ತುಮಕೂರು: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ಸಂಸ್ಥಾಪಕ, ಕೇಂದ್ರದ ಮಾಜಿ ಸಚಿವ ಮುಲಾಯಂ ಸಿಂಗ್ ಯಾದವ್ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.
ಮುಲಾಯಂ ಸಿಂಗ್ ಯಾದವ್ ಅವರು ಒಬ್ಬ ಹುಟ್ಟು ಹೋರಾಟಗಾರ. ಜಾತ್ಯತೀತ ಸಿದ್ಧಾಂತದ ಮೇಲೆ ನಂಬಿಕೆ ಇಟ್ಟು, ಶೋಷಿತರ ಏಳಿಗೆಗಾಗಿ ತಮ್ಮ ಇಡೀ ಜೀವನವನ್ನೇ ಮುಡಿಪಿಟ್ಟರು. ಸಾಮಾನ್ಯ ಹಿನ್ನೆಲೆಯಿಂದ ಬಂದು ದೇಶದ ರಾಜಕೀಯದಲ್ಲಿ ತಮ್ಮದೇ ಆದ ಛಾಪು ಮೂಡಿಸುವ ಮಟ್ಟಿಗೆ ಬೆಳೆದು ನಿಂತ ನಾಯಕ ಮುಲಾಯಂ ಸಿಂಗ್ ಯಾದವ್ ಅವರು.
ಅವರು ಬೇರೆ ರಾಜಕೀಯ ಪಕ್ಷಗಳ ನಾಯಕರ ಜತೆ ಉತ್ತಮ ಬಾಂಧವ್ಯ ಹಾಗೂ ಗೌರವ ಸಂಪಾದಿಸಿದ್ದು, ಅವರ ವ್ಯಕ್ತಿತ್ವಕ್ಕೆ ಸಾಕ್ಷಿಯಾಗಿದೆ. ಸಮಾಜವಾದಿ ಚಿಂತನೆಗಳ ಪರ ನಿಂತಿದ್ದ ಧೀಮಂತ ನಾಯಕನ ಅಗಲಿಕೆ ಇಡೀ ದೇಶಕ್ಕೆ ತುಂಬಲಾರದ ನಷ್ಟ.

ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆ ನೋವು ಭರಿಸುವ ಶಕ್ತಿ ಅವರ ಕುಟುಂಬ ಸದಸ್ಯರು, ಮಿತ್ರರು ಹಾಗೂ ಅಭಿಮಾನಿಗಳಿಗೆ ಕರುಣಿಸಲಿ ಎಂದು ಆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ’ ಎಂದು ಶಿವಕುಮಾರ್ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.