ಹಾಜಿಪುರ: ಧಾರ್ಮಿಕ ಮೆರವಣಿಗೆ ನಡೆಯುತ್ತಿರುವ ಸಂದರ್ಭದಲ್ಲಿ ವೇಗವಾಗಿ ಬಂದ ಟ್ರಕ್, ನಿಯಂಣತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 12 ಜನರು ಸಾವನ್ನಪ್ಪಿರುವ ಘಟನೆ ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ಭಾನುವಾರ ಸಂಜೆ ನಡೆದಿದೆ.
ಈ ಕುರಿತು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದು, ಬಿಹಾರ ರಾಜಧಾನಿಯಿಂದ ಸುಮಾರು 30 ಕಿ.ಮೀ ದೂರದಲ್ಲಿರುವ ಉತ್ತರ ಬಿಹಾರ ಜಿಲ್ಲೆಯ ದೇಸ್ರಿ ಪೊಲೀಸ್ ಠಾಣೆ ಪ್ರದೇಶದ ಬಳಿ ರಾತ್ರಿ 9 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎಂದು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಅಪಘಾತದ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ಸಾವನ್ನಪ್ಪಿರುವ ಕುಟುಂಬಕ್ಕೆ ₹ 2 ಲಕ್ಷ ಮತ್ತು ಗಾಯಾಳುಗಳಿಗೆ ತಲಾ ₹ 50,000 ಪರಿಹಾರವನ್ನು ಘೋಷಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಬಿಹಾರದ ವೈಶಾಲಿಯಲ್ಲಿ ನಡೆದ ಅಪಘಾತವು ದುಃಖಕರವಾಗಿದ್ದು, ದುಃಖತಪ್ತ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಹಾಗೂ ಗಾಯಗೊಂಡವರು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಆರೈಸಿದ್ದಾರೆ. ನಂತರ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ (PMNRF)ನಿಂದ 2 ಲಕ್ಷ ರೂ.ಗಳ ಪರಿಹಾರವನ್ನು ಮೃತರ ಕುಟುಂಬಗಳಿಗೆ ನೀಡಲಾಗುತ್ತಿದ್ದು, ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೂಡ ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ಅಪಘಾತವಾಗಿರುವುದು ʼಅತ್ಯಂತ ನೋವಿನ ಸಂಗತಿʼ ಎಂದು ಹೇಳಿದ್ದಾರೆ.
ಬಿಹಾರದ ವೈಶಾಲಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಕ್ಕಳು ಸೇರಿದಂತೆ ಹಲವರು ಸಾವನ್ನಪ್ಪಿದ ಸುದ್ದಿ ಅತ್ಯಂತ ನೋವಿನ ಸಂಗತಿಯಾಗಿದೆ. ಈ ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಈ ಘಟನೆ ನಡೆದ ಸ್ಥಳವು ಮಹುವಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರಿವ ಹಿನ್ನೆಲೆಯಲ್ಲಿ, ಆರ್ಜೆಡಿ ಶಾಸಕ ಮುಖೇಶ್ ರೋಶನ್ ಅವರು ಘಟನೆ ನಡೆದಿರುವ ಸ್ಥಳಕ್ಕೆ ಧಾವಿಸಿ, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಹಾಜಿಪುರದ (ಜಿಲ್ಲಾ ಕೇಂದ್ರ) ಸದರ್ ಆಸ್ಪತ್ರೆಗೆ ರವಾನಿಸಿದ್ದಾರೆ.
