ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯದ ಮೇಲೆ ಪೋಕ್ಸೋ ಕಾಯ್ದೆಯ ಅಡಿಯಲ್ಲಿ ಬಂಧನಕ್ಕೆ ಒಳಗಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿಗಳ ಜಾಮೀನು ಅರ್ಜಿ ಸೆಪ್ಟೆಂಬರ್ 14ರ ಬುಧವಾರಕ್ಕೆ ಮತ್ತೆ ಮುಂದೂಡಲ್ಪಟ್ಟಿದೆ.
ಚಿತ್ರದುರ್ಗದ ಜೈಲಿನಲ್ಲಿ 14 ದಿನಗಳ ನ್ಯಾಯಾಂಗ ಬಂಧನದಲ್ಲಿ ಇರುವ ಶಿವಮೂರ್ತಿಗಳ ಜೈಲು ವಾಸ ನಾಳೆಗೆ ಮುಕ್ತಾಯವಾಗುತ್ತಿರುವ ಹಿನ್ನೆಲೆಯಲ್ಲಿ ನಾಳಿನ ಜಾಮೀನು ಅರ್ಜಿ ವಿಚಾರಣೆ ಮಹತ್ವ ಪಡೆದುಕೊಂಡಿದೆ.
ಜಿಲ್ಲಾ ನ್ಯಾಯಾಲಯದಲ್ಲಿ ನಾಳೆ ನ್ಯಾಯಾಂಗ ಬಂಧನ ವಿಸ್ತರಣೆ ಅಥವಾ ಜಾಮೀನು ಸಿಗಬಹುದೇ ಎಂಬುದು ನಿರ್ಧಾರವಾಗಲಿದೆ. ಈ ನಡುವೆ ಶಿವಮೂರ್ತಿಗಳ ವಕೀಲರು ಶಿವಮೂರ್ತಿಗಳ ಅನಾರೋಗ್ಯದ ಕಾರಣ ಕೊಟ್ಟು ಅವರನ್ನು ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಿಸುವ ಸಾಧ್ಯತೆ ಇದೆ. ಈಗಾಗಲೇ ಹೃದಯ ಸಂಬಂಧಿ ಕಾಯಿಲೆ ಬಗ್ಗೆ ನ್ಯಾಯಾಲಯಕ್ಕೆ ಮನವಿ ಮಾಡಲಾಗಿದೆ. ಇದಕ್ಕೆ ಸರ್ಕಾರಿ ಅಭಿಯೋಜಕರು ಆಕ್ಷೇಪಣೆಯನ್ನೂ ಸಲ್ಲಿಸಿದ್ದಾರೆ.
ಇವೆಲ್ಲವುಗಳ ಹಿನ್ನೆಲೆಯಲ್ಲಿ ನಾಳಿನ ಜಾಮೀನು ಅರ್ಜಿ ವಿಚಾರಣೆ ಮತ್ತು ಶಿವಮೂರ್ತಿಗಳ ಬೆಂಗಳೂರು ಜಯದೇವ ಆಸ್ಪತ್ರೆಗೆ ವರ್ಗಾವಣೆ ಮಾಡುವ ಅರ್ಜಿ ವಿಚಾರಣೆ ಮಹತ್ವ ಪಡೆದುಕೊಂಡಿದೆ.