ಇಂದು ಬ್ಯಾಂಕ್ ನೌಕರರ ಮುಷ್ಕರ: 5 ದಿನಗಳ ಕೆಲಸದ ವಾರಕ್ಕೆ ಪಟ್ಟು, ಸತತ ರಜೆಗಳಿಂದ ಗ್ರಾಹಕರಿಗೆ ಸೇವೆಯಲ್ಲಿ ವ್ಯತ್ಯಯ

ದೀರ್ಘಕಾಲದಿಂದ ಬಾಕಿ ಉಳಿದಿರುವ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬ್ಯಾಂಕ್ ಒಕ್ಕೂಟಗಳು ಶುಕ್ರವಾರ ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿವೆ. ಶನಿವಾರ, ಭಾನುವಾರ ಹಾಗೂ ಸೋಮವಾರ ವಿನಾಯಕ ಚತುರ್ಥಿ ರಜೆ ಇರುವುದರಿಂದ ಸತತ ನಾಲ್ಕು ದಿನಗಳ ಕಾಲ ಬ್ಯಾಂಕಿಂಗ್ ಸೇವೆಗಳಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ.

ವಾರಕ್ಕೆ ಐದು ದಿನಗಳ ಬ್ಯಾಂಕಿಂಗ್ ವ್ಯವಸ್ಥೆ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (ಯುಎಫ್‌ಬಿಯು) ಈ ತಿಂಗಳ 11ರಂದು ರಾಷ್ಟ್ರವ್ಯಾಪಿ ಮುಷ್ಕರ ನಡೆಸುತ್ತಿದ್ದು, ತಮ್ಮ ಶಾಖೆಗಳ ಕಾರ್ಯನಿರ್ವಹಣೆಯಲ್ಲಿ ವ್ಯತ್ಯಯವಾಗಬಹುದು ಎಂದು ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್‌ಬಿಐ) ತಿಳಿಸಿದೆ. ನಗದು ಅಗತ್ಯಗಳಿಗಾಗಿ ಎಟಿಎಂಗಳು ಮತ್ತು ನಗದು ಠೇವಣಿ ಯಂತ್ರಗಳನ್ನು (ಸಿಡಿಎಂ) ಬಳಸಿಕೊಳ್ಳುವಂತೆ ಗ್ರಾಹಕರಿಗೆ ಸಲಹೆ ನೀಡಲಾಗಿದೆ.

ಬ್ಯಾಂಕುಗಳ ಕಾರ್ಯಕ್ಷಮತೆ ಆಧಾರಿತ ಪ್ರೋತ್ಸಾಹಧನ ನೀತಿಯನ್ನು ಮರುಪರಿಶೀಲಿಸಬೇಕು ಮತ್ತು ಬ್ಯಾಂಕುಗಳ ಖಾಸಗೀಕರಣ ಪ್ರಯತ್ನಗಳನ್ನು ಕೈಬಿಡಬೇಕು ಎಂಬ ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಯುಎಫ್‌ಬಿಯು ಈ ಮುಷ್ಕರಕ್ಕೆ ಕರೆ ಕೊಟ್ಟಿದೆ. ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಸೆಪ್ಟೆಂಬರ್ 28, 29 ಮತ್ತು 30ರಂದು ಮತ್ತೊಮ್ಮೆ ಮುಷ್ಕರ ನಡೆಸುವುದಾಗಿ ಹಾಗೂ ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಅಕ್ಟೋಬರ್ 26ರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸುವುದಾಗಿ ಬ್ಯಾಂಕ್ ಒಕ್ಕೂಟಗಳು ಎಚ್ಚರಿಸಿವೆ.

Related Articles

ಇತ್ತೀಚಿನ ಸುದ್ದಿಗಳು