ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಪೋಸ್ಟ್ ಹಂಚಿಕೊಂಡ ಆರೋಪದಡಿ, ತೀರ್ಥಹಳ್ಳಿ ಶಾಸಕ, ಮಾಜಿ ಸಚಿವ ಆರಗ ಜ್ಞಾನೇಂದ್ರ ಅವರ ಆಪ್ತ ಸಹಾಯಕನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಇಲ್ಲಿನ ಜೆ.ಎಂ.ಎಫ್.ಸಿ (JMFC) ನ್ಯಾಯಾಲಯ ಆದೇಶ ಹೊರಡಿಸಿದೆ.
ಹೊಸನಗರ ತಾಲೂಕಿನ ಮಳಲಿ ಗ್ರಾಮದ ನಿವಾಸಿ ಹಾಗೂ ಶಾಸಕರ ಆಪ್ತ ಸಹಾಯಕನಾಗಿರುವ ರಾಜೇಶ್ ಹಿರಿಮನೆ ಬಂಧಿತ ಆರೋಪಿಯಾಗಿದ್ದಾರೆ.
ಪ್ರಕರಣದ ಹಿನ್ನೆಲೆ:
ಆರೋಪಿ ರಾಜೇಶ್ ಹಿರಿಮನೆ ಅವರು ರಾಹುಲ್ ಗಾಂಧಿಯವರ ಮುಖದ ಅರ್ಧ ಭಾಗ ಮತ್ತು ಪಾಕಿಸ್ತಾನ ಸೇನೆಯ ಸಮವಸ್ತ್ರ ಧರಿಸಿದ ಅಧಿಕಾರಿ ‘ಅಸಿಮ್’ (ASIM) ಎಂಬುವರ ಫೋಟೋವನ್ನು ಎಡಿಟ್ ಮಾಡಿ ಸಂಯೋಜಿಸಿ, “ONE AGENDA” ಎಂಬ ಟ್ಯಾಗ್ಲೈನ್ನೊಂದಿಗೆ ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದಾರೆ ಎನ್ನಲಾಗಿದೆ. ಪ್ರಕರಣದ ಅಡಿಯಲ್ಲಿ ರಾಹುಲ್ ಗಾಂಧಿಯವರನ್ನು ISIS ಏಜೆಂಟ್ ಎನ್ನುವಂತೆ ಚಿತ್ರಿಸಲಾಗಿತ್ತು.
ಈ ಸಂಬಂಧ ದಿನಾಂಕ 20/05/2025 ರಂದು ನಗರ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ (BNS) ಕಾಯ್ದೆಯ ಸೆಕ್ಷನ್ 353(2) ಅಡಿಯಲ್ಲಿ ಪೊಲೀಸರು ಸ್ವಯಂ ಪ್ರೇರಿತವಾಗಿ (Suo Moto) ಪ್ರಕರಣ ದಾಖಲಿಸಿಕೊಂಡಿದ್ದರು.
ನ್ಯಾಯಾಲಯದ ಆದೇಶ:
ಪ್ರಕರಣದ ವಿಚಾರಣೆ ನಡೆಸಿದ ಹೊಸನಗರ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರು, ಆರೋಪಿ ರಾಜೇಶ್ ಹಿರಿಮನೆ ಅವರನ್ನು ದಿನಾಂಕ 24/02/2026 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿ ಆದೇಶ ಹೊರಡಿಸಿದ್ದಾರೆ.
