Home ರಾಜ್ಯ ಬಾಗಲಕೋಟೆ ಬಾಗಲಕೋಟೆ ಉಪಚುನಾವಣೆ: ಶಕ್ತಿ ಪ್ರದರ್ಶನದ ನಡುವೆ ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಬಾಗಲಕೋಟೆ ಉಪಚುನಾವಣೆ: ಶಕ್ತಿ ಪ್ರದರ್ಶನದ ನಡುವೆ ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

0

ಬಾಗಲಕೋಟೆ: ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾದ ಸೋಮವಾರ, ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗಾಗಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಮತ್ತು ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರು ಬೃಹತ್ ಶಕ್ತಿ ಪ್ರದರ್ಶನದ ನಡುವೆ ತಮ್ಮ ನಾಮಪತ್ರಗಳನ್ನು ಸಲ್ಲಿಸಿದರು.

ಇಬ್ಬರೂ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆಗೂ ಮುನ್ನ ಬೃಹತ್ ಮೆರವಣಿಗೆ ನಡೆಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಸಂಸದರಾದ ಜಗದೀಶ್ ಶೆಟ್ಟರ್, ಪಿ.ಸಿ. ಗದ್ದಿಗೌಡರ್ ಮತ್ತು ಗೋವಿಂದ ಕಾರಜೋಳ ಸೇರಿದಂತೆ ಹಲವು ಗಣ್ಯರ ಸಮ್ಮುಖದಲ್ಲಿ ಚರಂತಿಮಠ ಅವರು ನಾಮಪತ್ರ ಸಲ್ಲಿಸಿದರು.

ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಸತೀಶ್ ಜಾರಕಿಹೊಳಿ, ಶಿವಾನಂದ ಪಾಟೀಲ್ ಮತ್ತು ಆರ್.ಬಿ. ತಿಮ್ಮಾಪುರ ಅವರ ಉಪಸ್ಥಿತಿಯಲ್ಲಿ ಜಿಲ್ಲಾ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ಶಾಸಕ ಎಚ್.ವೈ. ಮೇಟಿ ಅವರ ನಿಧನದಿಂದಾಗಿ ಬಾಗಲಕೋಟೆ ಉಪಚುನಾವಣೆ ಅನಿವಾರ್ಯವಾಗಿದೆ.

ಕಾಂಗ್ರೆಸ್ ನುಡಿದಂತೆ ನಡೆದಿದೆ: ಸಿಎಂ

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿ ಬಾಗಲಕೋಟೆ ಸ್ಥಾನವನ್ನು ಉಳಿಸಿಕೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

“ಬಿಜೆಪಿ ನಾಯಕರು ಸುಳ್ಳು ಹರಡುವುದರಲ್ಲಿ ನಿಪುಣರು. 2018ರ ಚುನಾವಣಾ ಪ್ರಣಾಳಿಕೆಯಲ್ಲಿ ಬಿಜೆಪಿ 600 ಭರವಸೆಗಳನ್ನು ನೀಡಿತ್ತು, ಆದರೆ ಅವರು ಅದರಲ್ಲಿ ಶೇ. 10 ರಷ್ಟನ್ನೂ ಈಡೇರಿಸಲಿಲ್ಲ” ಎಂದು ಅವರು ಟೀಕಿಸಿದರು.

“ಬಿಜೆಪಿಯವರು ತಮ್ಮನ್ನು ಹಿಂದೂ ಹೆಮ್ಮೆಯ ವಾರಸುದಾರರು ಎಂದು ಬಿಂಬಿಸಿಕೊಳ್ಳುತ್ತಾರೆ. ನಾನು ಹಿಂದೂ, ಉಮೇಶ್ ಮೇಟಿ ಕೂಡ ಹಿಂದೂ. ಅವರು (ಬಿಜೆಪಿ) ಬಡವರು, ಹಿಂದುಳಿದ ವರ್ಗಗಳು ಮತ್ತು ದಲಿತರ ವಿರೋಧಿಗಳು. ಅವರು ಗ್ಯಾರಂಟಿಗಳನ್ನು ಟೀಕಿಸುತ್ತಾರೆ, ಆದರೆ ಅಧಿಕಾರದಲ್ಲಿದ್ದಾಗ ಒಂದು ಬಡಪರ ಕಾರ್ಯಕ್ರಮವನ್ನೂ ಜಾರಿಗೆ ತರಲಿಲ್ಲ” ಎಂದು ಅವರು ಆರೋಪಿಸಿದರು. ಕಾಂಗ್ರೆಸ್ ಪಕ್ಷವು ನುಡಿದಂತೆ ನಡೆದಿದೆ. ಕಾಂಗ್ರೆಸ್ ಮಾತ್ರ ಸಾಮಾಜಿಕ ನ್ಯಾಯ ಒದಗಿಸಲು ಸಾಧ್ಯ ಎಂದು ಅವರು ಹೇಳಿದರು.

