ಇಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆ ಸೇರಿತು. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ ಎಐಸಿಸಿ (ಅಖಿಲ ಭಾರತ ಕಾಂಗ್ರೆಸ್ ಸಮಿತಿ – ಎಐಸಿಸಿ) ಕೇಂದ್ರ ಕಚೇರಿಯಲ್ಲಿ ಈ ಸಭೆ ನಡೆಯುತ್ತಿದೆ.
ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಉಪಸ್ಥಿತಿಯಲ್ಲಿ ಎಲ್ಲಾ CW ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು.
ಅವರಲ್ಲಿ ಪಿ ಚಿದಂಬರಂ, ಜೈರಾಮ್ ರಮೇಶ್, ಶಶಿ ತರೂರ್, ಅಜಯ್ ಮಾಕೆನ್, ರಾಜೀವ್ ಶುಕ್ಲಾ, ರಣದೀಪ್ ಸುರ್ಜೆವಾಲಾ, ಸಚಿನ್ ಪೈಲಟ್, ಪ್ರಿಯಾಂಕಾ ಗಾಂಧಿ ಮತ್ತು ಇತರರು. ಇತ್ತೀಚಿನ ಮಹಾರಾಷ್ಟ್ರ ಮತ್ತು ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಭಾರೀ ಸೋಲಿನ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕಾರಿ ಸಮಿತಿಯ ಸಭೆಯು ಮಹತ್ವವನ್ನು ಪಡೆದುಕೊಂಡಿದೆ.
ಮಹಾರಾಷ್ಟ್ರ ಮತ್ತು ಹರಿಯಾಣದಲ್ಲಿ ಗೆಲ್ಲುವ ಉತ್ತಮ ಅವಕಾಶಗಳಿದ್ದರೂ ಕಾಂಗ್ರೆಸ್ ಪಕ್ಷದ ಸೋಲಿಗೆ ಕಾರಣಗಳೇನು? ಎಲ್ಲಿ ತಪ್ಪಾಗಿದೆ? ಈ ಸಭೆಯಲ್ಲಿ ಈ ವಿಷಯಗಳ ಚರ್ಚೆ ನಡೆಯಲಿದೆ. ಅದೇ ರೀತಿ ದೇಶದ ಪ್ರಸ್ತುತ ರಾಜಕೀಯ ಪರಿಸ್ಥಿತಿಯ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಲಿದೆ. ಮತ್ತೊಂದೆಡೆ ಹರ್ಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸದೊಂದಿಗೆ ಅಖಾಡಕ್ಕಿಳಿದಿದ್ದ ಕಾಂಗ್ರೆಸ್ ಗೆ ಫಲಿತಾಂಶ ಭಿನ್ನವಾಗಿರುವುದು ಆಘಾತ ತಂದಿದೆ.
ಹರಿಯಾಣದಲ್ಲಿ ಆಡಳಿತಾರೂಢ ಬಿಜೆಪಿ ವಿರುದ್ಧ ಗಾಳಿ ಬೀಸುತ್ತಿದ್ದರೂ ಕಾಂಗ್ರೆಸ್ ಪಕ್ಷಕ್ಕೆ ಪರಿಸ್ಥಿತಿಯನ್ನು ತನ್ನ ಪರವಾಗಿ ತಿರುಗಿಸಲು ಸಾಧ್ಯವಾಗಲಿಲ್ಲ. ಮಹಾರಾಷ್ಟ್ರದಲ್ಲೂ ಮಹಾಯುತಿ ಮೈತ್ರಿಗೆ ಸಾರ್ವಜನಿಕರ ವಿರೋಧ ವ್ಯಕ್ತವಾಗಿತ್ತು. ಆದರೆ ವಿರೋಧ ಪಕ್ಷವಾದ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟ ಅದನ್ನು ತನ್ನ ಪರವಾಗಿ ತಿರುಗಿಸಲು ವಿಫಲವಾಯಿತು.