Home ಬೆಂಗಳೂರು ಇ-ಸ್ವತ್ತು ಸಮರ್ಪಕ ಅನುಷ್ಠಾನಕ್ಕಾಗಿ ಸ್ಥಳೀಯ ಅಧಿಕಾರಿಗಳನ್ನು ನೇಮಿಸಿ – ಪ್ರಿಯಾಂಕ್‌ ಖರ್ಗೆ

ಇ-ಸ್ವತ್ತು ಸಮರ್ಪಕ ಅನುಷ್ಠಾನಕ್ಕಾಗಿ ಸ್ಥಳೀಯ ಅಧಿಕಾರಿಗಳನ್ನು ನೇಮಿಸಿ – ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿನ ಸುಮಾರು ಒಂದು ಕೋಟಿ ಆಸ್ತಿಗಳನ್ನು ಇ-ಸ್ವತ್ತು ತೆಕ್ಕೆಗೆ ತರುವ ಮೂಲಕ ಮನೆ ಮತ್ತು ನಿವೇಶನಗಳನ್ನು ಸಕ್ರಮಗೊಳಿಸುವ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸಲು ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ನೀಡಿದರು.

ಬೆಂಗಳೂರಿನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಇ-ಸ್ವತ್ತು ಸಮರ್ಪಕ ಅನುಷ್ಠಾನ ಹಾಗೂ ಇನ್ನಿತರ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, ಈ ಬಗ್ಗೆ ಹೊಸದಾಗಿ ಬಿಡುಗಡೆ ಮಾಡಿರುವ ನಿಯಮಾವಳಿಗಳನ್ನು ಗ್ರಾಮ ಪಂಚಾಯತಿ ಮಟ್ಟದಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಮನನ ಮಾಡಿಸಲು ಜಿಲ್ಲಾ ಮಟ್ಟದಲ್ಲಿ ವಿಶೇಷ ತರಬೇತಿ ವ್ಯವಸ್ಥೆ ನಡೆಸಬೇಕು ಎಂದು ಹೇಳಿದರು.

ರಾಜ್ಯದ ಲಕ್ಷಾಂತರ ಮಂದಿ ಈ ಯೋಜನೆಯ ಲಾಭ ಹೊಂದಲು ತವಕದಿಂದ ಕಾಯುತ್ತಿದ್ದಾರೆ. ಸಾರ್ವಜನಿಕರಿಗೆ ಸುಲಲಿತವಾಗಿ ಹಾಗೂ ಪಾರದರ್ಶಕವಾಗಿ ಇ-ಸ್ವತ್ತು ಪ್ರಯೋಜನ ದೊರೆಯುವಂತೆ ಸಿಬ್ಬಂದಿಯನ್ನು ಸಜ್ಜು ಮಾಡಬೇಕು. ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಅವರ ನೆರವನ್ನು ಪಡೆದು ಸ್ವತ್ತು ಆಂದೋಲನವನ್ನು ಯಶಸ್ವಿಗೊಳಿಸಬೇಕು ಸೂಚಿಸಿದರು.

ಗ್ರಾಮ ಪಂಚಾಯತಿಗಳ ಸಂಪನ್ಮೂಲವನ್ನು ವೃದ್ಧಿಸುವ ಮೂಲಕ ಸ್ಥಳೀಯ ಸರ್ಕಾರಗಳ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ನೂತನವಾಗಿ ಅನುಷ್ಠಾನಕ್ಕೆ ತಂದಿರುವ ಸ್ಥಳೀಯ ಆರ್ಥಿಕ ವೇಗವರ್ಧಕ ಕಾರ್ಯಕ್ರಮ (ಲೀಪ್) ಅಡಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಲಭ್ಯವಿರುವ ಆಸ್ತಿಗಳನ್ನು ಪತ್ತೆ ಮಾಡಬೇಕು. ಅಂತಹ ಸ್ಥಳದಲ್ಲಿ ಪಂಚಾಯತಿಗಳಿಗೆ ಶಾಶ್ವತ ಆದಾಯ ತಂದುಕೊಡುವ ಕಟ್ಟಡಗಳನ್ನು ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಬೇಕು. ಪ್ರವಾಸಿ ತಾಣಗಳು ಹಾಗೂ ಯಾತ್ರಾಸ್ಥಳಗಳ ಸಮೀಪ ಲಭ್ಯವಿರುವ ಗ್ರಾಮ ಪಂಚಾಯತಿ ಆಸ್ತಿಗಳಲ್ಲಿ ಸಂಪನ್ಮೂಲ ಹೆಚ್ಚಿಸುವ ಯೋಜನೆಗಳನ್ನು ರೂಪಿಸಿದ್ದಲ್ಲಿ ಸರ್ಕಾರ ಅನುದಾನ ನೀಡಲಿದೆ ಎಂದು ಹೇಳಿದರು.

You cannot copy content of this page

Exit mobile version