ಬೆಂಗಳೂರು, ಬೇಲೂರು: ಬಗರ್ಹುಕುಂ ಸಾಗುವಳಿ ಭೂಮಿಗಳ ಮಂಜೂರಾತಿ ಪ್ರಕ್ರಿಯೆಯಲ್ಲಿ ಅಕ್ರಮ ಹಾಗೂ ಲೋಪ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಸಿಐಡಿ ವಶಕ್ಕೆ ಪಡೆದಿದ್ದ ಮಾಜಿ ಶಾಸಕ ಕೆ.ಎಸ್. ಲಿಂಗೇಶ್ ಸೇರಿದಂತೆ ನಾಲ್ವರು ತಹಶೀಲ್ದಾರ್ಗಳು ಮೋಹನ್ ಕುಮಾರ್ ಪುಟ್ ಶೆಟ್ಟಿ ಪರಮೇಶ್ ಉಮೇಶ್ ಹಾಗೂ ವಿವಿಧ ಅಧಿಕಾರಿಗಳು ಮತ್ತು ಇತರ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಬಗರ್ಹುಕುಂ ಸಾಗುವಳಿ ಭೂಮಿಗಳ ಮಂಜೂರಾತಿಯಲ್ಲಿ ನಿಯಮಗಳನ್ನು ಉಲ್ಲಂಘಿಸಿ ಅಕ್ರಮ ಎಸಗಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಿಐಡಿ ತನಿಖೆ ನಡೆಸುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಕೆ.ಎಸ್. ಲಿಂಗೇಶ್ ಸೇರಿದಂತೆ ಒಟ್ಟು 71 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿತ್ತು. ಪ್ರಕರಣದಲ್ಲಿ ಆರೋಪಿಗಳ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ, ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ.
ಪ್ರಕರಣದಲ್ಲಿ ನಾಲ್ವರು ತಹಶೀಲ್ದಾರ್ಗಳು ಸೇರಿದಂತೆ ಕಂದಾಯ ಇಲಾಖೆಯ ವಿವಿಧ ಹಂತದ ಅಧಿಕಾರಿಗಳು ಹಾಗೂ ಇತರರು ಆರೋಪಿಗಳಾಗಿದ್ದು, ಬಗರ್ಹುಕುಂ ಸಾಗುವಳಿ ಭೂಮಿಗಳ ಮಂಜೂರಾತಿಯಲ್ಲಿ ಅಧಿಕಾರ ದುರುಪಯೋಗ, ನಿಯಮ ಉಲ್ಲಂಘನೆ ಸೇರಿದಂತೆ ಹಲವು ಆರೋಪಗಳ ಕುರಿತು ಸಿಐಡಿ ತನಿಖೆ ನಡೆಸುತ್ತಿದೆ.
