ಹಾಸನ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜುಲೈ 9 ರಂದು ಅಂಗನವಾಡಿ ಕೇಂದ್ರಗಳನ್ನು ಬಂದ್ ಮಾಡಿ, ಸಾಮೂಹಿಕ ಬಂಧನಕ್ಕೊಳಗಾಗುವ ಮುಖಾಂತರ ಸಾರ್ವತ್ರಿಕ ಮುಷ್ಕರದಲ್ಲಿ ಪಾಲ್ಗೊಳ್ಳಲಾಗುತ್ತಿದ್ದೇವೆ ಎಂದು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ರಾಜ್ಯಾಧ್ಯಕ್ಷೆ ಎಸ್.ವರಲಕ್ಷ್ಮೀ ತಿಳಿಸಿದರು.
ನಗರದ ರಂಗೋಲಿಹಳ್ಳದ ಬಳಿ ಇರುವ ಶ್ರೀ ನೀಲಕಂಠೇಶ್ವರ ಭವನದಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಜಿಲ್ಲಾ ವಿಭಾಗವಾರು ನಾಯಕತ್ವ ವ್ಯಕ್ತಿತ್ವ ವಿಕಸನ ತರಬೇತಿ ಶಿಬಿರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿ, ಅಂಗನವಾಡಿ ನೌಕರರು 50 ವರ್ಷಗಳಿಂದ ಐಸಿಡಿಎಸ್ ಅಡಿಯಲ್ಲಿ ದುಡಿಯುತ್ತಿದ್ದಾರೆ. ಸಾಮಾಜಿಕ ನ್ಯಾಯದ ಹಿನ್ನಲೆಯಲ್ಲಿ ಈ ಯೋಜನೆಯನ್ನು ಖಾಯಂ ಮಾಡಬೇಕು. ಖಾಯಂ ಮಾಡುವ ತನಕ ಕನಿಷ್ಠವೇತನ ನೀಡಬೇಕು, ಫಲಾನುಭವಿಗಳ ಘಟಕವೆಚ್ಚ ಹೆಚ್ಚಳ ಮಾಡಬೇಕೆಂಬ ಬೇಡಿಕೆಗಳನ್ನು ನಿರಂತರವಾಗಿ ಕೇಳಲಾಗುತ್ತಿದೆ ಎಂದರು. ದೇಶದ ಕಾರ್ಪೊರೇಟ್ ಬಂಡವಾಳಗಾರರಿಗೆ 18.32 ಲಕ್ಷ ಕೋಟಿ ಸಾಲ ಮನ್ನವನ್ನು ಉದಾರವಾಗಿ ಕೊಡುವ ಕೇಂದ್ರ ಸರ್ಕಾರ ದೇಶದ ಭವಿಷ್ಯತ್ತನ್ನು ರೂಪಿಸಲು ಪೂರಕವಾಗಿ ಮಾನವ ಸಂಪನ್ಮೂಲದ ಬೆಳವಣಿಗೆಗಳಿಗೆ ದುಡಿಯುತ್ತಿರುವ ಐ.ಸಿ.ಡಿ.ಎಸ್. ಯೋಜನೆ ಮತ್ತು ಇದರಲ್ಲಿ ದುಡಿಯುವ ಅಂಗನವಾಡಿ ನೌಕರರಿಗೆ ಕೊಡಲು ಹಣವಿಲ್ಲ. ಇಂತಹ ಧೋರಣೆಗಳ ವಿರುದ್ಧ ಅಂಗನವಾಡಿ ನೌಕರರು ಸಂಘ ಕಟ್ಟಿ, ಮುಷ್ಕರಗಳ ಮುಖಾಂತರ ಹೋರಾಟಗಳನ್ನು ನಡೆಸುತ್ತಿದ್ದರು. ಆದರೆ ಈಗ ದೇಶದ 29 ಕಾರ್ಮಿಕ ಕಾನೂನುಗಳನ್ನು 4 ಸಂಹಿತೆಗಳನ್ನಾಗಿ ಮಾಡುವ ಮುಖಾಂತರ ಸಂಘ ಕಟ್ಟುವ ಹಕ್ಕು ಮತ್ತು ಮುಷ್ಕರದ ಹಕ್ಕುಗಳಿಗೆ ಹಲವು ರೀತಿಯ ನಿರ್ಭಂಧಗಳನ್ನು ತರುವ ಮೂಲಕ ಸರ್ಕಾರ ಮತ್ತಷ್ಟು ಸಂಕಷ್ಟಗಳನ್ನು ತಂದೊಡ್ಡುತ್ತಿದೆ.
