ಗುತ್ತಿಗೆದಾರನ ಬಳಿ ಲಂಚದ ಬೇಡಿಕೆ ಇಡುವ ಸಂದರ್ಭದಲ್ಲಿ ಜಾತಿ ನಿಂದನೆ ಮತ್ತು ಕೊಲೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಈಗಾಗಲೇ ಶಾಸಕ ಮುನಿರತ್ನ ಅವರ ಮೇಲೆ ಪ್ರಕರಣ ದಾಖಲಾಗಿದೆ.
ಇದರ ಬೆನ್ನಲ್ಲೇ ಲಂಚದ ವ್ಯವಹಾರದ ಸಂದರ್ಭದಲ್ಲಿ ಒಕ್ಕಲಿಗ ಮತ್ತು ದಲಿತ ಸಮುದಾಯವನ್ನು ನಿಂದಿಸಿರುವುದನ್ನು ಖಂಡಿಸಿ ದಲಿತ, ಒಕ್ಕಲಿಗ ಹಾಗೂ ಹಿಂದುಳಿದ ಸಮುದಾಯಗಳ ಸಹಯೋಗದೊಂದಿಗೆ ಅಕ್ಟೋಬರ್ 1ರಂದು ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ತಿಳಿಸಿದ್ದಾರೆ.
ಶುಕ್ರವಾರ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸಭೆ ಸೇರಿದ್ದ ಸಮುದಾಯಗಳ ಮುಖಂಡರು, ಸಾಹಿತಿಗಳು, ಚಿಂತಕರು, ಹೋರಾಟಗಾರರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರಿಂದ ಆಯ್ಕೆಯಾದ ಜನಪ್ರತಿಯೊಬ್ಬರು ಈ ರೀತಿಯ ಜಾತಿ ವಿರೋಧಿ ಹೇಳಿಕೆಗಳನ್ನು ಕೊಡುವುದು, ಸಂವಿಧಾನ ವಿರೋಧಿ ಮತ್ತು ಕಾನೂನು ಬಾಹಿರವಾಗಿರುತ್ತದೆ. ಶಾಸಕ ಮುನಿರತ್ನ ಸಮುದಾಯಗಳ ವಿರುದ್ಧ ನೀಡಿದ ಹೇಳಿಕೆಗಳಿಂದ ಒಕ್ಕಲಿಗ ಸಮುದಾಯ ಮತ್ತು ದಲಿತ ಸಮುದಾಯದ ಭಾವನೆಗಳಿಗೆ ಧಕ್ಕೆಯುಂಟಾಗಿದೆ ಎಂದು ಹೇಳಿದ್ದಾರೆ.
‘ದಲಿತ, ಒಕ್ಕಲಿಗ ಸಮುದಾಯಗಳನ್ನು ಅವಮಾನಿಸಿದ ಶಾಸಕ ಮುನಿರತ್ನ ವಿರುದ್ಧ ಎಲ್ಲ ತಳ ಸಮುದಾಯಗಳು ಸೇರಿ ಬೃಹತ್ ಸಮಾವೇಶ ನಡೆಸಲು ತೀರ್ಮಾನಿಸಿದ್ದು, ಮುನಿರತ್ನರನ್ನು ಶಾಸಕ ಸ್ಥಾನದಿಂದ ಅಮಾನತುಗೊಳಿಸಿ, ಗಡಿಪಾರು ಮಾಡಬೇಕು. ಈ ಕುರಿತು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು. ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಎಸ್ಸಿ-ಎಸ್ಟಿ, ಒಬಿಸಿ ಸಮುದಾಯಗಳ ಸ್ವಾಮೀಜಿಗಳ ನೇತೃತ್ವದಲ್ಲಿ ಸುದ್ದಿಗೋಷ್ಠಿ ನಡೆಸಲಾಗುವುದು’ ಎಂದು ಸಂಘಟಕ ಮಾವಳ್ಳಿ ಶಂಕರ್ ಕರೆ ನೀಡಿದ್ದಾರೆ.
ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ನಡೆದ ಸಭೆಯಲ್ಲಿ ದಲಿತ ಮತ್ತು ಒಕ್ಕಲಿಗ ಸಮುದಾಯದ ಪ್ರಮುಖ ನಾಯಕರುಗಳು ಉಪಸ್ಥಿತರಿದ್ದರು.