ಮಲೆ ಮಹದೇಶ್ವರ ವನ್ಯಜೀವಿಧಾಮದ ಹೂಗ್ಯಂ ವಲಯದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ನಾಲ್ಕು ಹುಲಿ ಮರಿಗಳು ಏಕಕಾಲದಲ್ಲಿ ಮೃತಪಟ್ಟ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶದ ಅನ್ವಯ ತನಿಖೆ ನಡೆಸಿದ ಇಲಾಖೆ ಅಧಿಕಾರಿಗಳು ಐವರು ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.
ಕಳೆದ ಬುಧವಾರ ಸಂಜೆ ಈ ಭಾಗದ ಅರಣ್ಯ ಸಿಬ್ಬಂದಿ ಗಸ್ತು ನಡೆಸುವಾಗ ತಾಯಿ ಹುಲಿ ಸೇರಿದಂತೆ ನಾಲ್ಕು ಮಂದಿ ಹುಲಿಗಳ ಅಸಹಜ ಸಾವು ಪತ್ತೆಯಾಗಿದೆ. ಮೇಲ್ನೋಟಕ್ಕೆ ಹುಲಿಗಳ ಸಾವು ವಿಷಪ್ರಾಶನದಿಂದ ಆಗಿರುವ ಶಂಕೆ ವ್ಯಕ್ತವಾಗಿದೆ.
ಹುಲಿಗಳು ಮೃತಪಟ್ಟ ಕೆಲವೇ ದೂರದಲ್ಲಿ ಹಸುವೊಂದರ ಕಳೇಬರ ಸಹ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಇದೊಂದು ಅಸಹಜ ಸಾವು ಮತ್ತು ವಿಷಪ್ರಾಶನದಿಂದಲೇ ನಡೆದಿದೆ ಎಂದು ಅರಣ್ಯ ಇಲಾಖೆ ಮೂಲಗಳು ದೃಢಪಡಿಸಿವೆ.
ಹಸುವಿಗೆ ಇಬ್ಬರು ವಿಷಪ್ರಾಶನ ಮಾಡಿರುವ ಬಗ್ಗೆ ಇದೀಗ ಶಂಕೆ ವ್ಯಕ್ತವಾಗುತ್ತಿದೆ. ಹಸುವಿಗೆ ಇಟ್ಟ ವಿಷಯದಿಂದ ಹುಲಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗುತ್ತಿದೆ.ಸದ್ಯ ಅರಣ್ಯ ಇಲಾಖೆ ಅಧಿಕಾರಿಗಳು ಐವರನ್ನು ಅರೆಸ್ಟ್ ಮಾಡಿ ವಿಚಾರಣೆಗೆ ಒಳಪಡಿಸಿದ್ದಾರೆ. ಹುಲಿ ಸಾವು ಸಂಬಂಧ ಐವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.