ಹೊಸದಿಲ್ಲಿ: ಇಂಡಿಯಾ ಮೈತ್ರಿಕೂಟದಿಂದ ಕಾಂಗ್ರೆಸ್ ಪಕ್ಷವನ್ನು ಹೊರ ಹಾಕಲು ಇತರ ಪಕ್ಷಗಳೊಂದಿಗೆ ಸಮಾಲೋಚನೆ ನಡೆಸಲಾಗುತ್ತಿದೆ ಎಂದು ಗುರುವಾರ ಆಪ್ ನಾಯಕರೊಬ್ಬರು ಹೇಳಿಕೆ ನೀಡಿದ್ಯಾರುವ ಕುರಿತು ವರದಿಯಾಗಿದೆ.
2013ರಲ್ಲಿ 40 ದಿನಗಳ ಕೇಜ್ರಿವಾಲ್ ಸರಕಾರಕ್ಕೆ ಕಾಂಗ್ರೆಸ್ ಬೆಂಬಲ ನೀಡಿದ್ದೇ ರಾಷ್ಟ್ರ ರಾಜಧಾನಿಯಲ್ಲಿ ಕಾಂಗ್ರೆಸ್ ಪಕ್ಷ ದುರ್ಬಲಗೊಳ್ಳಲು ಪ್ರಮುಖ ಕಾರಣ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಅಜಯ್ ಮಾಕೆನ್ ಇತ್ತೀಚೆಗೆ ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಯಾಗಿ ಆಪ್ ನಾಯಕರು ಉಚ್ಚಾಟನೆಯ ಹೇಳಿಕೆ ನೀಡಿದ್ದಾರೆ.
ಚುನಾವಣಾ ರಾಜ್ಯವಾದ ದಿಲ್ಲಿಯಲ್ಲಿ ಮಾಕೆನ್ ಹಾಗೂ ಇನ್ನಿತರ ಕಾಂಗ್ರೆಸ್ ನಾಯಕರು ನೀಡಿರುವ ಹೇಳಿಕೆಗಳಿಂದ ನಮ್ಮ ನಾಯಕರು ಅಸಮಾಧಾನಗೊಂಡಿದ್ದಾರೆ ಎಂದು ಆಪ್ ಮೂಲಗಳು ತಿಳಿಸಿವೆ ಎಂದು ವರದಿಯಾಗಿದೆ. ಈ ಚುನಾವಣೆಯಲ್ಲಿ ಎರಡೂ ಪಕ್ಷಗಳು ಪ್ರತ್ಯೇಕವಾಗಿ ಸ್ಪರ್ಧಿಸುತ್ತಿವೆ. ದಿಲ್ಲಿ ವಿಧಾನಸಭಾ ಚುನಾವಣೆ ಮುಂದಿನ ವರ್ಷದ ಫೆಬ್ರವರಿಯಲ್ಲಿ ನಡೆಯುವ ಸಾಧ್ಯತೆ ಇದೆ.
ತಮ್ಮ ಪಕ್ಷದ ಯೋಜನೆಗಳನ್ನು ಹಂಚಿಕೊಳ್ಳಲು ಇಂದು ಮಧ್ಯಾಹ್ನ 1 ಗಂಟೆಗೆ ದಿಲ್ಲಿ ಮುಖ್ಯಮಂತ್ರಿ ಅತಿಶಿ ಹಾಗೂ ಆಪ್ ನ ಹಿರಿಯ ನಾಯಕ ಸಂಜಯ್ ಸಿಂಗ್ ಸುದ್ದಿಗೋಷ್ಠಿಯನ್ನು ಹಮ್ಮಿಕೊಂಡಿದ್ದಾರೆ. ಮಹಾತ್ಮ ಗಾಂಧಿಯು ಕಾಂಗ್ರೆಸ್ ಅಧ್ಯಕ್ಷತೆ ವಹಿಸಿದ್ದ ಶತಮಾನೋತ್ಸವವನ್ನು ಆಚರಿಸಲು ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ಆಯೋಜನೆಗೊಂಡಿರುವ ದಿನವನ್ನೇ ಆಪ್ ನಾಯಕರು ತಮ್ಮ ಆಕ್ರೋಶವನ್ನು ಹೊರಹಾಕಲು ಆಯ್ದುಕೊಂಡಿದ್ದಾರೆ.
ಹರ್ಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪರಾಭವಗೊಂಡ ನಂತರ, ಕಾಂಗ್ರೆಸ್ ನಾಯಕತ್ವದ ವಿರುದ್ಧ ವಾಗ್ದಾಳಿ ನಡೆಸಿದ್ದ ತೃಣಮೂಲ ಕಾಂಗ್ರೆಸ್ ಹಾದಿಯನ್ನೇ ಆಪ್ ಕೂಡಾ ಹಿಡಿದಿರುವುದು ಸ್ಪಷ್ಟವಾಗುತ್ತಿದೆ.