ಪಟಿಯಾಲ: ಬಲಾತ್ಕಾರ ಪ್ರಕರಣದ ಸಂಬಂಧ ಆಮ್ ಆದ್ಮಿ ಪಕ್ಷದ ಶಾಸಕ ಹರ್ಮೀತ್ ಸಿಂಗ್ ಪಥನ್ ಮಜ್ರಾ ಅವರನ್ನು ಪಟಿಯಾಲ ಪೊಲೀಸರು ಇಂದು ಬಂಧಿಸಿದ್ದಾರೆ.
ಆದರೆ, ಅವರನ್ನು ಪೊಲೀಸ್ ಠಾಣೆಗೆ ಕರೆದೊಯ್ಯುತ್ತಿದ್ದಾಗ, ಶಾಸಕರ ಬೆಂಬಲಿಗರು ಮಾರ್ಗಮಧ್ಯದಲ್ಲಿ ಪೊಲೀಸರನ್ನು ತಡೆದು ಗುಂಡು ಹಾರಿಸಿದ್ದಾರೆ. ಈ ಘಟನೆಯಲ್ಲಿ ಒಬ್ಬ ಪೊಲೀಸ್ ಅಧಿಕಾರಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಬಳಿಕ, ಶಾಸಕರು ತಮ್ಮ ಸಹಚರರೊಂದಿಗೆ ಎರಡು ವಾಹನಗಳಲ್ಲಿ ಸ್ಥಳದಿಂದ ಪರಾರಿಯಾಗಿದ್ದಾರೆ.
ಎಚ್ಚೆತ್ತ ಪೊಲೀಸರು ಅವರನ್ನು ಬೆನ್ನಟ್ಟಿದರು ಮತ್ತು ಒಂದು ವಾಹನವನ್ನು ವಶಪಡಿಸಿಕೊಂಡರು, ಆದರೆ ಶಾಸಕರು ಅದರಲ್ಲಿ ಇರಲಿಲ್ಲ. ಅವರು ಮತ್ತೊಂದು ವಾಹನದಲ್ಲಿ ತಪ್ಪಿಸಿಕೊಂಡಿದ್ದು, ಪೊಲೀಸರು ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಬಂಧನಕ್ಕೆ ಮುನ್ನ ಫೇಸ್ಬುಕ್ನಲ್ಲಿ ವಿಡಿಯೋ
ಸನೌರ್ ಕ್ಷೇತ್ರದ ಶಾಸಕ ಹರ್ಮೀತ್ ಸಿಂಗ್ ಅವರು ಬಂಧನಕ್ಕೆ ಮುನ್ನ ಫೇಸ್ಬುಕ್ನಲ್ಲಿ ವಿಡಿಯೋ ಒಂದನ್ನು ಬಿಡುಗಡೆ ಮಾಡಿದ್ದರು. ಹಳೆಯ ಘಟನೆಯೊಂದಕ್ಕೆ ಸಂಬಂಧಿಸಿದಂತೆ ತಮ್ಮ ಮೇಲೆ ಬಲಾತ್ಕಾರದ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ವಿಡಿಯೋದಲ್ಲಿ ಹೇಳಿದ್ದಾರೆ.
ಪಂಜಾಬ್ ಪೊಲೀಸರು ತಮ್ಮ ವಿರುದ್ಧ ಐಪಿಸಿ ಸೆಕ್ಷನ್ 376 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿಸಿರುವ ಅವರು, ತಮ್ಮ ಮಾಜಿ ಪತ್ನಿ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಿದ್ದಾರೆ. ದೆಹಲಿಯ ಆಮ್ ಆದ್ಮಿ ನಾಯಕತ್ವವು ತಮ್ಮ ಮೇಲೆ ದಬ್ಬಾಳಿಕೆ ಮಾಡುತ್ತಿದೆ ಮತ್ತು ತಮ್ಮ ಧ್ವನಿಯನ್ನು ಅಡಗಿಸುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ಆರೋಪಿಸಿದ್ದಾರೆ.