Home ರಾಜ್ಯ ದೇವನಹಳ್ಳಿ ಭೂ ಸ್ವಾಧೀನ ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟ ಆಹೋರಾತ್ರಿ ಧರಣಿ ಘೋಷಣೆ.

ದೇವನಹಳ್ಳಿ ಭೂ ಸ್ವಾಧೀನ ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟ ಆಹೋರಾತ್ರಿ ಧರಣಿ ಘೋಷಣೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ, ಹೋಬಳಿಯ ಹದಿಮೂರು ಹಳ್ಳಿಗಳ ರೈತರು ತಮ್ಮ ಭೂಮಿಗಾಗಿ ನಡೆಸುತ್ತಿರುವ ಹೋರಾಟ ನಿರ್ಣಾಯಕ ಹಂತಕ್ಕೆ ತಲುಪಿದೆ. 

ಈ ರೈತರ 1,777 ಎಕರೆ ಭೂಮಿಯನ್ನು ವಶಪಡಿಸಿಕೊಂಡು, ಕಾರ್ಪೊರೇಟ್ ಕಂಪನಿಗಳಿಗೆ ನೀಡಲು ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಿರುವ ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆ, 2025 ಜೂನ್ 26ರಿಂದ ಫ್ರೀಡಂ ಪಾರ್ಕಿನಲ್ಲಿ ಅನಿರ್ಧಿಷ್ಟ ಆಹೋರಾತ್ರಿ ಧರಣಿಗೆ ಕರೆ ನೀಡಿದೆ. 

ರೈತರು ಕಳೆದ 1,180 ದಿನಗಳಿಂದ ನಿರಂತರ ಹೋರಾಟ ಮಾಡುತ್ತಾ ಬಂದಿದ್ದಾರೆ. ಜೂನ್ 25, ಬುಧವಾರ ‘ದೇವನಹಳ್ಳಿ ಚಲೋ’ ಹಮ್ಮಿಕೊಳ್ಳುವ ಮೂಲಕ ಹೋರಾಟವನ್ನು ತಾರ್ಕಿಕ ಹಂತಕ್ಕೆ ಕೊಂಡೊಯ್ಯಲು ನಿರ್ಧರಿಸಿದ್ದ ಹೋರಾಟಗಾರರನ್ನು ಬುಧವಾರ ಪೊಲೀಸರು ಬಂಧಿಸಿದರು.

ಗುರುವಾರ ನಟ ಪ್ರಕಾಶ್ ರಾಜ್, ಹಿರಿಯ ಪತ್ರಕರ್ತೆ ವಿಜಯಾ, ಕೆ. ಎಸ್. ವಿಮಲಾ, ಸಿರಿಮನೆ ನಾಗರಾಜ್, ತಾರಾ, ಸುಷ್ಮಾ ಮತ್ತಿತರರು ಮುಖ್ಯಮಂತ್ರಿ ಅವರನ್ನು ಭೇಟಿಯಾಗಲು ತೆರಳಿದ್ದರು, ಈ ವೇಳೆ ಮೊದಲು ಅವರನ್ನು ಪೊಲೀಸರು ತಡೆದಿದ್ದು, ಆನಂತರದಲ್ಲಿ ಮುಖ್ಯಮಂತ್ರಿಗಳ ಭೇಟಿಗೆೆ ಅವಕಾಶ ಮಾಡಿಕೊಟ್ಟಿದ್ದಾರೆ.  

ಕಾವೇರಿ ನಿವಾಸದಲ್ಲಿ ತಮ್ಮನ್ನು ಭೇಟಿ ಮಾಡಿದ ರೈತ ಮುಖಂಡರ ಜೊತೆ ಮಾತುಕತೆ ನಡೆಸಿದ ಮುಖ್ಯಮಂತ್ರಿಗಳು ಜುಲೈ 4ರ ಬೆಳಗ್ಗೆ 11 ಗಂಟೆಗೆ ರೈತರ ಬೇಡಿಕೆ ಮತ್ತು ಸಮಸ್ಯೆ ಕುರಿತಾಗಿ ಸಮಗ್ರ ಸಭೆ ನಡೆಸುವುದಾಗಿ ತಿಳಿಸಿದ್ದಾರೆ. 

ಈ ವೇಳೆ ಮುಖ್ಯಮಂತ್ರಿಗಳು ಸಭೆ ನಡೆಸಿ, ರೈತರ ಭೂಮಿಯನ್ನು ಸ್ವಾದೀನ ಪಡಿಸಿಕೊಳ್ಳುವುದಿಲ್ಲ ಎಂಬ ನಿರ್ಧಾರ ಕೈಗೊಳ್ಳುವವರೆಗೂ ನಾವು ಸುಮ್ಮನೆ ಕೂರುವುದಿಲ್ಲ, ಫ್ರೀಡಂ ಪಾರ್ಕಿನಲ್ಲಿ ನಮ್ಮ ಹೋರಾಟ ಮುಂದುವರೆಸುತ್ತೇವೆ ಎಂಬ ಎಚ್ಚರಿಕೆಯನ್ನು ನೀಡಲಾಗಿದೆ. 

ಜೂನ್ 26 ಮಧ್ಯಾಹ್ನ 1:30ಕ್ಕೆ ಪತ್ರಿಕಾಗೋಷ್ಠಿ ನಡೆಸಿದ ಸಂಯುಕ್ತ ಹೋರಾಟ ಕರ್ನಾಟಕ ಅನಿರ್ದಿಷ್ಟ ಆಹೋರಾತ್ರಿ ಧರಣಿಗೆ ಕರೆ ನೀಡಿದೆ.

You cannot copy content of this page

Exit mobile version