ರಾಜ್ಯದಲ್ಲಿ ಇಂದಿನಿಂದ ಬೈಕ್ ಟ್ಯಾಕ್ಸಿ ಸೇವೆ ಬಂದ್

ಬೈಕ್‌ ಟ್ಯಾಕ್ಸಿ ಸೇವೆ ಮುಂದುವರಿಕೆಗೆ ಪೂರಕವಾದ ಮಧ್ಯಂತರ ಪರಿಹಾರ ನೀಡಲು ನ್ಯಾಯಪೀಠ ನಿರಾಕರಿಸಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದಿನಿಂದ ಓಲಾ ಉಬರ್ ಸೇರಿದಂತೆ ಬೈಕ್‌ ಟ್ಯಾಕ್ಸಿ ಸೇವೆ ಬಂದ್ ಆಗಲಿದೆ. ಈ ಹಿಂದೆ ಬೈಕ್‌ ಟ್ಯಾಕ್ಸಿ ಸೇವೆ ಸ್ಥಗಿತಗೊಳಿಸಿದ್ದ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿ ವಿಚಾರಣೆಯನ್ನು ಹೈಕೋರ್ಟ್‌ ವಿಭಾಗೀಯ ಪೀಠ ಜೂನ್‌ 24ಕ್ಕೆ ನಿಗದಿ ಪಡಿಸಿದೆ.

ಮೋಟಾರು ವಾಹನ ಕಾಯ್ದೆಯ ನಿಯಮ ಗಳ ಪ್ರಕಾರವಾಗಿ ಹಳದಿ ನೋಂದಣಿ ಫ‌ಲಕ ಹೊಂದಿರುವ ಸಾರಿಗೆ ವಾಹನಗಳಂತೆ ಬೈಕ್‌ ಟ್ಯಾಕ್ಸಿಗೆ ಅನುಮತಿ ನೀಡಬೇಕು ಎಂಬು ದಾಗಿ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡ ಬೇಕು ಎಂದು ಕೋರಿ ಉಬರ್‌ ಇಂಡಿಯಾ ಸಿಸ್ಟಮ್ಸ್‌ ಪ್ರೈವೇಟ್‌ ಲಿಮಿಟೆಡ್‌, ರೊಪ್ಪೆನ್‌ ಟ್ರಾನ್ಸ್‌ಪೊರ್ಟೇಶನ್‌ ಸರ್ವೀಸಸ್‌ ಪ್ರೈವೇಟ್‌ ಲಿಮಿಟೆಡ್‌ ಮತ್ತು ಎಎನ್‌ಐ ಟೆಕ್ನಾಲಜೀಸ್‌ ಪ್ರೈವೇಟ್‌ ಲಿಮಿಟೆಡ್‌ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದವು.

ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಬೈಕ್‌ ಸೇವೆಯನ್ನು ಸ್ಥಗಿತಗೊಳಿಸಲು ಆದೇಶಿಸಿತ್ತು. ಮೇಲ್ಮನವಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯ ಮೂರ್ತಿ ವಿ.ಕಾಮೇಶ್ವರ ರಾವ್‌ ಮತ್ತು ನ್ಯಾಯ ಮೂರ್ತಿ ಸಿ.ಎಂ.ಜೋಶಿ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿದೆ.

ವಿಚಾರಣೆ ವೇಳೆ ಅಡ್ವೋಕೆಟ್‌ ಜನರಲ್‌ ಶಶಿಕಿರಣ್‌ ಶೆಟ್ಟಿ ವಾದಿಸಿ, ನಾಲ್ಕು ಚಕ್ರ ವಾಹನಗಳು ಮತ್ತು ಮೂರು ಚಕ್ರ ವಾಹನಗಳು ಅನುಮತಿ ಪಡೆದು ತೆರಿಗೆ ಪಾವತಿಸಿ ಬಾಡಿಗೆ ವಾಹನಗಳಾಗಿ ಕಾರ್ಯ ನಿರ್ವಹಿಸುತ್ತಿವೆ. ದ್ವಿ ಚಕ್ರವಾಹನಗಳು ಬಾಡಿಗೆ ವಾಹನಗಳಾಗಿ ಕಾರ್ಯಚರಿಸಲು ಸಾಧ್ಯವಿಲ್ಲ ಎಂದು ವಾದಿಸಿದ್ದರು.

ದ್ವಿಚಕ್ರ ವಾಹನಗಳು ಬಾಡಿಗೆ ವಾಹನಗಳಾಗಿ ಕಾರ್ಯಾಚರಣೆ ನಡೆಸಲು ದೇಶದಲ್ಲಿ 8 ರಾಜ್ಯಗಳಲ್ಲಿ ಮಾತ್ರ ಅನುಮತಿ ನೀಡಲಾಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದ್ದರು. ವಾದ ಆಲಿಸಿದ ನ್ಯಾಯಪೀಠ, ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿ ಮುಂದಿನ ವಿಚಾರಣೆಯನ್ನು ಜೂನ್‌ 24ಕ್ಕೆ ಮುಂದೂಡಿದೆ.

ಹಾಗೆಯೇ ಬೈಕ್‌ ಟ್ಯಾಕ್ಸಿ ಸೇವೆ ಮುಂದುವರಿಕೆಗೆ ಪೂರಕವಾದ ಮಧ್ಯಂತರ ಪರಿಹಾರ ನೀಡಲು ನ್ಯಾಯಪೀಠ ನಿರಾಕರಿಸಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದಿನಿಂದ ಬೈಕ್‌ ಟ್ಯಾಕ್ಸಿ ಸೇವೆ ಬಂದ್ ಆಗಲಿದೆ.

Related Articles

ಇತ್ತೀಚಿನ ಸುದ್ದಿಗಳು