ಮುಂದಿನ ವರ್ಷ ಫೆಬ್ರುವರಿಯಲ್ಲಿ ದೆಹಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಆಮ್ ಆದ್ಮಿ ಪಕ್ಷ ಈ ಬಾರಿಯ ಚುನಾವಣೆಗೆ ತಯಾರಿ ನಡೆಸುತ್ತಿದೆ.
ಇದರ ಭಾಗವಾಗಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳನ್ನೂ ಘೋಷಿಸಲಾಗಿದೆ. ಈಗಾಗಲೇ ಎರಡು ಹಂತಗಳಲ್ಲಿ ಒಟ್ಟು 31 ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಈ ಚುನಾವಣೆಯಲ್ಲಿ ಆಪ್ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ʼದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಸ್ವಂತ ಬಲದಿಂದ ಚುನಾವಣೆ ಗೆಲ್ಲುತ್ತದೆ. ಕಾಂಗ್ರೆಸ್ ಜೊತೆ ಯಾವುದೇ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇಲ್ಲ’ ಎಂದು ಕೇಜ್ರಿವಾಲ್ ಹೇಳಿದರು.
ದೆಹಲಿ ವಿಧಾನಸಭೆ ಚುನಾವಣೆಗೆ ಮುನ್ನ ಸೀಟು ಹಂಚಿಕೆಗಾಗಿ ಇಂಡಿಯಾ ಮೈತ್ರಿಕೂಟದ ಇತರ ಪಾಲುದಾರ ಪಕ್ಷಗಳೊಂದಿಗೆ ಎಎಪಿ ಮಾತುಕತೆ ನಡೆಸುತ್ತಿದೆ ಎಂದು ವರದಿಗಳಿವೆ. ಕಾಂಗ್ರೆಸ್ಗೆ 15 ಮತ್ತು ಮೈತ್ರಿಕೂಟದ ಇತರ ಪಕ್ಷಗಳಿಗೆ ಒಂದು ಅಥವಾ ಎರಡು ಸ್ಥಾನಗಳನ್ನು ಹಂಚಿಕೆ ಮಾಡಲಾಗಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ಸಂಬಂಧಿತ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡುತ್ತಿವೆ. ಈ ಹಿನ್ನೆಲೆಯಲ್ಲಿ ಕೇಜ್ರಿವಾಲ್ ಮೇಲಿನಂತೆ ಪ್ರತಿಕ್ರಿಯಿಸಿದ್ದಾರೆ.