ದೆಹಲಿ: ದೇಶದ ರಾಜಧಾನಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಹಮ್ಮಿಕೊಂಡಿದ್ದ ‘ಚಲೋ ಪಾರ್ಲಿಮೆಂಟ್’ ರ್ಯಾಲಿಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ಜುಲೈ 20ರಂದು ತೀವ್ರ ಬಲಪ್ರಯೋಗ ನಡೆಸಿ ಎರಡು ವಾರಗಳು ಕಳೆದರೂ, ಕೇಂದ್ರ ಗೃಹ ಸಚಿವ ಅಮಿತ್ ಶಾ ಇದುವರೆಗೆ ಸಂಸತ್ತಿಗೆ ಆಗಮಿಸದೇ ಇರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ದೆಹಲಿ ಪೊಲೀಸ್ ಮತ್ತು ರ್ಯಾಪಿಡ್ ಆಕ್ಷನ್ ಫೋರ್ಸ್ (ಆರ್ಎಎಫ್), ಯುವ ಪ್ರತಿಭಟನಾಕಾರರ ವಿರುದ್ಧ ಅಶ್ರುವಾಯು, ಮೊಳೆಗಳನ್ನು ಅಳವಡಿಸಿದ ಲಾಠಿ ಹಾಗೂ ಪೆಲೆಟ್ ಗನ್ಗಳನ್ನು ಏಕೆ ಬಳಸಿದವು ಎಂಬುದಕ್ಕೆ ವಿವರಣೆ ನೀಡಬೇಕೆಂದು ವಿರೋಧ ಪಕ್ಷಗಳು ಸಂಸತ್ತಿನ ಒಳಗೂ ಮತ್ತು ಹೊರಗೂ ಆಗ್ರಹಿಸುತ್ತಿದ್ದರೂ ಅಮಿತ್ ಶಾ ಮಾತ್ರ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಪ್ರಧಾನಮಂತ್ರಿ ಹಾಗೂ ಗೃಹ ಸಚಿವರು ಕಲಾಪಕ್ಕೆ ಹಾಜರಾಗದಿರುವುದು ಸಂಸತ್ತಿಗೆ ಮತ್ತು ಪ್ರಜಾಪ್ರಭುತ್ವಕ್ಕೆ ಎಸಗುತ್ತಿರುವ ಅವಮಾನ ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ.
