ ಕೆ. ತ್ರಿಪಾಠಿ ಮತ್ತು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಅಧ್ಯಕ್ಷ ಸಮೀರ್ ಕಾಮತ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು. ಪಶ್ಚಿಮ ಏಷ್ಯಾದ ಯುದ್ಧದ ಪರಿಸ್ಥಿತಿಯು ಭಾರತದ ಮೇಲೆ ಬೀರಬಹುದಾದ ಪರಿಣಾಮಗಳು ಮತ್ತು ರಾಷ್ಟ್ರೀಯ ಭದ್ರತೆಯ ದೃಷ್ಟಿಯಿಂದ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಲಾಗಿದೆ.

ನಾಳೆ ನಡೆಯಲಿರುವ ಸರ್ವಪಕ್ಷ ಸಭೆಯಲ್ಲಿ ಸರ್ಕಾರವು ವಿವಿಧ ರಾಜಕೀಯ ಪಕ್ಷಗಳ ನಾಯಕರಿಗೆ ಪ್ರಸ್ತುತ ಜಾಗತಿಕ ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡಲಿದ್ದು, ಈ ವಿಷಯದಲ್ಲಿ ದೇಶವು ಒಂದೇ ಧ್ವನಿಯಲ್ಲಿ ನಿಲ್ಲುವಂತೆ ಮನವಿ ಮಾಡುವ ಸಾಧ್ಯತೆಯಿದೆ.

Related Articles

ಇತ್ತೀಚಿನ ಸುದ್ದಿಗಳು