Friday, June 20, 2025

ಸತ್ಯ | ನ್ಯಾಯ |ಧರ್ಮ

ಕೆಪಿಸಿಸಿ ವಕ್ತಾರರಾಗಿ ಆಯನೂರು ಮಂಜುನಾಥ್ ಆಯ್ಕೆ

ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಟಿಕೆಟ್ ವಂಚಿತರಾದ ಕಾರಣಕ್ಕೆ ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಯಾಗಿ, ಈಗ ಕಾಂಗ್ರೆಸ್ ಪಕ್ಷ ಸೇರಿರುವ ಹಿರಿಯ ನಾಯಕ ಆಯನೂರು ಮಂಜುನಾಥ್ ಅವರನ್ನು ಕಾಂಗ್ರೆಸ್ ಪಕ್ಷ ಕೆಪಿಸಿಸಿ ವಕ್ತಾರರನ್ನಾಗಿ ಘೋಷಿಸಿದೆ.

‘ಕಾಂಗ್ರೆಸ್‌ ಪಕ್ಷದ ವಿಚಾರಧಾರೆಗಳನ್ನು ಮತ್ತು ಸರ್ಕಾರದ ಯೋಜನೆಗಳನ್ನು ಮಾಧ್ಯಮಗಳಲ್ಲಿ ಬಿಂಬಿಸಬೇಕೆಂಬ ಉದ್ದೇಶದಿಂದ ಆಯನೂರು ಮಂಜುನಾಥ್‌ ಅವರಿಗೆ ಈ ಹೊಣೆಗಾರಿಕೆ ನೀಡಲಾಗಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಶಾಸಕರು, ವಿಧಾನ ಪರಿಷತ್ ಸದಸ್ಯರು, ಸಂಸದರು, ರಾಜ್ಯಸಭಾ ಸದಸ್ಯ ಹೀಗೆ ನಾನಾ ವಿಭಾಗಗಳಲ್ಲಿ ಕಾರ್ಯ ನಿರ್ವಹಿಸಿದ ಆಯನೂರು ಮಂಜುನಾಥ್, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಟಿಕೆಟ್ ಆಕಾಂಕ್ಷಿ ಆಗಿದ್ದರು. ಇದೇ ಕಾರಣಕ್ಕೆ ಬಿಜೆಪಿಯ ಹಾಲಿ ಶಾಸಕರಾಗಿದ್ದ ಕೆ.ಎಸ್.ಈಶ್ವರಪ್ಪನವರ ದ್ವೇಷದ ರಾಜಕೀಯದ ವಿರುದ್ಧ ಬಹಿರಂಗವಾಗಿ ಸಮರ ಸಾರಿದ್ದರು.

ಆ ನಂತರ ಪಕ್ಷ ಬಿಡುವ ಬಗ್ಗೆ ಇಂಗಿತ ವ್ಯಕ್ತಪಡಿಸಿ, ಜೆಡಿಎಸ್ ಕಡೆಗೆ ಮುಖ ಮಾಡಿ, ಅಲ್ಲಿ ಜೆಡಿಎಸ್ ಟಿಕೆಟನ್ನೂ ಪಡೆದು ಜೆಡಿಎಸ್ ಅಭ್ಯರ್ಥಿಯಾಗಿದ್ದರು. ಆಯನೂರು ಮಂಜುನಾಥ್ ಬಿಜೆಪಿ ವಿರುದ್ಧದ ಪ್ರಬಲ ಅಭ್ಯರ್ಥಿಯಾಗಿದ್ದರೂ ಚುನಾವಣೆಯಲ್ಲಿ ಕೆಲಸ ಮಾಡಲು ಸಮಯಾವಕಾಶದ ಕೊರತೆ ಇತ್ತು.

ಅಷ್ಟೆ ಅಲ್ಲದೆ ಚುನಾವಣಾ ಸಂದರ್ಭದಲ್ಲೇ ಕಾಂಗ್ರೆಸ್ ಸೇರುವ ಬಗ್ಗೆ ತನ್ನ ಆಪ್ತರಲ್ಲಿ ಹೇಳಿಕೊಂಡಿದ್ದ ಆಯನೂರು ಮಂಜುನಾಥ್, ಕಾಂಗ್ರೆಸ್ ಪಕ್ಷದಲ್ಲಿರುವ ಕೆಲವರು ಇವರನ್ನು ಸಂಪರ್ಕಿಸಲು ಹಿಂದೇಟು ಹಾಕಿದ್ದ ಹಿನ್ನೆಲೆಯಲ್ಲಿ ಕೊನೆಯ ಕ್ಷಣದಲ್ಲಿ ಜೆಡಿಎಸ್ ಸೇರ್ಪಡೆ ಆಗಿದ್ದರು.

ಚುನಾವಣೆಯಲ್ಲಿ ಸೋಲು ಕಂಡ ಕಾರಣ ಕಾಂಗ್ರೆಸ್‌ ಕದ ತಟ್ಟಿದ್ದ ಆಯನೂರು ಮಂಜುನಾಥ್, ವಿಧಾನ ಪರಿಷತ್‌ಗೆ ನೈರುತ್ಯ ಪದವೀಧರ ಕ್ಷೇತ್ರದಿಂದ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯೂ ಆಗಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page