ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಮಂಗಳವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕರ್ನಾಟಕದ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಘಟನೆಯಲ್ಲಿ ಒಟ್ಟು ಐವರು ಯೋಧರು ಹುತಾತ್ಮರಾಗಿದ್ದು̤ ಐವರು ಯೋಧರು ಗಾಯಗೊಂಡಿದ್ದು ಅವರನ್ನು ಸೇನಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಳಗಾವಿ ಬಳಿಯ ಸಾಂಬ್ರಾ ಗ್ರಾಮದ ಯೋಧ ಸುಬೇದಾರ್ ದಯಾನಂದ ತಿರಕಣ್ಣವರ (45), ಕುಂದಾಪುರ ಬಳಿಯ ಕೋಟೇಶ್ವರ ಬಿಜಾಡಿಯ ಅನೂಪ್ (33) ಮಹಾಲಿಂಗಪುರದ 25 ವರ್ಷದ ಮಹೇಶ್ ಮರಿಗೊಂಡ ಮೃತ ಯೋಧರು ಎಂದು ತಿಳಿದು ಬಂದಿದೆ.
ಮಹಾರಾಷ್ಟ್ರದ ಇನ್ನಿಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಸುದ್ದಿ ತಿಳಿದು ಮೃತ ಯೋಧರ ಸಂಬಂಧಿಕರ, ಮಿತ್ರರ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.
ಯೋಧರು ಸೇನಾ ವಾಹನದಲ್ಲಿ ಸಾಗುತ್ತಿದ್ದರು. ವಾಹನವು ಕಿರಿದಾದ ರಸ್ತೆಯಿಂದ ಜಾರಿ ಅಂದಾಜು 150 ಅಡಿ ಆಳದ ಕಮರಿಗೆ ಉರುಳಿದ್ದರಿಂದ ಈ ಅಪಘಾತ ಸಂಭವಿಸಿದೆ. ನೀಲಂ ಪ್ರಧಾನ ಕಚೇರಿಯಿಂದ ಬಲ್ನೋಯಿ ಘೋರಾ ಪೋಸ್ಟ್ಗೆ ಈ ವಾಹನ ಬರುತ್ತಿತ್ತು, ಘೋರಾ ಪೋಸ್ಟ್ ಬಳಿ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.