ಜಾರ್ಖಂಡ್ | ವಿದ್ಯಾರ್ಥಿಗಳನ್ನು ಬೇಟಿಯಾಗಿ ಮಾತುಕತೆ ನಡೆಸಿ: ಹೇಮಂತ್‌ ಸೊರೆನ್‌ ಅವರಿಗೆ ಪತ್ರ ಬರೆದ ರಾಹುಲ್‌ ಗಾಂಧಿ

ರಾಂಚಿ/ಹೊಸದೆಹಲಿ: ಜಾರ್ಖಂಡ್‌ನಲ್ಲಿ ನಡೆಯುತ್ತಿರುವ ನೇಮಕಾತಿ ಪರೀಕ್ಷಾ ಅಕ್ರಮಗಳ ವಿರುದ್ಧದ ವಿದ್ಯಾರ್ಥಿ ಹೋರಾಟಕ್ಕೆ ಸಂಬಂಧಿಸಿದಂತೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರಿಗೆ ಪತ್ರ ಬರೆದಿದ್ದಾರೆ. ಪ್ರತಿಭಟನಾನಿರತ ವಿದ್ಯಾರ್ಥಿ ನಿಯೋಗವನ್ನು ಖುದ್ದು ಭೇಟಿಯಾಗಿ ಅವರ ಅಹವಾಲುಗಳನ್ನು ಆಲಿಸಿ ಸಮಸ್ಯೆ ಬಗೆಹರಿಸುವಂತೆ ಅವರು ಸಲಹೆ ನೀಡಿದ್ದಾರೆ.

ಆಗಸ್ಟ್ 14 ರಂದು ಬರೆದ ಪತ್ರದಲ್ಲಿ, “ಶಾಂತಿಯುತ ಪ್ರತಿಭಟನೆಯ ಹಕ್ಕು ನಮ್ಮ ಸಂವಿಧಾನ ನೀಡಿರುವ ಪ್ರಜಾಪ್ರಭುತ್ವದ ಮೂಲಭೂತ ಆಧಾರಸ್ತಂಭವಾಗಿದೆ. ಜಾರ್ಖಂಡ್‌ನಲ್ಲಿ ರಾಜ್ಯ ನೇಮಕಾತಿ ಪರೀಕ್ಷೆಗಳ ಅಕ್ರಮಗಳನ್ನು ವಿರೋಧಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟ ನ್ಯಾಯಯುತವಾಗಿದೆ. ಸರ್ಕಾರ ಈಗಾಗಲೇ ಸಮಿತಿ ರಚಿಸಿ ಸಂವಾದ ಆರಂಭಿಸಿರುವುದು ಸ್ವಾಗತಾರ್ಹವಾಗಿದ್ದರೂ, ಕೆಲ ವಿದ್ಯಾರ್ಥಿಗಳು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮುಂದುವರಿಸಿದ್ದಾರೆ. ಆದ್ದರಿಂದ ತಾವು ವೈಯಕ್ತಿಕವಾಗಿ ವಿದ್ಯಾರ್ಥಿ ಪ್ರತಿನಿಧಿಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದರೆ, ಸರ್ಕಾರದ ಬದ್ಧತೆಯ ಬಗ್ಗೆ ಅವರಲ್ಲಿ ಮತ್ತಷ್ಟು ವಿಶ್ವಾಸ ಮೂಡುತ್ತದೆ” ಎಂದು ರಾಹುಲ್ ಗಾಂಧಿ ಉಲ್ಲೇಖಿಸಿದ್ದಾರೆ.

ದೇಶದ ಶಿಕ್ಷಣ ವ್ಯವಸ್ಥೆಯನ್ನು ಆರ್‌ಎಸ್‌ಎಸ್ ಮತ್ತು ಬಿಜೆಪಿ ಕಪಿಮುಷ್ಠಿಯಲ್ಲಿಟ್ಟುಕೊಂಡು ವಿದ್ಯಾರ್ಥಿಗಳ ಶೋಷಣೆಗೆ ಬಳಸಿಕೊಳ್ಳುತ್ತಿವೆ ಎಂದು ಆರೋಪಿಸಿರುವ ಅವರು, ಬಿಕ್ಕಟ್ಟಿನ ಈ ಸಂದರ್ಭದಲ್ಲಿ ಯುವಜನರ ಧ್ವನಿಗೆ ಕಿವಿಯಾಗಿ ಅವರ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಸರ್ಕಾರ ಎಲ್ಲಾ ರೀತಿಯ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.

rahul-gandhi-writes-letter-jharkhand-cm-hemant-soren-students-protest-meeting

Related Articles

ಇತ್ತೀಚಿನ ಸುದ್ದಿಗಳು