ರಾಜ್ಯ ಸರ್ಕಾರ 2023 ಏಪ್ರಿಲ್ 1 ರಿಂದ 1972 ಗ್ರಾಜ್ಯುಟಿ ಪಾವತಿ ಕಾಯ್ದೆಯನ್ನು ಅನ್ವಯ ಮಾಡಿ ಈಗಾಗಲೇ 287 ಕಾರ್ಯಕರ್ತರಿಗೆ ಮತ್ತು 1204 ಸಹಾಯಕಿಯರಿಗೆ ಪಾವತಿಸುವುದನ್ನು ಸಂಘಟನೆ ಸ್ವಾಗತಿಸುತ್ತದೆ. ಈ ಕಾಯ್ದೆಯನ್ನು 2011 ರಿಂದ ನಿವೃತ್ತಿಯಾದ 10311 ಕಾರ್ಯಕರ್ತೆಯರು, 11980 ಸಹಾಯಕಿಯರಿಗೂ ಅನ್ವಯಿಸಬೇಕೆಂದೂ ಈ ಮೂಲಕ ಒತ್ತಾಯಿಸಲಾಗುತ್ತಿದೆ ಎಂದು ಹೇಳಿದರು.ಪ್ರಮುಖವಾದ ಹಕ್ಕೊತ್ತಾಯಗಳು ಎಂದರೇ, ಗುಜರಾತ್ ಹೈಕೋರ್ಟ್ ತೀರ್ಪಿನಂತೆ ಅಂಗನವಾಡಿ ನೌಕರರನ್ನು ಖಾಯಂ ಮಾಡಬೇಕು. 29 ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿ ಹೊಸದಾಗಿ ತಂದಿರುವ 4 ಸಂಹಿತೆಗಳನ್ನು ರದ್ದುಗೊಳಿಸಬೇಕು. ಐಸಿಡಿಎಸ್ ಯೋಜನೆಗೆ ಬಜೆಟ್ನ್ನು ಹೆಚ್ಚಿಸಬೇಕು. 26 ಸಾವಿರ ಕನಿಷ್ಠ ವೇತನ, 10 ಸಾವಿರ ಮಾಸಿಕ ಪಿಂಚಣಿ ಕೊಡಬೇಕು.
ಟಿಹೆಚ್ಆರ್ ಮೂಲಕ ಫಲಾನುಭವಿಗಳ ಪೋಷಣ್ ಟ್ಯಾಕರನ್ನು ನೋಂದಾವಣೆ ಆದರೆ ಮಾತ್ರ ಪೌಷ್ಠಿಕ ಆಹಾರ ಮತ್ತು ಅಂಗನವಾಡಿ ನೌಕರರಿಗೆ ವೇತನ ಕೊಡುವುದು ಎಂಬ ಕೇಂದ್ರ ಸರ್ಕಾರದ ನಿಲುವು 2013ರ ಆಹಾರ ಭದ್ರತಾ ಕಾಯ್ದೆಗೆ ವಿರುದ್ಧವಾಗಿರುವುದರಿಂದ ಪೋಷಣ್ ಟ್ರಾಕರ್ ಕಡ್ಡಾಯ ಮಾಡಬಾರದು. ರಾಜ್ಯದಲ್ಲಿ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಎಲ್ಕೆಜಿ, ಯುಕೆಜಿ ಪ್ರಾರಂಭಮಾಡಬೇಕು ಎಂದರು. ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಕೂಡಲೇ ಭರ್ತಿಮಾಡಬೇಕು. ಅಂಗನವಾಡಿ ಕೇಂದ್ರಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡಬೇಕು. ಈ ಮುಖ್ಯ ಬೇಡಿಕೆಗಳಿಗಾಗಿ ಒತ್ತಾಯಿಸಿ ಜುಲೈ 9 ರಂದು ಅಂಗನವಾಡಿ ಕೇಂದ್ರಗಳನ್ನು ಬಂದ್ ಮಾಡಿ, ಸಾಮೂಹಿಕ ಬಂಧನಕ್ಕೊಳಗಾಗುವ ಮುಖಾಂತರ ಸಾರ್ವತ್ರಿಕ ಮುಷ್ಕರದಲ್ಲಿ ಪಾಲ್ಗೊಳ್ಳಲಾಗುತ್ತಿದೆ ಹಾಗೂ ಇದೇ ಬೇಡಿಕೆಗಳಿಗಾಗಿ ಡಿಸೆಂಬರ್ನಲ್ಲಿ ಅನಿರ್ಧಿಷಾವಧಿಕಾಲ ಕೇಂದ್ರ ಸಚಿವರ ಮನೆಗಳನ್ನು ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಎಂ.ಬಿ.ಪುಷ್ಪ, ಪ್ರಧಾನ ಕಾರ್ಯದರ್ಶಿ ಎಚ್.ಎಸ್. ಸುನಂದ, ಮಂಜೂಳ ಇತರರು ಉಪಸ್ಥಿತರಿದ್ದರು.