ರಾಮನಗರ : ರಾಮನಗರದಲ್ಲಿ (Ramanagar ) ಸರ್ಕಾರಿ ಅಧಿಕಾರಿಗೆ ಅವಮಾನ ಮಾಡಿದ್ದ ಕೇಸ್ ಗೆ ಸಂಬಂಧಪಟ್ಟಂತೆ ಶಾಸಕ ಮಾಗಡಿ ಬಾಲಕೃಷ್ಣ (magadi balakrishna) ಕ್ಷಮೆ ಕೋರಿದ್ದಾರೆ.
ಮಾಗಡಿ ತಹಶೀಲ್ದಾರ್ಗೆ ಜನರಿಂದ ಚಪ್ಪಲಿಯಲ್ಲಿ ಹೊಡೆಸುತ್ತೇನೆ ಎಂದಿದ್ದ ಶಾಸಕ ಹೆಚ್.ಸಿ.ಬಾಲಕೃಷ್ಣ ಇದೀಗ ತಹಶೀಲ್ದಾರ್ ಶರತ್ ಕುಮಾರ್ ಬಳಿ ಕ್ಷಮೆಕೋರಿದ್ದಾರೆ. ನಿನ್ನೆಯಷ್ಟೇ ಸಾರ್ವಜನಿಕರು ಅಹವಾಲು ಸ್ವೀಕರಿಸುವ ವೇಳೆ ತಹಶೀಲ್ದಾರ್ಗೆ ತರಾಟೆ ತೆಗೆದುಕೊಂಡಿದ್ದ ಶಾಸಕಕೆಲಸ ಮಾಡದಿದ್ದರೆ ಜನರಿಂದ ಚಪ್ಪಲಿಯಲ್ಲಿ ಹೊಡೆಸುತ್ತೇನೆ ಎಂದಿದ್ದರು. ಈ ಬಗ್ಗೆ ಸಾಕಷ್ಟು ಟೀಕೆಗಳೂ ಕೂಡ ವ್ಯಕ್ತವಾಗಿತ್ತು.
ಭಾನುವಾರ ಸರ್ಕಾರಿ ನೌಕರರ ತಾಲೂಕು ಕ್ರೀಡಾಕೂಟ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಶಾಸಕ ಅದೇ ವೇದಿಕೆಯಲ್ಲಿದ್ದ ತಹಶೀಲ್ದಾರ್ಗೆ ಸಾರಿ ಎಂದಿದ್ದಾರೆ.
ತಹಶೀಲ್ದಾರ್ ರೈತರ ಸಮಸ್ಯೆ ಬಗೆಹರಿಸದಿದ್ದರೆ ಹೇಗೆ? ಹಳ್ಳಿಗಾಡಿನಿಂದ ಬಂದಿರುವ ನಾನು ಸಹಜವಾಗಿ ಆಡುಭಾಷೆಯಲ್ಲಿ ನೇರವಾಗಿ ಮಾತನಾಡಿದ್ದೇನೆ. ನಿಮ್ಮ ಮನಸ್ಸಿಗೆ ನೋವಾಗಿದ್ದರೆ ಕ್ಷಮಿಸಿ. ಜನರಿಗೆ ನ್ಯಾಯ ಕೊಡುವ ಕೆಲಸ ಮಾಡಬೇಕು. ಜನರು ಅಧಿಕಾರಿಗಳನ್ನು ಬೈಯ್ಯುವುದಿಲ್ಲ, ನನ್ನನ್ನು ಬೈಯ್ಯುತ್ತಾರೆ. ಯಾರಿಗೂ ಮನಸ್ಸಿಗೆ ನೋವಾಗುವಂತೆ ಬೈಯ್ಯುವ ಉದ್ದೇಶ ಇರಲಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಜನತೆಗೆ ನ್ಯಾಯ ಸಿಗಬೇಕು ಎಂಬುವುದು ನನ್ನ ಉದ್ದೇಶ. ಅಧಿಕಾರಿಗಳನ್ನು ಬೈಯ್ಯುವ ವಿಚಾರ ಮನಸ್ಸಿನಲ್ಲಿ ಖಂಡಿತ ಇಲ್ಲ. ಈ ಎಲ್ಲ ನೋವಿನಿಂದ ತಹಶೀಲ್ದಾರ್ ಶರತ್ ಕುಮಾರ್ ಅವರಿಗೆ ಬೈದಿದ್ದೇನೆ ಅಷ್ಟೆ. ಬೇರೆ ವಿಚಾರ ಮನಸ್ಸಿನಲ್ಲಿ ಇಟ್ಟುಕೊಂಡು ಮಾತನಾಡಿಲ್ಲ ಎಂದು ಹೇಳಿದ್ದಾರೆ.