ಇದೇ ವೇಳೆ ಮಾತನಾಡಿದ ಶಿವಕುಮಾರ್, ಬಾಗಲಕೋಟೆ ಉಪಚುನಾವಣೆಯು ಧರ್ಮ ಮತ್ತು ಅಧರ್ಮದ ನಡುವಿನ ಹೋರಾಟ ಎಂದರು.

2028ರ ವಿಧಾನಸಭಾ ಚುನಾವಣೆಗೆ ಮುನ್ಸೂಚನೆ: ಬಿವೈವಿ

ಸಾರ್ವಜನಿಕ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಬಿ.ವೈ. ವಿಜಯೇಂದ್ರ, “ಕಾಂಗ್ರೆಸ್ ಹೇಗೆ ಚುನಾವಣೆ ಎದುರಿಸುತ್ತದೆ ಎಂಬುದು ನನಗೆ ಗೊತ್ತು. ಮುಖ್ಯಮಂತ್ರಿಗಳು ಮತ್ತು ಅವರ ಸಂಪುಟದ ಸಹೋದ್ಯೋಗಿಗಳು ಕ್ಷೇತ್ರದಲ್ಲಿ ಮೊಕ್ಕಾಂ ಹೂಡಿ, ಗನ್ನಿ ಬ್ಯಾಗ್‌ಗಳಲ್ಲಿ ಹಣ ತರುತ್ತಾರೆ… ಇದನ್ನು ನಾನು ಶಿರಾ ಮತ್ತು ಕೆ.ಆರ್. ಪೇಟೆ ಉಪಚುನಾವಣೆಯಲ್ಲಿ ನೋಡಿದ್ದೇನೆ. ಬಾಗಲಕೋಟೆಯಲ್ಲೂ ಅವರು ಅದನ್ನೇ ಮಾಡುತ್ತಾರೆ. ವಾಲ್ಮೀಕಿ ನಿಗಮ ಮತ್ತು ಎಸ್‌ಸಿ/ಎಸ್‌ಟಿ ಅನುದಾನದಿಂದ ಲೂಟಿ ಮಾಡಿದ ಹಣವನ್ನು ಅವರು ತರುತ್ತಾರೆ. ಹಣದ ಬಲಕ್ಕೆ ಬಲಿಯಾಗಬೇಡಿ” ಎಂದು ಹೇಳಿದರು.

ಜನರು ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದಿಂದ ಬೇಸತ್ತಿದ್ದಾರೆ. ಬಾಗಲಕೋಟೆಯ ಜನರು ಬಿಜೆಪಿಯನ್ನು ಬೆಂಬಲಿಸಲಿದ್ದಾರೆ. ಈ ಉಪಚುನಾವಣೆಗಳು 2028ರ ವಿಧಾನಸಭಾ ಚುನಾವಣೆಗೆ ಮುನ್ಸೂಚನೆ ಎಂದು ವಿಜಯೇಂದ್ರ ಹೇಳಿದರು.

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾತನಾಡಿ, ಮತದಾರರು ಬಾಗಲಕೋಟೆಯಲ್ಲಿ ಮಗನನ್ನು ಮತ್ತು ದಾವಣಗೆರೆಯಲ್ಲಿ ಮೊಮ್ಮಗನನ್ನು ಮನೆಗೆ ಕಳುಹಿಸಲಿದ್ದಾರೆ ಎಂದರು. “ಒಗ್ಗಟ್ಟಿನ ಕೊರತೆಯಿಂದಾಗಿ ಪಕ್ಷವು ಬಾಗಲಕೋಟೆಯಲ್ಲಿ ಸೋತಿತ್ತು, ಆದರೆ ಈ ಬಾರಿ ಚರಂತಿಮಠ ಅವರು ಗೆಲುವಿನ ಗೆರೆ ದಾಟಲು ನಾವು ಸಂಘಟಿತ ಪ್ರಯತ್ನ ಮಾಡುತ್ತೇವೆ” ಎಂದು ಅವರು ಹೇಳಿದರು.

You cannot copy content of this page

Exit mobile version