Saturday, October 18, 2025

ಸತ್ಯ | ನ್ಯಾಯ |ಧರ್ಮ

RSS ನವರು ಅಂಬೇಡ್ಕರ್ ಸಂವಿಧಾನವನ್ನು ವಿರೋಧಿಸಿದ್ದರು: ಇವರ ಬಗ್ಗೆ ಎಚ್ಚರ ಇರಲಿ: ಸಿ.ಎಂ.ಸಿದ್ದರಾಮಯ್ಯ ಕರೆ

ಅಂಬೇಡ್ಕರ್ ಅವರು ತಮ್ಮ ಜ್ಞಾನವನ್ನು ಸಮಾಜದ ಬದಲಾವಣೆಗೆ ಬಳಸಿದ ಮಹನ್ ಚೇತನ: ಸಿ.ಎಂ.ಸಿದ್ದರಾಮಯ್ಯ

ಮೈಸೂರು ಅ18: ಸಂಘ ಪರಿವಾರ ಮತ್ತು RSS ನವರು ಅಂಬೇಡ್ಕರ್ ಅವರ ಸಂವಿಧಾನವನ್ನು ವಿರೋಧಿಸಿದ್ದರು. ಈಗಲೂ ವಿರೋಧಿಸುತ್ತಿದ್ದಾರೆ. ಹೀಗಾಗಿ ಇವರ ಬಗ್ಗೆ ಎಚ್ಚರಿಕೆ ಇಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆಕೊಟ್ಟರು.

ಮೈಸೂರು ವಿಶ್ವ ವಿದ್ಯಾಲಯದ ರಜತ ಮಹೋತ್ಸವ ಹಾಗೂ ನೂತನ ಜ್ಞಾನ ದರ್ಶನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.

ಅಂಬೇಡ್ಕರ್ ಅವರು ತಮ್ಮ ಜ್ಞಾನವನ್ನು ಸಮಾಜದ ಬದಲಾವಣೆಗೆ ಬಳಸಿದ ಮಹಾನ್ ಚೇತನ. ಇವರು ಸಮಾಜವನ್ನು ಅರ್ಥ ಮಾಡಿಕೊಳ್ಳಲು ಜ್ಞಾನ‌ ಸಂಪಾದನೆ ಮಾಡಿದರು. ಬಳಿಕ ತಮ್ಮ ಜ್ಞಾನವನ್ನು ಬದುಕಿನುದ್ದಕ್ಕೂ ಸಮಾಜದ ಬದಲಾವಣೆಗೆ ಬಳಸಿದರು ಎಂದು ಮೆಚ್ಚುಗೆ ಸೂಚಿಸಿದರು.

ಅಂಬೇಡ್ಕರ್ ಅವರ ಹೆಸರಲ್ಲಿ ಬಿಜೆಪಿಯವರು, ಸಂಘ ಪರಿವಾರದವರು ಅಪಪ್ರಚಾರ ಮಾಡುತ್ತಿದ್ದಾರೆ. ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಕಾಂಗ್ರೆಸ್ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ, ಸತ್ಯ ಏನೆಂದರೆ “ನನ್ನನ್ನು ಚುನಾವಣೆಯಲ್ಲಿ ಸೋಲಿಸಿದ್ದು ಸಾವರ್ಕರ್ ಮತ್ತು ಡಾಂಗೆ” ಎಂದು ಸ್ವತಃ ಅಂಬೇಡ್ಕರ್ ಅವರೇ ತಮ್ಮದೇ ಹಸ್ತಾಕ್ಷರದಲ್ಲಿ ಬರೆದಿದ್ದಾರೆ. ಇಂಥಾ ಸತ್ಯಗಳನ್ನು ಸಮಾಜದ ಮುಂದಿಟ್ಟು ಸಂಘ ಪರಿವಾರದ ಸುಳ್ಳುಗಳನ್ನು ಬಹಿರಂಗಗೊಳಿಸಬೇಕು ಎಂದು ಕರೆ ನೀಡಿದರು.

ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಅನ್ನು ನಾನು ಸ್ಥಾಪಿಸಿದ್ದು ಏಕೆಂದರೆ ಅವರನ್ನು ಓದಿಕೊಂಡವರು ಅವರ ಮಾರ್ಗದಲ್ಲಿ ನಡೆಯಲಿ ಉದ್ದೇಶದಿಂದ. ಅಂಬೇಡ್ಕರ್ ಅವರಿಗೆ ಅಂಬೇಡ್ಕರ್ ಅವರೇ ಸಾಟಿ. ಮತ್ತೊಬ್ಬ ಅಂಬೇಡ್ಕರ್ ಬರಲು ಸಾಧ್ಯವಿಲ್ಲ. ಆದರೆ ಪ್ರತಿಯೊಬ್ಬರೂ ಅವರ ಆದರ್ಶಗಳನ್ನು ಪಾಲಿಸಿ ಅವರ ಹಾದಿಯಲ್ಲಿ ನಡೆಯಬೇಕು ಎಂದರು.