ನಂತರ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ʼಕನಿಷ್ಠ ಒಂಬತ್ತು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಅನೇಕರು ಗಾಯಗೊಂಡಿರುವ ಪರಿಣಾಮ, ಚಿಕಿತ್ಸೆಗೆ ಕರೆದೊಯ್ಯಲಾಗಿದ್ದು, ಮೂವರು ಮಾರ್ಗದ ಮಧ್ಯೆಯೇ ಸಾವನ್ನಪ್ಪಿದ್ದಾರೆ. ಹೀಗಾಗಿ ಯಾರ ಸ್ಥಿತಿ ಗಂಭೀರವಾಗಿದೆಯೋ ಅವರನ್ನು ಪಾಟ್ನಾದ ಆಸ್ಪತ್ರೆಗಳಿಗೆ ಕಳುಹಿಸಲಾಗುತ್ತಿದೆʼ ಎಂದು ಮಾಹಿತಿ ನೀಡಿದ್ದಾರೆ.
ವೈಶಾಲಿ ಪೊಲೀಸ್ ಅಧೀಕ್ಷಕ ಮನೀಶ್ ಕುಮಾರ್ ಮಾತನಾಡಿ, ʼಮದುವೆಗಳಿಗೆ ಸಂಬಂಧಿಸಿದ ಸಂಪ್ರದಾಯದ ಭಾಗವಾಗಿ ಮೆರವಣಿಗೆಯನ್ನು ನಡೆಸಲಾಗಿತ್ತು, ಹತ್ತಿರದ ಸುಲ್ತಾನಪುರ ಗ್ರಾಮದ ನಿವಾಸಿಯೊಬ್ಬರ ಮನೆಯಲ್ಲಿ ಕೆಲವೇ ದಿನಗಳಲ್ಲಿ ಮದುವೆ ನಿಶ್ಚಯವಾಗಿತ್ತು. ಪಕ್ಕದ ಮಹ್ನಾರ್-ಹಾಜಿಪುರ ಹೆದ್ದಾರಿಯಲ್ಲಿ ವೇಗವಾಗಿ ಚಲಿಸುತ್ತಿದ್ದ ಟ್ರಕ್ ನ ಚಾಲಕ ನಿಯಂತ್ರಣ ಕಳೆದುಕೊಂಡಿದ್ದರಿಂದ ಈ ಅಪಘಾತ ಸಂಭವಿಸಿದ್ದು, ಚಾಲಕ ಕೂಡ ಟ್ರಕ್ ಒಳಗೆ ಸಿಕ್ಕಿಹಾಕಿಕೊಂಡಿದ್ದಾನೆ. ಹಾಗೆಯೇ ಅವನು ಜೀವಂತವಾಗಿರುವ ಯಾವುದೇ ಲಕ್ಷಣಗಳು ಕಂಡುಬರುತ್ತಿಲ್ಲ. ಘಟನೆಯಲ್ಲಿ ಕನಿಷ್ಠ ನಾಲ್ಕು ಮಕ್ಕಳು ಸಾವನ್ನಪಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆಂದು ತಿಳಿಸಿದ್ದಾರೆ.
ʼರಕ್ಷಣಾ ಕಾರ್ಯವನ್ನು ಮುಂದುವರೆಸಲು ಮತ್ತು ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯನ್ನು ನಿಯಂತ್ರಣದಲ್ಲಿಡಲು ನಾವು ಪಕ್ಕದ ಹಲವಾರು ಪೊಲೀಸ್ ಠಾಣೆಗಳಿಂದ ಸಿಬ್ಬಂದಿಯನ್ನು ಕರೆಸಿದ್ದೇವೆ” ಎಂದು ಎಸ್ಪಿ ಹೇಳಿದ್ದಾರೆ.
ಏತನ್ಮಧ್ಯೆ, ಉಪ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಅಪಘಾತದ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ಅಪಘಾತದಲ್ಲಿ ಗಾಯಗೊಂಡವರಿಗೆ ಸರಿಯಾದ ಚಿಕಿತ್ಸೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಸಾವನ್ನಪಿರುವವರ ಕುಟುಂಬಕ್ಕೆ ನಿಯಮಗಳ ಪ್ರಕಾರ ಪರಿಹಾರವನ್ನು ವಿತರಿಸಲು ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು, ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.