ಹಾಸನ: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ವಿವಿಧ ಬೇಡಿಕೆಗಳನ್ನು ಮುಂಬರುವ ರಾಜ್ಯ ಬಜೆಟ್ನಲ್ಲಿ ಈಡೇರಿಸುವಂತೆ ಒತ್ತಾಯಿಸಿ ಮಾ.2ರಂದು ಫ್ರೀಡಂ ಪಾರ್ಕ್ ನಲ್ಲಿ ಬೆಂಗಳೂರು ಚಲೋ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಎಐಟಿಯುಸಿ ಜಿಲ್ಲಾಧ್ಯಕ್ಷೆ ಜಯಲಕ್ಷ್ಮಿ ತಿಳಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಬಜೆಟ್ ಪೂರ್ವ ಪ್ರತಿಭಟನೆ ಆಯೋಜಿಸಲಾಗಿದ್ದು, ಜಿಲ್ಲೆಯಾದ್ಯಂತದಿಂದ ಎರಡು ಸಾವಿರಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಭಾಗವಹಿಸಲಿದ್ದಾರೆ ಎಂದರು. ರಾಜ್ಯ ಸರ್ಕಾರದ ಆರನೇ ಗ್ಯಾರಂಟಿ ಭರವಸೆಯಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ ರೂ.15,000 ಹಾಗೂ ಸಹಾಯಕಿಯರಿಗೆ ರೂ.10,000 ಗೌರವಧನ ಹೆಚ್ಚಳ ಜಾರಿಗೊಳಿಸುವುದು ಸೇರಿದಂತೆ ವಿವಿಧ ಪ್ರಮುಖ ಬೇಡಿಕೆಗಳನ್ನು ಮುಂದಿರಿಸಲಾಗಿದೆ ಎಂದು ಹೇಳಿದರು.
2011ರಿಂದ ನಿವೃತ್ತರಾಗಿರುವ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ನೀಡಬೇಕು. ಈಗಾಗಲೇ ಸ್ವಯಂ ನಿವೃತ್ತಿಯಾಗಿರುವವರಿಗೂ ಈ ಸೌಲಭ್ಯ ವಿಸ್ತರಿಸಬೇಕು ಎಂದು ಒತ್ತಾಯಿಸಿದರು. ಅಂಗನವಾಡಿ ಕಾರ್ಯಕರ್ತೆಯರ ಮೇಲೆ ಬಲವಂತವಾಗಿ ಬಿ.ಎಲ್.ಒ. ಜವಾಬ್ದಾರಿ ಹೊರಿಸುವುದನ್ನು ನಿಲ್ಲಿಸಬೇಕು. ಬಿ.ಎಲ್.ಒ. ಕರ್ತವ್ಯ ನಿರಾಕರಿಸಿದವರ ವಿರುದ್ಧ ಕೈಗೊಳ್ಳುತ್ತಿರುವ ಅಮಾನತು ಕ್ರಮಗಳನ್ನು ತಕ್ಷಣ ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಎಲ್ಜಿ-ಯುಕೆಜಿ ಪ್ರಾರಂಭಿಸಲು ಅವಕಾಶ ನೀಡಿರುವುದರಿಂದ ಅಂಗನವಾಡಿ ಕೇಂದ್ರಗಳಿಗೆ ಮಕ್ಕಳ ದಾಖಲಾತಿ ಕುಸಿಯುತ್ತಿದೆ. ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಮೂಲ ಆಶಯಗಳನ್ನು ಉಳಿಸಲು ಅಂಗನವಾಡಿಗಳಲ್ಲೇ ಎಲ್ಜಿ-ಯುಕೆಜಿ ತರಗತಿಗಳನ್ನು ಆರಂಭಿಸಬೇಕು ಎಂದು ಹೇಳಿದರು.