ವಿಶ್ವದ ಎಲ್ಲಾ ಸಂವಿಧಾನಗಳನ್ನು ಓದಿ, ಜೀರ್ಣಿಸಿಕೊಂಡು ಭಾರತೀಯ ಸಮಾಜಕ್ಕೆ ಅನ್ವಯ ಆಗುವ ವಿಶ್ವ ಶ್ರೇಷ್ಠ ಸಂವಿಧಾನವನ್ನು ಅಂಬೇಡ್ಕರ್ ಅವರು ಭಾರತಕ್ಕೆ ಕೊಟ್ಟರು ಎಂದು ವಿವರಿಸಿದರು.

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರ ಮೇಲೆ ಸನಾತನಿ ಒಬ್ಬ ಶೂ ಎಸೆದಿರುವುದು ಸನಾತನಿಗಳು , ಪಟ್ಟಭದ್ರರು ಸಮಾಜದಲ್ಲಿ ಇನ್ನೂ ಇದ್ದಾರೆ ಎನ್ನುವುದಕ್ಕೆ ಸಾಕ್ಷಿ ಎಂದರು.

ಶೂ ಎಸೆತವನ್ನು ದಲಿತರಷ್ಟೇ ಅಲ್ಲ. ಪ್ರತಿಯೊಬ್ಬರೂ ವಿರೋಧಿಸಬೇಕು. ಹೀಗಾದಾಗ ಮಾತ್ರ ಸಮಾಜ ಬದಲಾವಣೆಯ ಹಾದಿಯಲ್ಲಿದೆ ಎಂದು ಸಮಾಧಾನ ಪಟ್ಟುಕೊಳ್ಳಬಹುದು ಎಂದರು.

ನಾನು ಬುದ್ದ, ಬಸವ, ಅಂಬೇಡ್ಕರ್ ವಿಚಾರದಲ್ಲಿ ನಂಬಿಕೆ ಇಟ್ಟುಕೊಂಡಿದ್ದೀನಿ. ಈ ಕಾರಣಕ್ಕೇ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯಬೇಕು ಎಂದು ಆಶಿಸುತ್ತೇನೆ. ವಿಜ್ಞಾನ ಓದಿಯೂ ಮೂಢ ನಂಬಿಕೆ ಆಚರಿಸುವವರಾಗಬೇಡಿ ಎಂದರು.

ಮೈಸೂರು ವಿವಿಯಲ್ಲಿ ಅಂಬೇಡ್ಕರ್ ಅಧ್ಯಯನ‌ ಕೇಂದ್ರ ಆಗಿ 25 ವರ್ಷಗಳಾಗಿವೆ. ಈ ಸಂದರ್ಭದಲ್ಲಿ “ವಿಶ್ವ ಜ್ಞಾನಿ ಅಂಬೇಡ್ಕರ್ ಸಭಾ ಭವನ” ಲೋಕಾರ್ಪಣೆ ಆಗುತ್ತಿರುವುದು ಸ್ವಾಗತಾರ್ಹ ಎಂದರು.

ಎಲ್ಲರಿಗೂ ಸಮಾನ ಅವಕಾಶಗಳು ಸಿಗದೇ ಇದ್ದುದರಿಂದ ಅಸಮಾನತೆ ಸೃಷ್ಟಿಯಾಗಿದೆ.
ವಿದ್ಯೆ ಯಾರಪ್ಪನ ಮನೆ ಆಸ್ತಿ ಅಲ್ಲ. ಅವಕಾಶಗಳು ಸಿಗಬೇಕು ಅಷ್ಟೆ. ಅವಕಾಶ ಸಿಕ್ಕಾಗ ವಿದ್ವಾಂಸರಾಗುತ್ತಾರೆ, ಜ್ಞಾನಿ ಆಗುತ್ತಾರೆ. ಅಂಬೇಡ್ಕರ್ ಅವರು ತಮ್ಮ ಜ್ಞಾನವನ್ನು ಸಮಾಜದ ಬದಲಾವಣೆಗೆ ಬಳಸಿದ ಮಹಾನ್ ಚೇತನ ಎಂದರು.

ನಿಮ್ಮ ಸಹವಾಸ ಸರಿಯಾಗಿರಲಿ

ಸಮಾಜದ ಪರವಾಗಿ ಇರುವವರ ಜೊತೆ ನಿಮ್ಮ ಸಹವಾಸ ಇರಲಿ. ಸಮಾಜ ಬದಲಾವಣೆಯ ವಿರೋಧಿಗಳ, ಸನಾತನಿಗಳ ಸಹವಾಸ ಬೇಡ ಎಂದು ಕರೆ ನೀಡಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page