ಜಾರ್ಖಂಡ್‌ | ಏರ್ ಆಂಬ್ಯುಲೆನ್ಸ್ ಪತನ: ರೋಗಿ, ವೈದ್ಯರು ಸೇರಿ ಏಳು ಮಂದಿ ದುರ್ಮರಣ

ಜಾರ್ಖಂಡ್‌ನ ಚತ್ರಾ ಜಿಲ್ಲೆಯಲ್ಲಿ ಸೋಮವಾರ ಸಂಜೆ ಸಂಭವಿಸಿದ ಭೀಕರ ಏರ್ ಆಂಬ್ಯುಲೆನ್ಸ್ ಅಪಘಾತದಲ್ಲಿ ರೋಗಿ ಮತ್ತು ವೈದ್ಯರು ಸೇರಿದಂತೆ ವಿಮಾನದಲ್ಲಿದ್ದ ಎಲ್ಲಾ ಏಳು ಮಂದಿ ಮೃತಪಟ್ಟಿದ್ದಾರೆ. ರಾಂಚಿಯ ವಿಮಾನ ನಿಲ್ದಾಣದಿಂದ ಸಂಜೆ 7:11ಕ್ಕೆ ದೆಹಲಿಯತ್ತ ಹೊರಟಿದ್ದ ಈ ವಿಮಾನವು ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ನಿಯಂತ್ರಣ ಕೊಠಡಿಯೊಂದಿಗೆ ಸಂಪರ್ಕ ಕಳೆದುಕೊಂಡಿತ್ತು.

ರೆಡ್‌ಬರ್ಡ್ ಏರ್‌ವೇಸ್ ಸಂಸ್ಥೆಗೆ ಸೇರಿದ ಈ ವಿಮಾನವು ಸಿಮರಿಯಾ ಭಾಗದ ದಟ್ಟ ಅರಣ್ಯದೊಳಗೆ ಪತನಗೊಂಡಿದ್ದು, ಅಪಘಾತದ ತೀವ್ರತೆಗೆ ವಿಮಾನದಲ್ಲಿದ್ದ ಯಾರೂ ಬದುಕುಳಿದಿಲ್ಲ ಎಂದು ಜಿಲ್ಲಾಡಳಿತ ಖಚಿತಪಡಿಸಿದೆ.

ಈ ದುರ್ಘಟನೆಯಲ್ಲಿ ಪೈಲಟ್‌ಗಳಾದ ಕ್ಯಾಪ್ಟನ್ ವಿವೇಕ್ ವಿಕಾಸ್ ಭಗತ್ ಮತ್ತು ಕ್ಯಾಪ್ಟನ್ ಸವರಾಜದೀಪ್ ಸಿಂಗ್, ರೋಗಿ ಸಂಜಯ್ ಕುಮಾರ್, ವೈದ್ಯ ವಿಕಾಸ್ ಕುಮಾರ್ ಗುಪ್ತಾ, ಪ್ಯಾರಾಮೆಡಿಕ್ ಸಚಿನ್ ಕುಮಾರ್ ಮಿಶ್ರಾ ಹಾಗೂ ರೋಗಿಯ ಸಂಬಂಧಿಗಳಾದ ಅರ್ಚನಾ ದೇವಿ ಮತ್ತು ಧುರು ಕುಮಾರ್ ಪ್ರಾಣ ಕಳೆದುಕೊಂಡಿದ್ದಾರೆ. ಮೃತ ರೋಗಿ ಸಂಜಯ್ ಕುಮಾರ್ ಅವರು ಶೇ. 65 ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದರು ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ದೆಹಲಿಗೆ ಕರೆದೊಯ್ಯಲಾಗುತ್ತಿತ್ತು. ವಿಮಾನವು ರಾಂಚಿಯಿಂದ ಹೊರಟ 20 ನಿಮಿಷಗಳ ನಂತರ ರೇಡಾರ್ ಸಂಪರ್ಕದಿಂದ ಕಂದಿಹೋಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಜಿಲ್ಲಾಡಳಿತವು ರಕ್ಷಣಾ ತಂಡವನ್ನು ಸ್ಥಳಕ್ಕೆ ರವಾನಿಸಿದ್ದು, ಎಲ್ಲಾ ಏಳು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಹವಾಮಾನ ವೈಪರೀತ್ಯವು ಈ ಅವಘಡಕ್ಕೆ ಪ್ರಾಥಮಿಕ ಕಾರಣವಿರಬಹುದು ಎಂದು ಅಂದಾಜಿಸಲಾಗಿದೆಯಾದರೂ, ನಿಖರವಾದ ಕಾರಣವನ್ನು ಪತ್ತೆಹಚ್ಚಲು ವಿಮಾನ ಅಪಘಾತ ತನಿಖಾ ದಳವು (AAIB) ತನಿಖೆಯನ್ನು ಆರಂಭಿಸಿದೆ. ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್ ಸೇರಿದಂತೆ ಹಲವು ಗಣ್ಯರು ಈ ಘಟನೆಗೆ ತೀವ್ರ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ಈ ನೋವನ್ನು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು