ಹಾಸನ: ಹಾಸನ ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಚಾರಣಾಧೀನ ಕೈದಿ ವಿಶ್ವನಾಥ್ (30) ಮೃತಪಟ್ಟಿದ್ದು, ಅವರ ಸಾವಿನ ಕುರಿತು ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿ ಜೈಲು ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಆರೋಪ ಮಾಡಿದ್ದಾರೆ. ಚನ್ನರಾಯಪಟ್ಟಣ ತಾಲೂಕಿನ ಹೊನ್ನಶೆಟ್ಟಿಹಳ್ಳಿ ಗ್ರಾಮದ ನಿವಾಸಿಯಾಗಿರುವ ವಿಶ್ವನಾಥ್, ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದು, ಕಳೆದ ಒಂದು ತಿಂಗಳಿನಿಂದ ಹಾಸನ ನಗರದ ಸಂತೇಪೇಟೆಯಲ್ಲಿರುವ ಜಿಲ್ಲಾ ಉಪಕಾರಾಗೃಹದಲ್ಲಿ ಇರಿಸಲಾಗಿತ್ತು. ಪೋಷಕರ ಆರೋಪದಂತೆ, ಒಂದು ಪ್ರಕರಣದಲ್ಲಿ ನಟೋರಿಯಸ್ ರೌಡಿಶೀಟರ್ ಯಾಚೇನಹಳ್ಳಿ ಚೇತುಗೆ ಆಶ್ರಯ ನೀಡಿದ ಆರೋಪವಿದ್ದರೆ, ಮತ್ತೊಂದು ಪ್ರಕರಣದಲ್ಲಿ ಯಾವುದೇ ಸಂಬಂಧವಿಲ್ಲದಿದ್ದರೂ ಹೆಸರು ಸೇರಿಸಲಾಗಿದೆ.
ಭಾನುವಾರ ಜೈಲಿನಲ್ಲಿದ್ದ ವೇಳೆ ವಿಶ್ವನಾಥ್ಗೆ ವಾಂತಿ ಕಾಣಿಸಿಕೊಂಡಿದ್ದು, ಜೈಲಿನ ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಗೆ ದಾಖಲಿಸಿದ ವಿಷಯವನ್ನು ಕೂಡಲೇ ಕುಟುಂಬಸ್ಥರಿಗೆ ತಿಳಿಸದೆ, ಮರುದಿನ ಮಾಹಿತಿ ನೀಡಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಕೋಮಾ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಶ್ವನಾಥ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
