ಬೆಂಗಳೂರು: ಪಕ್ಷ ವಿರೋಧಿ ಹಾಗೂ ಸರ್ಕಾರಕ್ಕೆ ಮುಜುಗರ ತರುವಂತಹ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಕಠಿಣ ಕ್ರಮಗಳನ್ನು ಮುಂದುವರಿಸಿದೆ. ಇತ್ತೀಚೆಗೆ ಮಾಜಿ ಸಚಿವ ಕೆ. ಎನ್. ರಾಜಣ್ಣ ಅವರನ್ನು ಸಂಪುಟದಿಂದ ತೆಗೆದುಹಾಕಿದ ನಂತರ, ಇದೀಗ ಮತ್ತೊಬ್ಬ ಹಿರಿಯ ಶಾಸಕರಾದ ರಾಜು ಕಾಗೆ ಅವರಿಗೆ ಶಿಸ್ತಿನ ಸಂದೇಶ ರವಾನಿಸಿದೆ.
ಕಾಗವಾಡ ಶಾಸಕ ರಾಜು ಕಾಗೆ ಅವರನ್ನು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ (NWKRTC) ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿದೆ. ಪಕ್ಷ ವಿರೋಧಿ ಹೇಳಿಕೆಗಳು ಮತ್ತು ಸರ್ಕಾರದ ವಿರುದ್ಧ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದೇ ಈ ಕ್ರಮಕ್ಕೆ ಕಾರಣವಾಗಿದೆ.
ರಾಜು ಕಾಗೆ ಅವರ ಬದಲಿಗೆ ಅರುಣ್ ಪಾಟೀಲ ಅವರನ್ನು ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡುವಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಂತಿಮ ಪಟ್ಟಿಯನ್ನು ರವಾನಿಸಿದ್ದಾರೆ.
ರಾಜು ಕಾಗೆ ಹೇಳಿದ್ದೇನು?
ಕೆಲವು ಸಮಯದ ಹಿಂದೆ ರಾಜು ಕಾಗೆ ಅವರು ಸರ್ಕಾರಕ್ಕೆ ಮುಜುಗರ ಉಂಟುಮಾಡುವ ಹೇಳಿಕೆ ನೀಡಿದ್ದರು. “ನನಗೆ ಸರ್ಕಾರದಿಂದ ₹25 ಕೋಟಿ ವಿಶೇಷ ಅನುದಾನ ಬಿಡುಗಡೆ ಆಗಿದೆ. ₹13 ಕೋಟಿಯಲ್ಲಿ 72 ಸಮುದಾಯ ಭವನಗಳು ಹಾಗೂ ₹12 ಕೋಟಿಯಲ್ಲಿ ರಸ್ತೆ ನಿರ್ಮಾಣಕ್ಕೆ ಚಾಲನೆ ನೀಡಿದ್ದೆ. ಆದರೆ, ಚಾಲನೆ ನೀಡಿ ಎರಡು ವರ್ಷ ಕಳೆದರೂ ಈವರೆಗೆ ಕಾಮಗಾರಿ ಆರಂಭವಾಗಿಲ್ಲ. ವರ್ಕ್ ಆರ್ಡರ್ ಕೊಡದಿರುವುದು ನನಗೆ ನೋವಾಗಿದೆ” ಎಂದು ಕಾಗೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಹೇಳಿಕೆಯೇ ಅವರ ಪದಚ್ಯುತಿಗೆ ಪ್ರಮುಖ ಕಾರಣವಾಗಿದೆ.