Home ರಾಜ್ಯ ದಕ್ಷಿಣ ಕನ್ನಡ ಗಡಿಪಾರು ಪ್ರಕ್ರಿಯೆ ವಿರುದ್ಧ ಆಕ್ಷೇಪ ; ದ.ಕ ಪೊಲೀಸ್ ವರಿಷ್ಠಾಧಿಕಾರಿ ಭೇಟಿ ಮಾಡಿದ ಬಿಜೆಪಿ ನಿಯೋಗ

ಗಡಿಪಾರು ಪ್ರಕ್ರಿಯೆ ವಿರುದ್ಧ ಆಕ್ಷೇಪ ; ದ.ಕ ಪೊಲೀಸ್ ವರಿಷ್ಠಾಧಿಕಾರಿ ಭೇಟಿ ಮಾಡಿದ ಬಿಜೆಪಿ ನಿಯೋಗ

0

ಬಿಜೆಪಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ ನೇತೃತ್ವದ ಬಿಜೆಪಿಯ ನಿಯೋಗವು ಮಂಗಳೂರು ಪೊಲೀಸ್ ಕಮಿಷನರ್‌ ಸುಧೀರ್ ಕುಮಾರ್ ರೆಡ್ಡಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅರುಣ್ ಕೆ. ಅವರನ್ನು ಭೇಟಿ ಮಾಡಿ 36 ಮಂದಿ ಗಡಿಪಾರು ಪ್ರಕ್ರಿಯೆ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದೆ. ಉದ್ದೇಶಪೂರ್ವಕವಾಗಿ ಹಿಂದುತ್ವ ಕಾರ್ಯಕರ್ತರ ಗುರಿಯಾಗಿಸಿ ಮಾಡಿದ ಪಟ್ಟಿ ಇದು ಎಂದು ಬಿಜೆಪಿ ನಿಯೋಗ ಆರೋಪಿಸಿದೆ.

ಗಡೀಪಾರು ಮಾಡಲು ನೋಟಿಸ್ ನೀಡಿದ್ದು ಸರಿಯಲ್ಲ. ಹಿಂದುತ್ವಕ್ಕಾಗಿ ದುಡಿಯುತ್ತಿರುವವರನ್ನು ಕ್ರಿಮಿನಲ್‌ ರೀತಿ ಬಿಂಬಿಸುವುದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದೇವೆ. ಕಾರ್ಯಕರ್ತರ ಮನೆಗೆ ಪೊಲೀಸರು ವಿಚಾರಣೆ ನೆಪದಲ್ಲಿ ರಾತ್ರಿ ಹೊತ್ತಿನಲ್ಲಿ ಭೇಟಿ ನೀಡುವುದನ್ನು ನಿಲ್ಲಿಸಬೇಕು. ಈ ರೀತಿ ಮಾಡುವುದರಿಂದ ಜಿಲ್ಲೆಯಲ್ಲಿ ಶಾಂತಿ ಮರುಸ್ಥಾಪನೆ ಆಗದು ಎಂದು ಬಿಜೆಪಿ ನಿಯೋಗ ಆಕ್ಷೇಪ ವ್ಯಕ್ತಪಡಿಸಿದೆ.

‘ಇಂತಹ ಕ್ರಮ ಕೈಗೊಳ್ಳುವುದಕ್ಕೆ ಮುನ್ನ ಜಿಲ್ಲಾ ಉಸ್ತುವಾರಿ ಸಚಿವರು ಇಲ್ಲಿನ ಜನಪ್ರತಿನಿಧಿಗಳ ಜೊತೆ ಚರ್ಚಿಸಬೇಕಿತ್ತು. ಹಿಂದೆಲ್ಲ ಅಹಿತಕರ ಘಟನೆ ನಡೆದಾಗ ಸಚಿವರು ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಸಾಮಾಜಿಕ ಮುಖಂಡರ ಜೊತೆ ಸಮಾಲೋಚನೆ ನಡೆಸುತ್ತಿದ್ದರು. ಈ ಸಲ ಅಂತಹ ಯಾವುದೇ ಪ್ರಕ್ರಿಯೆ ನಡೆದಿಲ್ಲ. ಈ ಗಡಿಪಾರು ಪ್ರಕ್ರಿಯೆ ಮತ್ತು ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಎಫ್ಐಆರ್ ದಾಖಲು ಮಾಡಿರುವುದೂ ಸಹ ಜಿಲ್ಲೆಯಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಹೇರಿದಂತಿದೆ ಎಂದು ಬಿಜೆಪಿ ನಿಯೋಗ ಆಕ್ಷೇಪ ವ್ಯಕ್ತಪಡಿಸಿದೆ.

ಸಂಘ ಪರಿವಾರದ ಕಾರ್ಯಕರ್ತರ ಮನೋಬಲ ಕುಗ್ಗಿಸಲು ಸರ್ಕಾರ ಪೊಲೀಸ್ ಇಲಾಖೆಯ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಅಮಾನತು ಪಟ್ಟಿ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಕಛೇರಿಯಲ್ಲಿ ಸಿದ್ಧವಾಗಿದೆ. ಇದು ಕಾಂಗ್ರೆಸ್ ನ ದ್ವೇಷಪೂರಿತ ನಡೆ. ಇದನ್ನು ನಿಲ್ಲಿಸದಿದ್ದರೆ ಹೋರಾಟ ಅನಿವಾರ್ಯ. ಈ ಬಗ್ಗೆ ಪರಿವಾರದ ಸಂಘಟನೆಗಳು ಮತ್ತು ಬಿಜೆಪಿ ಜೊತೆಯಾಗಿ ನಿರ್ಧಾರ ತೆಗೆದುಕೊಳ್ಳಲಿದೆ. ಅಮಾಯಕರು, ಸಂಘ ಪರಿವಾರದ ಕಾರ್ಯಕರ್ತರ ಜತೆಯಲ್ಲಿ ಪಕ್ಷ ಸದಾ ನಿಲ್ಲಲಿದೆ ಎಂದು ನಿಯೋಗ ಹೇಳಿದೆ.

ಶಾಸಕರಾದ ಡಾ.ವೈ. ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ರಾಜೇಶ್ ನಾಯ್ಕ್ ಉಳಿಪಾಡಿ, ಹರೀಶ್ ಪೂಂಜ, ಭಾಗಿರಥಿ ಮುರುಳ್ಯ, ಬಿಜೆಪಿಯ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಯತೀಶ್ ಮತ್ತಿತರರು ನಿಯೋಗದಲ್ಲಿದ್ದರು.

You cannot copy content of this page

Exit mobile version